ಸೋಮವಾರ, ಸೆಪ್ಟೆಂಬರ್ 21, 2020

ಆ ಊರು...ಗದ್ದಲದ ನಡುವಣ ತಣ್ಣನೆಯ ಶೋಕ...

 ಆ ಊರು..

      ...ಗದ್ದಲದ ನಡುವಣ ತಣ್ಣನೆಯ ಶೋಕ...



ಎಲ್ಲಿ ನೋಡಿದರಲ್ಲಿ ಕಲ್ಲು, ಹೆಬ್ಬಂಡೆ.. ಉರಿ ಬಿಸಿಲು ಒಂದು ಕಡೆಯಾದರೆ , ಧೂಳಿನ ದಟ್ಟತೆ ಇನ್ನೊಂದು ಕಡೆ.. ಬಣ್ಣ ಕಳೆದುಕೊಂಡ ಗಿಡಮರದ ಎಲೆಗಳು ಹಸಿರಿಗಾಗಿ ಬಹುಶಃ ಮರುಗುತ್ತಿರಬಹುದು.. ಪುಟ್ಟ ಪುಟ್ಟ ಬೀದಿ, ಇಷ್ಟೆಂದರೇ ಇಷ್ಟೇ ಇರುವ ಓಣಿಗಳು.. ಸಗಣಿ‌ ಹಾಕಿ ಸಾರಿಸಲ್ಪಟ್ಟಿವೆ ಕೆಲವು ಕಡೆ, ಪುಟಾಣಿ ಮತ್ತು ಮಧ್ಯಮ ಗಾತ್ರದ ರಂಗೋಲಿಗಳು ಅಲ್ಲೇ ಎಲ್ಲೋ ಕಾಣಲ್ಪಡುತ್ತವೆ.. ಎಲ್ಲಾ ಬೀದಿಯನ್ನ ಹಬ್ಬಿಕೊಂಡಿರುವುದು ಅಂಗಡಿ ಮತ್ತು ಹೋಟೆಲ್ಗಳು.. ಜೊತೆಗೆ ಅತಿಥಿ ಗೃಹಗಳು.. ಎಲ್ಲಾ ವರ್ಗದ ( ಇದ್ದಲ್ಲಿ ) , ಎಲ್ಲಾ ಥರದ ಜನರಿಗೆ ಇಷ್ಟವಾಗುವ ಹಾಗೆ ಮಾಡಿಕೊಂಡ ಹಲವು ಕಸರತ್ತುಗಳ ನಡುವೆಯೂ ಈ ಊರು ಆಪ್ತವಾಗುತ್ತದೆ, ಇರುವಷ್ಟು ದಿನವೂ ಕೌತುಕವಾಗುತ್ತದೆ.. ರಸ್ತೆಯ ಪಕ್ಕ ಎಲ್ಲಿಂದಲೋ ಹಾರಿ ಬಂದು ಬಿದ್ದ ಕಲ್ಲೂ ತನ್ನದೇ ಕತೆಯ ಭಿತ್ತಿಪತ್ರ ಹಿಡಿದು ನಿಂತಿರುತ್ತದೆ.. ಆ ಊರಿನ ಎದೆಯ ಬೀದಿಯ ತಿರುವುಗಳಲ್ಲಿ ಒಮ್ಮೆ ಓಡಾಡೋಣ ಬನ್ನಿ..ಅರೇ, ಆ ಊರಾದ್ರೂ ಯಾವ್ದು ಅಂತಾನಾ?!..ಅದೇ, ಅಂಗಾಂಗ ಮುರಿದರೂ ಸಾವರಿಸಿ ಉಳಿದ ನಮ್ಮ ಹಂಪಿ.. 


ಇಡೀ ಜಗತ್ತಿಗೆ ಹೇಗೆ ಒಂದು ರೂಪ ಇದೆಯೋ ಹಾಗೆಯೇ ಒಂದು ನಗರಕ್ಕೆ ಕೂಡಾ.. ಅಂತೆಯೇ ಒಂದು ಊರಿಗೂ ಕೂಡ ಆಕಾರ ಮತ್ತು ಶ್ವಾಸ ಇದೆ.. ಯಾವುದೇ ಒಂದು ಊರು ಅಥವಾ ಒಂದು ಪ್ರದೇಶ ಅಲ್ಲಿನ ಜನಾಂಗದ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಉಸಿರಾಡುತ್ತದೆ.. ಮನುಷ್ಯನ ಜೀವನಶೈಲಿಯ, ನಾಗರಿಕತೆಯ ಮತ್ತು ವಿಕಾಸದ ಕುರುಹುಗಳು ಇಡೀ ಊರಿನ ಬಾಹ್ಯ ಮತ್ತು ಆಂತರಿಕ ಅಭಿವ್ಯಕ್ತಿಯ ಮೇಲೆ ತುಂಬಾನೇ ಪ್ರಭಾವ ಬೀರುತ್ತವೆ. ನಮ್ಮ ದೇಹದ ಯಾವುದೋ ಒಂದು ಚಿಕ್ಕ ಭಾಗಕ್ಕೆ ಏಟಾದರೂ ಅಥವಾ ನೋವಾದರೂ ಇಡೀ ದೇಹದ ಸಮತೋಲನದಲ್ಲೇನೋ ಸಣ್ಣ ಏರುಪೇರಾಗುತ್ತದೆ , ಯಾವತ್ತಿನಂತಿರುವುದಿಲ್ಲ ದಿನಚರಿ.. ಅಂತಹುದರಲ್ಲಿ ವಿಸ್ತಾರವಾಗಿ ಹರಡಿದ್ದಂಥ ಒಂದು ಬೃಹತ್ ಸಾಮ್ರಾಜ್ಯದ ಮೇಲೆ ಧಾಳಿ ನಡೆದಾಗ ಅದರ ಪ್ರತಿರೋಧ ಎಂಥದ್ದಿರಬಹುದು.. ಅಥವಾ, ಪ್ರತಿರೋಧವನ್ನೂ ಮೀರಿ, ನಡೆಸಿದ ಅನಾಹುತಗಳ ಪರಾಕ್ರಮದ ಪ್ರಭಾವ ಎಂಥದ್ದಿರಬಹುದು.. ಅಥವಾ ಕ್ರೌರ್ಯದ ಪರಮಾವಧಿಯ ತೀಕ್ಷ್ಣತೆ ಎಂಥದ್ದಿರಬಹುದು.. ಯಾಕೆ ಯಾವಾಗಲೂ ಕಲಾ ಪ್ರಕಾರಗಳ ಮೇಲೆಯೇ ಧಾಳಿಯಾಗುವುದು ಎಂಬ ಇಂಥದ್ದೊಂದು ವಿಷಯವನ್ನ ಹೀಗೇ ಧನ್ಯಾಳ ಹತ್ತಿರ ಮಾತನಾಡೋವಾಗ ಅವಳು, ಯಾವುದೇ ಸಾಮ್ರಾಜ್ಯ ಇತ್ತು ಅಂತ ಹೇಳುವುದಕ್ಕೆ ಇರುವ ಸಾಕ್ಷಿ ಅಂದರೆ ಅಲ್ಲಿನ ಕಲಾ ಪ್ರಕಾರಗಳು ಅಥವಾ ರಚನಾ ಶೈಲಿ.. ಒಂದು ವೇಳೆ ಅದೇ ಕಲಾ ಪ್ರಕಾರಗಳ ಮೇಲೆಯೇ ಧಾಳಿಯಾದಲ್ಲಿ , ಅದನ್ನೂ ಕೂಡ ಇದೇ ಕಲಾ ಪ್ರಕಾರಗಳು ಮುಂದಿನ ಪೀಳಿಗೆಗೆ ದಾಟಿಸುತ್ತವೆ.. ಒಂದು ಸಾಮ್ರಾಜ್ಯದ ಪ್ರತಿಷ್ಠೆಗೂ ಮತ್ತು ಅದೇ ಸಾಮ್ರಾಜ್ಯ ನಲುಗಿದ ಕತೆಗೂ ಅಭಿವ್ಯಕ್ತಿಯ ಮಾಧ್ಯಮವೆಂದರೆ ಕಲೆ ಮಾತ್ರ ಎಂದಳು.. ಬಹುಶಃ ಎಲ್ಲಾ ಸಾಮ್ರಾಜ್ಯದ ಅವನತಿಯ ಹಿಂದೆ, ಕಲೆಯ ಮೇಲೆ ನಡೆದಂಥ ಅತ್ಯಾಚಾರದ ಕಣ್ಣೀರು ಹೆಪ್ಪುಗಟ್ಟಿ ಜಿಡ್ಡಾಗಿ ಅಂಟಿಕೊಂಡಿರಬಹುದು.. ಹಂಪಿಯ ವಿಷಯದಲ್ಲಿಯೂ ಆಗಿದ್ದು ಇದೇ.. ಚದರ ಚದರ ವಿಸ್ತೀರ್ಣದಲ್ಲಿ ಹಬ್ಬಿಕೊಂಡ ಸಾಮ್ರಾಜ್ಯವೊಂದು ವೈಭವ ಕಳೆದುಕೊಳ್ಳುವುದೇ ಊಹಿಸಲು ಕಷ್ಟ ಸಾಧ್ಯ.. ಆದರೆ ಚಾರ್ಲ್ಸ್ ಡಾರ್ವಿನ್ನಿನ ಸಿದ್ಧಾಂತದಂತೆ , ಹೊಂದಿಕೊಳ್ಳುವುದಕ್ಕೆ ಸಮರ್ಥವಾದುದು ಮಾತ್ರವೇ ಬದುಕಲು ಸಾಧ್ಯ ಅನ್ನುವಂತೆ, ಸೃಷ್ಟಿಯಲ್ಲಿ ನಿರ್ಮಾಣ ಮತ್ತು ನಾಶ ನಿರಂತರ ಪ್ರಕ್ರಿಯೆ; ಹುಟ್ಟು ಸಾವು ಅದರ ಇತರ ನಾಮವೋ ಅಥವಾ ಪ್ರಬೇಧವೋ!.. ಒಂದು ತಿಂಗಳ‌ ಮೇಲಾಯಿತು ಹೋಗಿಬಂದು ಮತ್ತು ಈಗಲೂ ಏನೋ ಅತೃಪ್ತಿ ಮತ್ತು ಅಸಮಾಧಾನ ಹಾಗೂ ಇಷ್ಟು ದಿನ ಬೇಕಾಯಿತು ಬರೆಯಬೇಕು ಅಂತನ್ನಿಸುವುದಕ್ಕೆ , ಹಂಪಿ ಇನ್ನೂ ಪೂರ್ಣವಾಗಿ ತೆರೆದುಕೊಳ್ಳುವುದು ಬಾಕಿಯೇ ಉಳಿಯಿತು ಅನ್ನುವ ಸಣ್ಣ ಕೊರಗು.. ಹೊಸಪೇಟೆಯಿಂದ ಹಂಪಿಗೆ ಹೋದಲ್ಲಿ , ವಿರೂಪಾಕ್ಷ ದೇವಸ್ಥಾನದ ಹತ್ತಿರದ ಬಜಾರ್ ನಮ್ಮನ್ನ ಸ್ವಾಗತಿಸುತ್ತದೆ. ಚಿನ್ನವನ್ನ ಬಳ್ಳದಲ್ಲಿ ಮಾರಾಟ ಮಾಡುತ್ತಿದ್ದರು ಅನ್ನುವುದನ್ನ ಬಾಲ್ಯದಲ್ಲಿ ಕೇಳಿದ್ದ ನಾವು ಅದೇ ನೆಲದಲ್ಲಿ ನಿಂತಾಗ ಇತಿಹಾಸಕ್ಕೂ ಮತ್ತು ವರ್ತಮಾನಕ್ಕೂ ಅತ್ಯಂತ ಆಪ್ತ ಸಂಬಂಧವೊಂದು ಹುಟ್ಟಿಕೊಂಡುಬಿಡುತ್ತದೆ.. ಹಂಪಿ ಹೀಗೆ ತನ್ನೊಳಗಿನ ಕತೆಯನ್ನ ಹೇಳಲು ಶುರುಮಾಡುತ್ತದೆ ಮತ್ತು ಆ ಕತೆಯನ್ನು ಕೇಳಲು ತಯಾರಾಗಿ ಹೋಗಿದ್ದು ರಾಧಿಕಾ ಅಕ್ಕಾ , ಸುಮುಖಣ್ಣಾ , ಸಹನಕ್ಕಾ , ಶ್ರೀಗೌರಿ , ಅಭಿಜಿತ್.. ನನ್ನ ಬಹುದಿನದ ಕನಸೊಂದಕ್ಕೆ ರೆಕ್ಕೆ ಕೊಟ್ಟಿದ್ದಕ್ಕೆ ನಿಮಗೆಲ್ಲರಿಗೂ ನಾನು ಚಿರ ಋಣಿ..  


ಒಂದು ಕಡೆ ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪ, ಇನ್ನೊಂದು ಕಡೆ ರಾಮಾಯಣದ ಹೊಳಹು. ಇತಿಹಾಸದ ಎಲ್ಲ ಪಾತ್ರಗಳೂ ಸಾಲಾಗಿ ನಿಂತಂತೆ ಯಾವುದೇ ಕಾಲಾವಧಿಯ ಪ್ರತ್ಯೇಕ ಗುರುತಿಲ್ಲದೇ, ಮತ್ತು ನಾವು ವರ್ತಮಾನದಲ್ಲಿ ಅದಕ್ಕೆ ಮುಖಾಮುಖಿಯಾದಂತೆ.. ಹಲ್ಲು ಕಳೆದುಕೊಂಡ ಅಜ್ಜ ಅಜ್ಜಿಯರ ಕತೆಗಳೇ ಎಷ್ಟು ಆಪ್ತವಾಗುತ್ತಿದ್ದವು , ಇನ್ನು ನಿರಂತರ ಧಾಳಿಯಿಂದ ಸಮಸ್ತವನ್ನೂ ಕಳೆದುಕೊಂಡು ಉಸಿರಾಡುತ್ತಲೇ ಇರುವ ಅಲ್ಲಿನ ಮಡುಗಟ್ಟಿದ ಮೌನದ ಕತೆ ಇನ್ನೆಷ್ಟು ಹತ್ತಿರವಾಗಿರಲಿಕ್ಕಿಲ್ಲ ಹೇಳಿ.. ನಮ್ಮ ಹೆಸರು ಪರಿಚಯ ಇವೆಲ್ಲವುಗಳಿಂದ ಮುಕ್ತವಾಗಿ ಅಲೆಯುವ ಒಂದು ಅನುಭವ ಬಹುಶಃ ವಿಲಕ್ಷಣವೋ ಅಥವಾ ವಿಶೇಷಣವೋ.. 


ಇಡೀ ಸರಹದ್ದಿನ ಒಳಾಂಗಣದಲ್ಲಿ ಅಲ್ಲಲ್ಲಿ ಎಲ್ಲೆಲ್ಲೂ ಹರಡಿಕೊಂಡಿರುವ ದಪ್ಪ ದಪ್ಪ ಕಲ್ಲುಗಳಲ್ಲಿ ಕೆತ್ತಿದ ಬೇರೆ ಬೇರೆ ಶೈಲಿಯಂತೆ ಕಾಣುವ, ಆದರೆ ಯಾವುದೋ ಒಂದು ರೀತಿಯನ್ನ ಅನುಸರಿಸುವ ವಾಸ್ತುಶಿಲ್ಪ , ಬೃಹತ್ ದೇವಸ್ಥಾನಗಳು, ಅದರ ಗೋಡೆಗಳಲ್ಲಿ , ಕಂಬಗಳಲ್ಲಿ ಅದೆಷ್ಟೋ ವರ್ಷಗಳ ಬಿಸಿಲು ಮಳೆ ಚಳಿ ಮತ್ತು ಗಾಳಿ ಧೂಳನ್ನ ನೋಡುತ್ತಾ ಕಳೆದ ಆಯಸ್ಸನ್ನ ಅದರೊಟ್ಟಿಗೇ ಮತ್ತೆ ಮತ್ತೆ ಹೊಸದಾಗಿಸಿಕೊಳ್ಳಲು ಹಂಬಲಿಸುತ್ತಿರುವ ಚಿತ್ರಗಳು ಒಂದು ಕಡೆಯಾದಲ್ಲಿ , ಪ್ರವಾಸಿಗರನ್ನ ಸೆಳೆಯುವುದಕ್ಕೆ ತಮ್ಮದೇ ನಡವಳಿಕೆಗಳನ್ನ ರೂಪಿಸಿಕೊಂಡ ಜನರ ಚಿತ್ರ ಇನ್ನೊಂದು ಕಡೆ.. ಹಿಂಭಾಗ ಕಳೆದುಕೊಂಡ ಕಲ್ಲಿನ ಆನೆ , ಕೈ ಕಳೆದುಕೊಂಡ ನರಸಿಂಹ , ಏನು ಎಂದು ಗುರುತಿಸಲೂ ಆಗದ ಹಾಗೆ ಮುಖವನ್ನೇ ಕಳೆದುಕೊಂಡ ಒಂದಷ್ಟು ವಿಗ್ರಹಗಳು, ಕಲಾ ಚಿತ್ರಗಳು, ಮತ್ತು ಕಲ್ಲಿನ‌ ಕಂಬಗಳನ್ನೇ ಕತ್ತರಿಸಬಲ್ಲ ಕತ್ತಿಯ ಏಟುಗಳನ್ನು ನೋಡಿದಾಗ, ಆ ಕತ್ತಿಗಳ ಬಲಿಷ್ಠತೆ ಮತ್ತು ಹಿಡಿದ ಕೈಗಳ ಕ್ರೌರ್ಯ ಮತ್ತು ವಿಕೃತ ಮನಸ್ಥಿತಿ.. ವಿರೂಪಾಕ್ಷ ದೇವಾಲಯದಲ್ಲಿ ತಲೆಕೆಳಗಾಗುವ ನೆರಳು , ಅದೇ ದೇವಸ್ಥಾನದ ಪ್ರಾಂಗಣದಲ್ಲೇ ಮಲಗಿ ರಾತ್ರಿ ಕಳೆಯುವ ಜನರು , ಕಂಬಗಳ ಸಂಗೀತ , ಅಜೇಯರಾಗಿಯೇ ಉಳಿವ ಆಕಾಂಕ್ಷೆಯಲ್ಲಿ ಕೆತ್ತಿದ ಕಲ್ಲಿನ ರಥ ಇವುಗಳೆಲ್ಲವೂ ಇನ್ನೊಂದಷ್ಟು ವಿಸ್ಮಯದ ಬುತ್ತಿಗಳಾಗಿ ತೋರುತ್ತವೆ.. ಮಾತಂಗ ಎನ್ನುವ ಮಹರ್ಷಿ ತಪಸ್ಸು ಮಾಡಿದ ಎನ್ನಲಾಗುವ ಆ ಬೆಟ್ಟವನ್ನು ಹತ್ತುವಾಗಿನ ಜಾಗರೂಕತೆ ಮತ್ತು ಹತ್ತುವವರೆಗಿನ‌ ಸಂಯಮ ಬದುಕಲ್ಲೂ ಇರಬಹುದಿತ್ತು ಅನಿಸುತ್ತದೆ.. ಬೆಳಗಿನ ಸೂರ್ಯೋದಯವನ್ನ ನೋಡುವಾಗ ಅಲ್ಲೆಲ್ಲೋ ದೂರದ ಹಸಿರು ದಿಬ್ಬದ ಮೇಲೆ ಬಿಸಿ ಬಿಸಿಯ ಚಿನ್ನದ ದ್ರಾವಣವನ್ನ ನಿಧಾನವಾಗಿ ಚೆಲ್ಲುತ್ತಾ ಬಂದಂತೆ.. ಇಡೀ ಹಂಪಿಯ ಸಮಗ್ರ ಚಿತ್ರಣ ಒಮ್ಮೆಲೇ ತೆರೆದಿಟ್ಟಂತೆ.. ಮತ್ತು ಎತ್ತರಕ್ಕೆ ಹೋದಂತೆ ಹೋದಂತೆ ಭೂಮಿಯ ಗಡಿಗಳೆಲ್ಲವೂ ಅದೃಶ್ಯವಾದಂತೆ.. ಅಗಾಧ ವಿಶ್ವದ ಎದುರು ಕ್ಷುದ್ರ ಕೂಸೊಂದು ನಾಳೆಗಾಗಿ ಹಪಹಪಿಸಿ ಕೂತಂತೆ.. ನಾಗರೀಕತೆ, ಆಧುನಿಕತೆ , ಪ್ರಾಚೀನತೆ, ಇತಿಹಾಸ , ಜಗತ್ತು , ಹೋರಾಟ , ಆಸೆ , ಕಾಲ, ವಯಸ್ಸು ಎಲ್ಲವನ್ನೂ ಮರೆತು ಕೇವಲ ಪ್ರಕೃತಿ ಮತ್ತು ನಮ್ಮ ನಡುವಿನ ಸಂಭಾಷಣೆಯನ್ನ ಮತ್ತೆ ಮತ್ತೆ ಅನುಭವಿಸಲೇಬೇಕೆಂಬ ಹಂಬಲ ಮತ್ತೆ ಮತ್ತೆ ಚಿಗುರಿದಲ್ಲಿ ಮಾತಂಗ ಪರ್ವತದ ತಪ್ಪೇನಿಲ್ಲ..ಇನ್ನು ಹೇಮಕೂಟದ ಸೂರ್ಯಾಸ್ತದ ಬಗ್ಗೆ ಹೇಳಲೇಬೇಕು.. ಸಂಜೆ ಆಗ್ತಾ ಇದ್ದಂತೆ ದೇಶಿ, ವಿದೇಶಿ , ಜಾತಿ , ಲಿಂಗ ಯಾವುದರ ನೆನಪೂ ಇಲ್ಲದೇ ಸೃಷ್ಟಿಯೆಂಬ ಕಲಾವಿದ ಆಕಾಶ ಅನ್ನೋ ಕಾಗದದ ಮೇಲೆ ಬಿಡ್ಸೋ ಸೂರ್ಯಾಸ್ತದ ಚಿತ್ರಕ್ಕಾಗಿ ಸೇರುವ ಜನ ಸಮೂಹ, ವಿಸ್ಮಿತವಾಗಿ ನೋಡುತ್ತಾ ಕೂತುಬಿಡುತ್ತದೆ ಒಂದೇ ಸೂರಿನಡಿಯೆಂಬಂತೆ.. ಸಂಜೆಯ ಆ ಕಡುಗೆಂಪು ಇನ್ನೂ ಜಿಡ್ಡಾಗಿಯೇ ಇರುವ ಪ್ರಾಚೀನ‌ ರಕ್ತದ ಕಲೆಯೇ ಅಂತನ್ನಿಸಿದರೆ ಅತಿಶಯೋಕ್ತಿ ಅಲ್ಲವೇನೋ ಬಹುಶಃ.. ಇವೆಲ್ಲವುಗಳ ಮಧ್ಯ , ನಿರಂತರವಾಗಿ ಹೊಸ ಹೊಸ ನೀರು ಹರಿಯುತ್ತಲೇ ಇದೆ ತುಂಗೆಯಲ್ಲಿ ಮೌನವಾಗಿ.. ಪುರಂದರ ಮಂಟಪದ ನೀರವತೆ ಮತ್ತು ತುಂಗೆಯ ಜುಳು ಜುಳು, ಧ್ಯಾನಸ್ಥ ಸ್ಥಿತಿಯನ್ನ ಮತ್ತೆ ಮತ್ತೆ ಪ್ರತಿಷ್ಠಾಪಿಸಲು ಹೆಣಗುತ್ತಿರುವಂತೆ ಗೋಚರಿಸುತ್ತದೆ.. ರಾತ್ರಿ ೮ ಗಂಟೆ ಆಗ್ತಾ ಇದ್ದಂತೆ ಹಂಪಿಯಲ್ಲಿನ ದೀಪಗಳಿಗೆ ವಿಶೇಷ ಬಣ್ಣ ಮತ್ತು ಅರ್ಥ ಬರುತ್ತದೆ ಹಾಗೂ ಇಡೀ ಹಂಪಿ ನಿಧಾನಕ್ಕೆ ಮಲಗುತ್ತದೆ ಮತ್ತು ಇತರ ಊರೊಂದಿಗಿನ ಸಂಪರ್ಕವನ್ನ ಕಡಿದುಕೊಂಡು ಗುಟ್ಟಿನ ಜಾಗವಾಗುತ್ತದೆ.. 


ಮತ್ತೆ ಬೆಳಗಿನ ಜಾವ ಪ್ರವಾಸಿಗರನ್ನ ಸೆಳೆಯಲು "ರೂಮ್ ಚಾಹಿಯೇ ಕ್ಯಾ" ಎನ್ನುತ್ತಾ ಶುರುವಾಗುವ ಗದ್ದಲ "ಕನ್ನಡ ಬರತ್ತೆ ಸಾರ್" ಅನ್ನುತ್ತಾ , ವ್ಯಾಪಾರೀಕರಣದ ಬೇರೆ ಬೇರೆ ಮಜಲುಗಳಿಗೆ ವಿಸ್ತರಿಸಿಕೊಳ್ಳುತ್ತದೆ.. ಅಲ್ಲಿನ ಜನರ ಬಹುತೇಕ‌ ಉದ್ಯೋಗವೇ ಪ್ರವಾಸಿಗರನ್ನ‌ ಸೆಳೆಯುತ್ತಾ ಅವರನ್ನ ಖುಷಿಪಡಿಸುವುದೇ ಆಗಿರುವಾಗ ಭಾಷೆಯ ಬಗೆಗಿನ ಕಾಳಜಿ ಯಾರಿಗಿರಲು ಸಾಧ್ಯ.. ನಿತ್ಯದ ಹೊಟ್ಟೆಯ ಹಾಡು ಮತ್ತು ಅದರ ಮೇಲಿನ ಮೋಜು ಪ್ರವಾಸಿಗರ ತೃಪ್ತಿಯಲ್ಲೇ ಇದೆ ಅನ್ನುವ ಸತ್ಯ ತಿಳಿದಾಗಿನಿಂದ ಹಂಪಿ ಹಾಗೆಯೇ ಉಳಿದುಬಿಟ್ಟಿತು.. ಹಂಪಿ ಹಾಳಾಗಿಯೇ ಇರಬೇಕು, ಆಗಲೇ ಅದು ತನ್ನ ಚರಿತ್ರೆಯನ್ನ ಹೇಳಬಲ್ಲದು.. ಅದಕ್ಕಾಗಿ ಕೆಲವು ಉದುರುತ್ತಿರುವ ದೇವಸ್ಥಾನಗಳನ್ನ ಕೃತಕವಾಗಿ ಮೊದಲಿನಂತೆ ಕಟ್ಟಲು ಪಡುತ್ತಿರುವ ಹರಸಾಹಸಗಳು ಸಾಕ್ಷಿಯಾಗುತ್ತವೆ.. ಹಂಪಿಯಲ್ಲಿ ಇರುವಷ್ಟೂ ದಿನ ನಾವು ಯಾವುದೋ ಒಂದೋ ಅಗೋಚರ ಶಕ್ತಿಯ ಆಜ್ಞೆಯನ್ನ ಪಾಲಿಸಿದಂತೆ ಮತ್ತು ಅಲ್ಲಿನ ಎಲ್ಲವೂ ಪೂರ್ವ ನಿರ್ಧರಿತವಾದಂತೆ ಅನ್ನುವ ಸಣ್ಣ ಸಂಶಯವೊಂದು ಬಂದರೆ ಅದೊಂದು ಸೂಕ್ಷ್ಮದ ವಿಷಯ ಖಂಡಿತಾ.. ಅಲ್ಲಿಗೆ ಅದರದ್ದೇ ಆದ ವ್ಯವಸ್ಥೆಯಿದೆ , ಅದರದ್ದೇ ಆದ ಗುಣ ಲಕ್ಷಣಗಳಿವೆ, ಅದರದ್ದೇ ಆದ ದಿನಚರಿಯಿದೆ, ಸೂರ್ಯ ಚಂದ್ರರೊಂದಿಗೆ ಹಗಲು ರಾತ್ರಿಗಳಾದರೂ ಅದಕ್ಕೆ ಅದರದ್ದೇ ಆದ ಕಾಲಮಾನವಿದೆ.. ಅದಷ್ಟೂ ವ್ಯಾಪಾರೀಕರಣ, ಮನುಷ್ಯನ ಹಪಹಪಿತನದ ನಡುವೆಯೂ ಒಂದು ಪ್ರೀತಿಯ ಸ್ಪರ್ಶಕ್ಕಾಗಿ ಹಂಪಿಯ ದೇವಸ್ಥಾನದ ಕಂಬಗಳು ಕಾಯುತ್ತಿವೆ, ಕಲ್ಲಿನ ನಂದಿ ಕತ್ತಲೆಯಲ್ಲಿ ಮುಲುಗುತ್ತಿದೆ, ಕಿತ್ತುಕೊಂಡು ಹೋದ ದೇವರ ಮೂರ್ತಿಗಳು ಈಗಲೂ ಜನರ ನಂಬಿಕೆಯಲ್ಲಿ ತಮ್ಮ ಅಸ್ತಿತ್ವವನ್ನ ಗಟ್ಟಿಯಾಗಿಸಿಕೊಂಡಿವೆ.. ರಾಣಿಯರ ಸ್ನಾನಗೃಹವಾಗಿತ್ತಂತೆ , ಇಲ್ಲಿ ಆನೆಗಳ ಸಾಲು ಸಾಲನ್ನ ಕಟ್ಟುತ್ತಿದ್ದರಂತೆ ಎಂಬ ಚರಿತ್ರೆಯ ನೆನಪುಗಳೊಂದಿಗೆ , ಇಲ್ಲೇ ಅಕ್ಕತಂಗಿಯರಿಬ್ಬರು ಕಲ್ಲಾಗಿಹೋದರಂತೆ ಎನ್ನುವ ಕತೆಗಳೂ ಪ್ರಚಲಿತದಲ್ಲಿರುವ ಹಂಪಿಯಲ್ಲಿ ಒಂದು ಅಪ್ರಕಟಿತ ಶೋಕವಿದೆ.. ಒಂದು ಅನಾಥ ಮೌನವಿದೆ.. ಇಷ್ಟೆಲ್ಲ ಮಾನವ ಜನಾಂಗದ ಗದ್ದಲದ ನಡುವೆ ಬೇರೆಯಾಗಿಯೇ ಉಳಿದ, ಬೆರೆಯದೇ ಹೋದ ಅಳಲಿದೆ..ಇದಕ್ಕಾಗಿಯೇ ಅದು ಇನ್ನಷ್ಟು ಆಪ್ತವಾಗುತ್ತದೆ.. ಕೇವಲ ಚೌಕಟ್ಟಿನಲ್ಲಿ ಛಾಯಾಚಿತ್ರವಾಗುವ ಎಲ್ಲಾ ಕಲ್ಲಿನ ಚೂರಿಗೂ ಅಲ್ಲಿನ ಬಾನಿಗೂ ಅದರದ್ದೇ ಆದ ಬಣ್ಣವಿದೆ.. ಅಲ್ಲಿನದೇ ಕಲ್ಲಿನ ಕಂಬಕ್ಕೆ ತಲೆಯಾನಿಸಿ ಕೂತಾಗ, ಕಾಮ,ಕ್ರೋಧ,ಲೋಭ,ಮೋಹ,ಮದ, ಮಾತ್ಸರ್ಯ ಇತ್ಯಾದಿಗಳೂ, ಸಿಟ್ಟು , ಪ್ರೀತಿ ,ಗಾಂಭೀರ್ಯ, ಸೇಡು, ನಗು , ದುಃಖ , ರೌದ್ರ , ಭೀಭತ್ಸ , ಭಯ, ಹಾಸ್ಯ , ಅದ್ಭುತ, ಶಾಂತ ಇತ್ಯಾದಿ ಇತ್ಯಾದಿ ರಸಗಳೂ ಅತ್ಯಂತ ಕ್ಷೀಣ ದನಿಯಲ್ಲಿ ಚಡಪಡಿಸುತ್ತಿರುವುದು ಕೇಳಿದರೆ ಹುಚ್ಚನೆನ್ನದಿರಿ.. ಯಾಕೆಂದರೆ , ಹಂಪಿ ಗತ ವೈಭವದ ಗಂಭೀರ ಆತ್ಮ ಚರಿತ್ರೆ.. 


~`ಶ್ರೀ'

    ತಲಗೇರಿ

ಶನಿವಾರ, ಮೇ 2, 2020

ದಿವ್ಯ ಸಾನ್ನಿಧ್ಯದ ಸಾಂಗತ್ಯ ‌ಪತ್ರ...






ಗೆ,
ರಾಧಾ,
ಗೋಕುಲ

ಸಖೀ ರಾಧೆ,

ಇಷ್ಟುದ್ದ ಈ ಹಾಳೆಯ ಮೇಲೆ ಕೃಷ್ಣನ ಕೈಯಚ್ಚಿನ ನೆರಿಗೆ ಮೂಡುವ, ದೇವರೆಂಬ ಧಾತುವಿನೊಳಗೆ ನಡೆವ ಆಗುಹೋಗುಗಳ, ಕಪಟವಿಲ್ಲದ ಅಕ್ಷರಗಳಲ್ಲಿ ಮತ್ತೆ ಹುದುಗಿಸುವ ಸಮಯ ಬಂದಿದೆಯೀಗ. ಬರೆದ ಮೊದಲೆರಡು ಪತ್ರಗಳು ನಿನ್ನ ಮಡಿಲಲ್ಲಿ ನಿತ್ಯ ಸುಖದಲ್ಲಿ ಆಪ್ತ ಹವೆಯಲ್ಲಿ ಬೆಚ್ಚಗಿವೆಯೆಂದುಕೊಳ್ಳುತ್ತೇನೆ. ಹಳೆಯದಾದಷ್ಟೂ ಪತ್ರಗಳ ಪರಿಮಳ ಹೆಚ್ಚುತ್ತದಂತೆ. ಹಳೆಯದಾದಷ್ಟೂ ನೆನಪುಗಳು ಮಾಗುತ್ತವಂತೆ. ಹಳೆಯದಾದಷ್ಟೂ ಉಳಿದ ಪ್ರೀತಿ ಸಲಹುತ್ತದಂತೆ. ಯಾರನ್ನು? ಎಂದು ಮರು ಪ್ರಶ್ನಿಸದಿರು.. 'ಈ ಜಗತ್ತನ್ನು',  ಎಂದು ನಾನು ಉತ್ತರಿಸುವೆನೆಂದು ನಿನಗೂ ತಿಳಿಯದೇ ಏನಲ್ಲ! ಕೃಷ್ಣನಿಗೆ ವೈಯಕ್ತಿಕ ಅನ್ನುವುದು ಉಳಿದದ್ದಾದರೂ ಯಾವುದು ರಾಧೆಯ ಹೊರತಾಗಿ, ರಾಧೆಗಾಗಿ ಬಿಟ್ಟ ಕೊಳಲಿನ ಹೊರತಾಗಿ. ಬಿಡು ಬಿಡು, ನೆನಪು ನಶೆಯಂತೆ. ಕಪಟಿ, ಚತುರ, ಮೋಸಗಾರ, ವ್ಯಾಮೋಹಿ, ಪಕ್ಷಪಾತಿ, ದ್ರೋಹಿ, ಆಪದ್ಬಾಂಧವ, ಮಿತ್ರ, ಕುಟಿಲ ತಂತ್ರಿ , ಮಾಯಾವಿ ಒಂದೇ ಎರಡೇ ಕೃಷ್ಣನು ಪಡೆದ‌ ಹೆಸರುಗಳು. ಆದರೆ ಇವತ್ತು ಕೃಷ್ಣ ಹೇಳಹೊರಟಿರುವುದು ಈ ಅಂಕಿತಗಳಾಚೆಗಿನ ಸಂಗತಿಗಳನ್ನು.. ಧರ್ಮ ಅಧರ್ಮದ ಮರ್ಮದಲಿ ದಾಳವಾದ ಪರಾಕ್ರಮಿಯ ಕಣ್ಣುಗಳಲ್ಲಿ ಕೃಷ್ಣನನ್ನು ನೋಡುವೆಯಂತೆ.. ಹಾಗೇ, ಕಿವಿಯಾಗುವೆಯಂತೆ ಇವೆಲ್ಲವುಗಳಿಗೂ ಜೀವಂತ ಸಾಕ್ಷಿಯಾದ ಸಾರಥಿ, ರಾಯಭಾರಿ, ರಾಜಕಾರಣಿ, ಯುದ್ಧ ನಿಪುಣ ಕೃಷ್ಣನ ಸಂಗತಿಗಳಲ್ಲಿ ಉಳಿದ ಆ ಪರಾಕ್ರಮಿಯ ಪ್ರಾರಬ್ಧಕ್ಕೆ !
ಊಹೆ ನಿಜ ರಾಧೇ, ವಸುಸೇನ‌ನ ಕುರಿತಾಗಿಯೇ ಇವತ್ತು ನಾನು ಹೇಳಹೊರಟಿರುವುದು. ಲೋಕ ನಿಂದಿಸಲಿ ನನ್ನ, ಲೋಕ ದ್ವೇಷಿಸಲಿ ನನ್ನ, ಲೋಕ ಜರೆಯಲಿ ನನ್ನ, ಲೋಕ ಮರುಗಲಿ ಕಂಡು ಅವನ...

ಭೋರ್ಗರೆದು ಬಿಕ್ಕಳಿಸುವ ಡೋಲು,ನಗಾರಿ, ಶಂಖ,ಕಹಳೆ, ಜಾಗಟೆಗಳು. ಅಬ್ಬರಿಸಿ ಅಬ್ಬರಿಸಿ ಸುಸ್ತಾದ ಆನೆ,ಕುದುರೆಗಳು. ತಲೆಯ ಮೇಲೆ ಠೀವಿಯಿಂದ ಕೂತಿದ್ದ‌ ಕಿರೀಟಗಳು ಉದುರಿಬಿದ್ದಿವೆ ಆಧಾರವಿಲ್ಲದೇ. ಬಿಸಿ ಬಿಸಿ ನೆತ್ತರ ಇನ್ನೂ ಸುರಿಸುತ್ತಲೇ ಅಲುಗುತ್ತಿರುವ ಕಡಿದ ಬೆರಳಿನ ಚೂರು. ಕಣ್ಣುಗಳ ಮುಚ್ಚಲೂ ಸಮಯ ಸಿಗದೇ ಉಳಿದ ಕತ್ತರಿಸಿದ ರುಂಡ, ವಸ್ತ್ರದ ಬಣ್ಣವೇ ಬದಲಾದ ಮುಂಡ, ಮಾರ್ದನಿಸುತಿದೆ ಕಾಲಾಳುಗಳ ಆಕ್ರಂದನ.. ಈ ಭೀಭತ್ಸ ರಣರಂಗದಲ್ಲೇ ಬಿದ್ದಿತ್ತು ಇನ್ನೊಂದು ಶರೀರ ರಥಕ್ಕೊರಗಿ. ಅದರಲ್ಲೇನು ವಿಶೇಷ ಕೃಷ್ಣ, ಯುದ್ಧವೆಂದಮೇಲೆ ಹೆಣಗಳ ರಾಶಿ, ರಕ್ತದ ಹೋಳಿ, ಊರಲ್ಲುಳಿದ ಹೆಂಗಸರಿಗೆ ವಿಧವೆಯ ಪಟ್ಟ ಹಾಗೂ ಮಾನಕ್ಕಾಗಿ ಹೋರಾಟ ಸಾಮಾನ್ಯವಲ್ಲವೇ ಮೋಹನ, ಅನ್ನದಿರು. ಪಾಂಡವರ ನಿಷ್ಠೆ, ಧರ್ಮ, ಪರಾಕ್ರಮ, ಸ್ವಾರ್ಥ, ಭಕ್ತಿ ಇವೆಲ್ಲವನ್ನೂ ಮೀರಿ ಎದೆನಡುಗಿಸಿದವನ‌ ಕತೆಯಿದು. 'ಇದಿರಿಲ್ಲ ಎನಗೆ' ಎಂದು ಮೆರೆಯುತ್ತಿದ್ದ ಸವ್ಯಸಾಚಿಯ ಕೈಗಳಿಗೆ ನಡುಕಹುಟ್ಟಿಸಿದವನ ಕತೆ. ಹೌದು, ಇದು ಕ್ಷತ್ರಿಯ ಬ್ರಾಹ್ಮಣ ಸೂತ ಯೋಧ ಕರ್ಣನ ‌ಕತೆ. "ಕೇಳಿದ್ದೇನೆ ಮಾಧವಾ, ನಿನ್ನ ಕುಟಿಲತೆಯಿಂದ ಅವ ಸತ್ತನಂತೆ ಅನ್ನುವುದನ್ನ", ಅಂತನ್ನಬೇಡ. ಲೋಕಕ್ಕೆ ತಿಳಿದ ಗೋಚರಗಳು ಒಂದೆಡೆಯಾದರೆ, ಕರ್ಣ ಮತ್ತು ಕೃಷ್ಣನಲಿ ವಿನಿಮಯವಾದ ಸಾನ್ನಿಧ್ಯವೇ ಬೇರೆ.. "ಭಗವಂತ ನೀನು, ವಿನಿಮಯವಾಗಲೇಬೇಕಲ್ಲವೇ?", ಅಂತನ್ನುವ ಆ ಪ್ರಶ್ನಾರ್ಥಕ ಕಣ್ಣುಗಳನ್ನ ನನ್ನತ್ತ ನೇರವಾಗಿ ಚಾಚಿದಂತೆ ಭಾಸವಾಗುತ್ತಿದೆ ನನಗೆ, ಇವತ್ತಿನ ಈ ಪತ್ರ ಆವತ್ತಿನ ಪ್ರತಿಫಲನ.

ಕೆಸರಲ್ಲಿ ಕುಳಿತು, ರಥಕ್ಕೊರಗಿ ನಿಕೃಷ್ಟ ನೋಟ ಬೀರುತ್ತಿದ್ದ ಕರ್ಣ, " ಕೊನೆಗೂ‌ ಕೊಲ್ಲಿಸಿದೆಯಲ್ಲಾ" ಅನ್ನುವಂತೆ. ಅರ್ಜುನ ಸಾರಥಿ ಕೃಷ್ಣ ರಥದಿಂದ ಇಳಿದು ಬರಲೇಬೇಕಾಯ್ತು ಪರಾಕ್ರಮಿಯ ಬಳಿಗೆ. ಅದೆಷ್ಟು ಪ್ರಶ್ನೆಗಳು ಓಡುತ್ತಿರಬಹುದಲ್ಲಾ, ಉತ್ತರಿಸಬೇಕಾದುದು‌ ಆದ್ಯ ಕರ್ತವ್ಯ. ಸಾಯುವ ಗಳಿಗೆಯಲ್ಲಿ‌ ಮನುಷ್ಯ ಪವಿತ್ರನಾಗುತ್ತಾನೆ. ಇಹದ ಕೊಂಡಿ ಕಳಚಿಬೀಳುವ ಕ್ಷಣದಲ್ಲಿ ಅಹಂ ಚೆಲ್ಲಾಪಿಲ್ಲಿಯಾಗಿ ಚೆದುರಿರುತ್ತದೆ. ರಥದಿಂದ ಇಳಿದವನೇ ಹೋದೆ ಕರ್ಣನ‌ ಬಳಿಗೆ, ಹೀಗೇ ಹೋಗಿದ್ದೆ ಯುದ್ಧದ ಹಿಂದಿನ ದಿನವೂ ಕೂಡಾ.. "ಪಾಂಡವರ ಸೇರು, ರಾಜ್ಯ ಮತ್ತು ಪಟ್ಟ ನಿನ್ನದಾಗುತ್ತದೆ ಅಂತ ಹೇಳುವುದಕ್ಕೆ", ಅಂತ ಮಾತ್ರವೇ ಗ್ರಹಿಸಿತು ಲೋಕ. ಕರ್ಣನ ಮನಸ್ಸನ್ನು ಕದಡಲು ಹೋದೆ, ಅಂತ ಮಾತ್ರವೇ ಮಾತಾಡಿತು ಲೋಕ. ಅದೆಷ್ಟೇ ಆಮಿಷಗಳನ್ನೊಡ್ಡಿದರೂ ಕರ್ಣ ಅದನ್ನ ಕಾಲ್ಬೆರಳ ತುದಿಯಲ್ಲಿ ಕೂಡಾ ಮುಟ್ಟದೇ ತಿರಸ್ಕರಿಸಿದಂಥ ಋಣಬದ್ಧ, ಕೃತಜ್ಞತೆಯ ಮೂರ್ತರೂಪ ಅನ್ನುವುದನ್ನ ಇನ್ನು ಹೇಗೆ ಹೇಳಬಹುದಿತ್ತು ಈ ಲೋಕಕ್ಕೆ ನಾನು? ಕುಲವೆಂಬುದೇ ಯಾವುದೆಂದು ತಿಳಿಯದೇ ಅನುಭವಿಸಿದ ಅವಮಾನಗಳ ನಡುವೆ ಅರಸಿಬಂದ ಸ್ನೇಹಕ್ಕಾಗಿ ಸಮಸ್ತವನ್ನೂ ತ್ಯಜಿಸಲು ಸಿದ್ಧನಾಗಿದ್ದ ಕರ್ಣ ಒಬ್ಬ ಅಪ್ಪಟ ಮಗುವಿನಂಥ ಸ್ನೇಹಿತನೆಂಬುದನ್ನ ಜಗತ್ತಿಗೆ ಅದು ಹೇಗೆ ಹೇಳಬಹುದಿತ್ತು ನಾನು?

ಕರ್ಣನ‌ ಸಾವು ನಿಶ್ಚಯವಾಗಿತ್ತು. ಸಾವಿನ ಎದುರು ಕೂತು ಹುಟ್ಟಿನ ಕತೆ ಕೇಳುವ ವಿಪರ್ಯಾಸ ಅವನದು. ಆವತ್ತೇ ಯಾಕೆ‌ ಹೇಳಬೇಕಿತ್ತು, ಮತ್ತೆ ದಿನವೆಲ್ಲಿತ್ತು? ಸೂತ ಕುಲದ ರಾಧೆಯ ಮಗ ನಾನು ರಾಧೇಯ ಅಂತಂದುಕೊಂಡವಗೆ, ಬಾಲ್ಯದಾಟದ ಕುಂತಿಗೆ ಯೌವನದ‌ ವರ ಸಿಕ್ಕಿ, ನಡೆದ ಅಚಾತುರ್ಯದ, ಸೂರ್ಯ ಅಂಶದ ಗರ್ಭ ನೀನು‌ ಅಂತನ್ನುವುದು ಅದೆಷ್ಟು ಸಮಂಜಸ ಎಂದು ಪ್ರಶ್ನಿಸುವೆಯಾ ರಾಧಾ.. ಹೇಳಿದ್ದಷ್ಟೇ ಅಲ್ಲದೇ, ಪಾಂಡವರೈವರಿಗೆ ಹಾನಿಗೈಯುವುದಿಲ್ಲವೆಂದು ಮಾತು ಕೊಡುವಂತೆ ಇಕ್ಕಟ್ಟಿಗೆ ಸಿಲುಕಿಸಿದೆಯಲ್ಲಾ ಚತುರನೇ ಅನ್ನುತಿಹೆಯಾ? ಯಾಕಿಷ್ಟೊಂದು ಉಪಾಯಗಳು ಹರಿಯೇ ಅಂದ,‌ ಯಾಕೆ ನನ್ನನ್ನು ಚಂಚಲನನ್ನಾಗಿಸುತ್ತಿರುವೆಯೆಂದ. ದ್ರೌಪದಿಯ ಕಣ್ಣಿಂದ ಉದುರಿದ ಆ ಹನಿಯಲ್ಲಿ ಗಹಗಹಿಸಿದ ಕರ್ಣನ‌ ಚಿತ್ರವಿತ್ತೋ ಕೌಂತೇಯ ಅಂದೆ, ತತ್ತರಿಸಿದ. ಅವಮಾನಕ್ಕೆ ಉತ್ತರ ಕೊಡಬೇಕಾದುದು ಕ್ಷತ್ರಿಯ ಧರ್ಮವೇ, ಆದರೆ ಅಂದು ಅದು ಆ ಸ್ತ್ರೀಯ ಮೇಲಾಗಿತ್ತಲ್ಲ; ಅದು ಸಮ್ಮತ ಉತ್ತರವಲ್ಲವಾಗಿತ್ತು. ಅವಳ ಸೀರೆಯ ತುದಿಗೆ ಇನ್ನೂ ಕರ್ಣನ ಬೆರಳಿನ ಕಲೆಯಿತ್ತು. ಅದಿರಲಿ, ಮತ್ತೆ ಕುಂತಿಯನೂ ಕಳುಹಿಸಿದೆಯಲ್ಲಾ ಅವನ ಬಳಿಗೆ, ಇದು ಅವನನ್ನ ಗದ್ಗದಿತನನ್ನಾಗಿಸಲಲ್ಲದೇ ಇನ್ನೇನು ಅಂತ ನೀನೂ ಕೇಳುತ್ತಿರುವೆಯಾ ರಾಧಾ.. ಹೆತ್ತವಳಿದ್ದೂ ಅವಳ ಅಪ್ಪುಗೆಯಿಲ್ಲದೇ ಅವ ಕೊನೆಯುಸಿರೆಳೆಯುವುದು ದುರಂತವಾಗುತ್ತದಲ್ಲವೇ? ಈಗಾಗಿದ್ದೇನು ಅನ್ನಬೇಡ ಮತ್ತೆ.. ತಾಯಿ ಮಗನ‌ ಅಪೂರ್ವ ಮಿಲನಕ್ಕೆ ಬೇರೆ ಘಟಿಗಳು ಇರಲಿಲ್ಲ. ಅದೆಷ್ಟೇ ಸ್ವಾರ್ಥವಿದ್ದರೂ ಮಮತೆ ಉಕ್ಕುವುದು , ಅದೆಷ್ಟೇ ದ್ವೇಷವಿದ್ದರೂ ಹೃದಯ ಬಿಕ್ಕುವುದು, ಅದನ್ನೇ ಅಲ್ಲವೇ ಜಗತ್ತು ನೋಡಿದ್ದು ಈ ಭೇಟಿಯಲ್ಲಿ. ಕುಂತಿ ಎರಡು ವರ ಕೇಳಲು ಅಲ್ಲಿಗೆ ಹೋದಳಷ್ಟೇ ಅಂದುಬಿಡಬಹುದು ಸುಲಭವಾಗಿ, ರಕ್ತ ಸಂಬಂಧದ ಗಾಢತೆಯನ್ನ ಮತ್ತು ವಿಧಿಯ ವಿವರಗಳನ್ನ ಇನ್ನೆಂತು ತೋರಿಸಲಿ ನಾನು? ತನ್ನ ಕೈ ಸೋಲುತ್ತಿದೆ ಎಂದು ಗೊತ್ತಿದ್ದರೂ ಕೇಳಿದ್ದನ್ನು ಕೊಡದೇ ಇರಲಾರ ಕರ್ಣ ಅನ್ನುವುದು ಹೇಗೆ ತಿಳಿದೀತು ಇದರ ಹೊರತಾಗಿ ಅಲ್ಲವೇ?

ಕೈಯಲ್ಲಿ ಧನುರ್ಬಾಣಗಳಿಲ್ಲದೇ, ಶಸ್ತ್ರರಹಿತನಾದ ಕ್ಷತ್ರಿಯನ ಕೊಲ್ಲುವ ತುರ್ತೇನಿತ್ತು ನಿನಗೆ, ನಿನ್ನ‌ ಗಾಂಢೀವಿ ಸೋಲುವನೆಂಬ ಭಯವೇ? ಇರಬಹುದು ಇರಬಹುದು, ಅಡ್ಡದಾರಿ ಹಿಡಿದ ಕೃಷ್ಣ ಎಂದು ಎಷ್ಟೆಲ್ಲಾ ನಿಂದಿಸಿದರಲ್ಲಾ.. ಅಪ್ರತಿಮ ಯುದ್ಧೋನ್ಮಾದದಿಂದ ಚಕ್ರವ್ಯೂಹವನ್ನ ಹೊಕ್ಕಿದ ಅಭಿಮನ್ಯುವಿನ‌ ಅಂತ್ಯಕ್ಕಾಗಿ ಸಕಲ ಶಾಸ್ತ್ರ ಪಾರಂಗತನಾದ ಕರ್ಣ, ಯಾವ ಧರ್ಮವನ್ನ ಮೀರಿದನಲ್ಲಾ, ಪಾಪ ಪುಣ್ಯವೀಗ ದುರ್ಯೋಧನನ ಲೆಕ್ಕವೆಂಬ ಮಾತ ಕೇಳಿ, ಹಿಂದಿನಿಂದ ಕೈ ಕತ್ತರಿಸಿದನಲ್ಲಾ,  ಅದೇ ಧರ್ಮ ಈಗ ಅವನ ಎದೆಗೆ ನಾಟಿತು. ಇದೇನು ಕೃಷ್ಣಾ, ನೀನೂ ಸಾಮಾನ್ಯ ಮನುಷ್ಯರಂತೆ ದ್ವೇಷಕ್ಕೆ ದ್ವೇಷ, ಮೋಸಕ್ಕೆ ಮೋಸ ಎಂದುಬಿಟ್ಟೆಯಲ್ಲಾ ಅಂತಂದುಕೊಳ್ಳದಿರು. ಸತ್ಯದ ಅರಿವಾಗಬೇಕಿತ್ತು ಕರ್ಣನಿಗೆ, ಅವನು ದುರ್ಯೋಧನನ ಸ್ನೇಹದ ಹೆಜ್ಜೆಯ ಅಮಲಿನಲ್ಲಿ ಎಲ್ಲಿ‌ ಎಡವಿದ ಅನ್ನುವುದನ್ನ ಮನದಟ್ಟು ಮಾಡಲೇಬೇಕಿತ್ತು. ಬಾಣ ನೆಟ್ಟ ಮೇಲೂ ದಾನ‌ ಕೇಳಿದನಂತೆ ಅವ ಸಾಯದಿದ್ದರೆ ಅಂತ, ಎಂದೆಲ್ಲಾ ಜನ ನಿನಗೆ ಹೇಳಿದರೇ? ಪರಮಾತ್ಮನೂ ಒಮ್ಮೊಮ್ಮೆ ಶರಣಾಗುತ್ತಾನೆ‌ ಕರ್ಣನಂಥ ದಾನಶೂರನೆದುರು.. ದಾನ ಕೇಳಿದ್ದು ನಿಜ, ಅವನ ಹಿಂದಿನ‌ ಜನ್ಮದ ಲೆಕ್ಕವೊಂದು ಬಾಕಿಯಿತ್ತಲ್ಲಾ.. ಜೊತೆಗೆ, ಭಗವಂತನಿಗೇ ದಾನ‌ಕೊಟ್ಟ ಕರ್ಣ ಅನ್ನುವುದು ಜಗಜ್ಜಾಹೀರಾಗಲಿ, ಸಾಯುವಾಗಲೂ ದಾನಕ್ಕೆ ಹಿಂಜರಿಯಲಿಲ್ಲ ಆತ ಅಂತೆಲ್ಲಾ ಜನ ತಡಬಡಿಸಲಿ, ದಂಗಾಗಲಿ ಅಂತ ಅಂದುಕೊಳ್ಳುವುದು ತಪ್ಪಾ ರಾಧಾ.. ದುರಂತದ ಬದುಕಿಗೊಂದು ಅರ್ಥವತ್ತಾದ ವಿದಾಯ ಬೇಕಿತ್ತಲ್ಲವೇ!

ಮುರಿದು ಬಿದ್ದ ಕರ್ಣನ‌ ರಥದ ಗಾಲಿ, ಅವನ ಜನನ ಮರಣಗಳ ಚಕ್ರ ಮುರಿದು ಬಿದ್ದಂತೆ ನನಗೆ ಕಂಡಿತ್ತು. ಅವನ ಬಳಿ ಹೋಗಿ ಕೂತೆ, ಏನಾಯಿತು ಕೃಷ್ಣಾ, ಕರ್ಣ ಯಾವ ಸುಖಕ್ಕೂ ಯೋಗ್ಯನಾಗದೇ ಹೋದನೇ ಅಂತ ಪ್ರಶ್ನಿಸಿದ ಕೈಹಿಡಿದು. ಎಲ್ಲರ ಹುಟ್ಟಿಗೂ ಎಲ್ಲರ ಸಾವಿಗೂ ಅರ್ಥವಿದೆ ಕೌಂತೇಯ, ಹುಟ್ಟಿನಿಂದ ಸಾವಿನ ತನಕವೂ ನಿನ್ನದು ಅನಿಶ್ಚಿತತೆಯೇ, ನಿನ್ನದು ದೌರ್ಭಾಗ್ಯವೇ, ನಿನ್ನದು ಹೋರಾಟವೇ.. ಆದರೆ, ಅವೆಲ್ಲವುಗಳನ್ನೂ ಮೀರಿ ಬೆಳೆದವ ನೀನು, ಜಗತ್ತಿಗೆ ಮತ್ತೊಬ್ಬ ನಿನ್ನಂಥ ದಾನಿ ಸಿಗಲಾರ ಅದೆಷ್ಟೇ ಸಹಸ್ರ ವರ್ಷಗಳಾದರೂ.. ಅಲ್ಲಿಗೆ ನಿನ್ನ ಬದುಕಿಗೆ ಅರ್ಥ ದಕ್ಕಿತಲ್ಲಾ ರಾಧೇಯ ಎಂದೆ. ಮುಂದುವರೆದು ಕೇಳಿದೆ, ನನಗೂ ನಿನಗೂ ಒಂದು ಸಾಮ್ಯತೆಯಿದೆ ತಿಳಿದಿದೆಯಾ ಕುಂಡಲಧರ? ಬಳಲಿದ ಕಣ್ಣುಗಳಿಂದ ನನ್ನ ನೋಡಿದ. ನಮ್ಮಿಬ್ಬರದೂ ಒಂದೇ ಕತೆ ಕರ್ಣಾ, ಹೆತ್ತಬ್ಬೆಯಿಂದ ದೂರಾಗಿ ಇನ್ಯಾರದೋ ಆಶ್ರಯದಲ್ಲಿ ಬೆಳೆದವರು ನಾವು. ಇಬ್ಬರೂ ಹೆತ್ತಮ್ಮನ ಎದೆಗೆ ಸಹಜವಾಗಿ ಗುದ್ದಿ ಕುಡಿವ ಹಾಲಿಂದ ವಂಚಿತರೇ. ಇಬ್ಬರೂ ಹೆತ್ತಮ್ಮನ ಲಾಲಿಯನ್ನ ಕೇಳದವರೇ. ಇಬ್ಬರೂ ಹೆತ್ತವ್ವನ ಹೊಟ್ಟೆಗೊದ್ದು ಅವಳಿಂದ ಮುದ್ದಿಸಿಕೊಳ್ಳದವರೇ. ಇಬ್ಬರೂ ತೊಟ್ಟಿಲು ತೂಗುವ ಹೆತ್ತವಳ ಕಿರುನಗೆಗೆ ಕಿಲಕಿಲನೆ ಬೊಚ್ಚುಬಾಯಿ ಬಿಟ್ಟು ನಗಲು ಸಿಗದವರೇ.. ಇವಿಷ್ಟನ್ನೂ ಕರ್ಣನ ಕಣ್ಣುಗಳಲ್ಲಿ ಕಣ್ಣಿಟ್ಟು ಅಂದೆ. ಅವನ ಬಳಲಿಕೆ ಕೊಂಚ ತಗ್ಗಿತು, ಅರ್ಥವಾಗಿತ್ತು ಅವನಿಗೆ, ಕಣ್ಣುಗಳಲ್ಲಿ ತೃಪ್ತಿಯ ಮೊಹರುಗಳಿದ್ದವು. ಕಾಲಮೇಲೆ ಮಲಗಿದ, ಹಾಗೇ ಕಾಲದಲ್ಲಿ ಮಲಗಿದ!

ಮಲಗಿದೆಯಾ ರಾಧೆ, ಓದುತ್ತಾ ಓದುತ್ತಾ? ನಿನಗೆಂದೇ ಎರಡು ನವಿಲುಗರಿಗಳ ಇಟ್ಟಿದ್ದೇನೆ ನೋಡು, ಕಪಿಲೆ ಯಮುನೆಯರನು ಕೇಳಿದೆ ಅಂತ ತಿಳಿಸು, ಹುಲ್ಲುಗಾವಲಿನ ಪ್ರವೇಶದಲ್ಲಿ ದೊಡ್ಡ ಮರವಿತ್ತಲ್ಲಾ, ಅಲ್ಲಿದ್ದ ಗಿಳಿಗಳ ಹೊಸ ಸಂತತಿ ಹುಟ್ಟಿರಬಹುದೀಗ, ಅವುಗಳಿಗೆ ನನ್ನ ಮತ್ತು ಅವರ ಪೂರ್ವಜರ ಒಡನಾಟದ ಕತೆ ಹೇಳು, ಕತೆಯಲ್ಲಿ ನಿನ್ನನ್ನೂ ಸೇರಿಸಿಕೊಂಡೇ ಹೇಳಬೇಕು ಮರೆಯಬೇಡ. ಬೃಂದಾವನದ ಸಖಿಯರಿಗೆ ಬೇಕಿದ್ದರೆ ಚೂರು ಹೊಟ್ಟೆಯುರಿಸು ಕೃಷ್ಣ ನನಗೆ ಮಾತ್ರ ಪತ್ರ ಬರೆದನೆಂದು. ಕೊಳಲ ಮೇಲಿನ ಧೂಳೊರೆಸು. ಬಂಡೆಗಳ ಮೇಲೆ ಹಚ್ಚಿಟ್ಟ ಬೆರಣಿಗಳ ಹೆಕ್ಕು. ಗಡಿಗೆಯಿಂದ ಇಷ್ಟಿಷ್ಟೇ ಇಷ್ಟಿಷ್ಟೇ ತೆಗೆದು, ನನ್ನ ಗೋಕುಲದ‌ ದಿನಗಳಿಗೆ ಬೆಣ್ಣೆ ಹಚ್ಚು. ಕೃಷ್ಣ ಸಿಗುತ್ತಾನೆ ಒಡೆದ‌ ಮಡಕೆಯ ಚೂರುಗಳಲ್ಲಿ, ಕೃಷ್ಣ ಸಿಗುತ್ತಾನೆ ಕಳ್ಳ ಹೆಜ್ಜೆಗಳ ಪುಟ್ಟ ಮಕ್ಕಳ ಸಲಿಗೆಯಲ್ಲಿ, ಕೃಷ್ಣ ಸಿಗುತ್ತಾನೆ ಕದ್ದು ನೋಡುವ ಕಳ್ಳ ಯೌವನದ ನಾಚಿಕೆಯಲ್ಲಿ, ಕೃಷ್ಣ ಸಿಗುತ್ತಾನೆ ನೀನು ಸವರುವ ಆ ಕೊಳಲಿನ‌ ರಂಧ್ರಗಳಲ್ಲಿ, ಕೃಷ್ಣ ಸಿಗುತ್ತಾನೆ ನಿನ್ನ ಪರವಶದ ನಿದ್ರೆಯಲ್ಲಿ.. ಕೃಷ್ಣ ಸಿಗುತ್ತಾನೆ ನಿನ್ನ ನಿತ್ಯ ದ್ವಂದ್ವಗಳಲ್ಲಿ, ಕೃಷ್ಣ ಸಿಗುತ್ತಾನೆ ನೀನು ಅಂಟಿಕೊಳ್ಳುವ ಕತ್ತಲುಗಳಲ್ಲಿ, ಕೃಷ್ಣ ಸಿಕ್ಕೇ ಸಿಗುತ್ತಾನೆ ನೀನು ಬದುಕುವ ರೀತಿಯಲ್ಲಿ.. ಕೃಷ್ಣ ಸಿಗದೇ ಎಲ್ಲಿ ಹೋಗುತ್ತಾನೆ ರಾಧೆಯ ಪ್ರೀತಿಯ ನೆರಳಿನಲ್ಲಿ...
ಮತ್ತೆ ಪತ್ರ ಬರೆಯುತ್ತೇನೆ ಕೃಷ್ಣ ಕದಡಿದಾಗ, ರಾಧೆ ಮುದುಡಿದಾಗ..

ಇಂತಿ ನಿನ್ನ,
ಗೋಪಾಲ

~`ಶ್ರೀ'
    ತಲಗೇರಿ

ಬುಧವಾರ, ಜನವರಿ 10, 2018

ಮಹಾಮಾಯಿಯ ಸನ್ನಿಧಾನದಲ್ಲಿ...

ಈ ಪ್ರಕೃತಿಯಲ್ಲಿ ಪ್ರತಿಯೊಬ್ಬ ಮನುಷ್ಯನಲ್ಲೂ ಒಂದಲ್ಲ ಒಂದು ಸಮಯದಲ್ಲಿ ಹುಟ್ಟು ಸಾವಿನ ಬಗೆಗಿನ ವಿಶ್ಲೇಷಣೆ ಹುಟ್ಟೇ ಹುಟ್ಟುತ್ತದೆ. ಭೌತಿಕ ಜಗತ್ತಿನ ಆತ್ಮರತಿಗಳನ್ನ ಇನ್ನಷ್ಟು ಮತ್ತಷ್ಟು ದಿನ ಪಡೆಯಲೇಬೇಕು ಅನ್ನುವುದು ಯಾವತ್ ಕಾಲದ ಆಸೆಯಾದರೆ , ವಯಸ್ಸೆನ್ನುವುದು ಅದೆಲ್ಲಕ್ಕೂ ತೆರೆ ಎಳೆಯುವ ಮಹಾ ಕಲಾವಿದ.. ನಿಯಮಗಳ ಪರೀಕ್ಷೆಯಾದಲ್ಲಿ ಬಹುಶಃ ಒಂದು ವ್ಯವಸ್ಥೆಯಲ್ಲೇ ಏರುಪೇರಾಗುವ ಸಂಭವಗಳೇ ಜಾಸ್ತಿ.. ಹೀಗೆ ಸಾವಿನ ಪರಿಕಲ್ಪನೆಯನ್ನಿಟ್ಟುಕೊಂಡು ಶ್ರೀ ಚಂದ್ರಶೇಖರ ಕಂಬಾರ ಅವರಿಂದ ರಚಿತವಾದ ನಾಟಕ `ಮಹಾಮಾಯಿ'..

     ಮನುಷ್ಯನ ಅಥವಾ ಜೀವಿಯ ಸಾವಿನ ಮುನ್ಸೂಚನೆ ಮೊದಲೇ ತಿಳಿದಿದ್ದಲ್ಲಿ , ಉಳಿಸುವ ಎಲ್ಲಾ ವ್ಯರ್ಥ ಪ್ರಯತ್ನಗಳನ್ನ ಬಹುಶಃ ಬಿಟ್ಟುಬಿಡಬಹುದು.. ಅಥವಾ ಬದುಕಿನ ಮುನ್ಸೂಚನೆ ದೊರೆತಲ್ಲಿ , ಶತಾಯಗತಾಯ ಪ್ರಯತ್ನಿಸಿ ನಾಳೆಗಳನ್ನ ಕಟ್ಟಿಕೊಡಬಹುದು.. ಒಂದು ವೇಳೆ ಸಾವು ಹತ್ತಿರದಲ್ಲಿದೆ ಅಂತ ತಿಳಿದಿದ್ದರೂ , ಅದನ್ನು ಮುಂದೂಡುವ ಎಲ್ಲ ಅರ್ಥಪೂರ್ಣ ಪ್ರಯತ್ನಗಳಿದ್ದರೆ ಫಲಿಸುತ್ತವೆಯೇ? ಅಥವಾ ಸಾವಿನ ಜೊತೆ ನಿರಂತರ ಮಾತುಕತೆಯಲ್ಲಿದ್ದು ದಿನ ಕಳೆಯುವವರ ಮನಃಸ್ಥಿತಿಯಾದರೂ ಹೇಗಿದ್ದೀತು..? ಕೊನೆಯ ಹಂತದಲ್ಲೂ ಬದುಕಿನ ಭರವಸೆಯೊಂದು ಸಿಕ್ಕಾಗ ಮಾರ್ಪಾಡುಗಳೇನಾಗಬಹುದು; ದೈಹಿಕವಾಗಿ ಮತ್ತು ಮಾನಸಿಕವಾಗಿ.. ! ಹೀಗೆ ಸಾವಿನ ಅಧಿದೇವತೆಯಾದಂಥ ಮಹಾಮಾಯಿಯ ಜೊತೆಗಿನ ಸಂಘರ್ಷದ ಕತೆಯೇ ಈ ನಾಟಕ.. ಆಳ್ವಾಸ್ ರಂಗ ಅಧ್ಯಯನ ಕೇಂದ್ರದವರಿಂದ ೧೦೫ ಪ್ರದರ್ಶನಗಳನ್ನ ಕಂಡು , ಇನ್ನೂ ಹಲವಾರು ಕಡೆ ಪ್ರದರ್ಶನಗೊಳ್ಳಬೇಕಿರುವ ನಾಟಕ ಅಂದರೆ ಉತ್ಪ್ರೇಕ್ಷೆಯೇನಲ್ಲ.. ರಂಗ , ನಾಟಕ , ಬಣ್ಣ ಇವೆಲ್ಲಕ್ಕೂ ಇಂದಿನ ಕಾಲಘಟ್ಟದಲ್ಲಿ ಬೇರೆಯದೇ ಮಾಧ್ಯಮ ದೊರೆತಿದ್ದರೂ , ಒಂದು ನಾಟಕ ಇಷ್ಟು ಪ್ರದರ್ಶನಗಳನ್ನ ಕಾಣುತ್ತದೆ ಅಂತಾದಲ್ಲಿ ಅದರ ಗಟ್ಟಿತನವನ್ನ ಊಹಿಸಲೇಬೇಕು.. ಇನ್ನೂ ಈಗಷ್ಟೇ ರಂಗವನ್ನ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಾ ಇವರು ಅನ್ನುವ ಅಭಿನಯ ಪ್ರತಿಯೊಬ್ಬರಲ್ಲೂ ಕಾಣ್ತಿತ್ತು.. ಪುಷ್ಪಗಂಧಿ ಅನ್ನುವ ಪಾತ್ರ ರಾಜಕುಮಾರಿಯ ಸಖಿಯಾಗಿ , ಛೇಡಿಸುವ ನಮ್ಮೆಲ್ಲ ಗೆಳೆಯ ಗೆಳತಿಯರನ್ನ ನೆನಪಿಸಿದರೆ , ರಾಜಕುಮಾರಿಯ ಪಾತ್ರ ಒಂದೆಡೆ ಅದೆಷ್ಟೇ ವೈಭೋಗವಿದ್ದರೂ ಅದೆಲ್ಲವನ್ನು ಬಿಟ್ಟು ಹೊರಡುವ , ಕೊನೆಗೆ ಪ್ರೇಮದ ತಹತಹಿಕೆಯಲ್ಲಿ ಕನವರಿಸುವ ನಮ್ಮದೇ ಜಗತ್ತಿನ ಒಬ್ಬಳು ಹುಡುಗಿಯಂತೆ ತೋರಿದರೆ , ವಿದೂಷಕ ಮತ್ತು ಅವನ ಹೆಂಡತಿಯ ಪಾತ್ರಧಾರಿಗಳು ನವಿರು ಹಾಸ್ಯದ ಕಚಗುಳಿ ಇಡುತ್ತಾರೆ.. ಇನ್ನು ವೈದ್ಯನ ಪಾತ್ರದಲ್ಲಿ ಮೊದಮೊದಲು ಅಂಜಿಕೆ , ಅಸಹಾಯಕತೆ ನಿಧಾನವಾಗಿ ಹೋಗುತ್ತಾ , ದೃಢ ಮನಸ್ಸು ಆವರಿಸಿಕೊಳ್ಳುವ ಬಗೆ ಮತ್ತು ಕೊನೆಗಿನ ಚಾತುರ್ಯ ಎಲ್ಲಾ ಚೆನ್ನಾಗಿ ಬಿಂಬಿತ.. ಆಗಾಗ ಕರ್ತವ್ಯದ ಸೂಚನೆ ಕೊಡುವ ಕಠೋರ ಮುದುಕಿಯ ಪಾತ್ರ ನಮ್ಮೆಲ್ಲರೊಳಗಿನ ಧ್ವನಿಯಂತೆ ಕಾಣುತ್ತದೆ.. ಹಾಗೇ ಒಂದು ಗುಂಪು ವಿಚಿತ್ರ ಪಾತ್ರಗಳದ್ದು; ಅವು ನಗಿಸ್ತವೆ ಮತ್ತು ಒಟ್ಟುಕುಟುಂಬವನ್ನ ನೆನಪಿಸ್ತವೆ.. ಇನ್ನು ಸಾವಿನ ಅಧಿದೇವತೆಯಾದ ಮಹಾಮಾಯಿಯ ಪಾತ್ರ..ಗಾಂಭೀರ್ಯ,ಕ್ರೌರ್ಯ, ಕಾಠಿಣ್ಯ ಜೊತೆಗೆ ಮಮತೆಯನ್ನೂ ಒಳಗೊಂಡಂಥ ಪಾತ್ರ ಅದು.. ಇಡೀ ಕತೆಯಲ್ಲಿ ಸಾವಿನ ಬಗೆಗೆ ಭಯ ಹುಟ್ಟಿಸುವ, ತನ್ನದೇ ಅಂತಿಮ ಡಿಂಡಿಮ ಧ್ವನಿ ಅಂತ ಎಲ್ಲರ ಎದೆಯಲ್ಲೂ ನರ್ತಿಸುವ ಪಾತ್ರದಲ್ಲಿ ಸ್ನೇಹಾ ಭಯಂಕರವಾಗಿಯೇ ಅಭಿನಯಿಸಿದ್ದಾರೆ.. ಪ್ರವೇಶವೇ ಚೆಂದ.. ಹೊಗೆಯಾಡುವ ಸ್ಮಶಾನದ ಭಾವ.. ಮುಖದಲ್ಲಿ ಕ್ರೌರ್ಯ , ಎದೆಯಲ್ಲಿ ವಾತ್ಸಲ್ಯ.. ಸೃಷ್ಟಿ ನಿಯಮಗಳ ಪರಿಪಾಲನೆಯ ಸೂಚನೆ ಕೊಡೋ ಮಾರ್ಗದರ್ಶಕಿ ಹೀಗೇ ಹೀಗೇ.. ಇವೆಲ್ಲಕ್ಕೂ ಆ ಸಂಪೂರ್ಣ ಸನ್ನಿವೇಶಗಳನ್ನ ಕಟ್ಟಿಕೊಟ್ಟಿದ್ದು ಬೆಳಕಿನ ಸಂಯೋಜನೆ; ಅಬ್ಬಾ !! ಬೆಳಕಿನ ಸಂಯೋಜನೆಯನ್ನ ನೋಡಲಿಕ್ಕಾದರೂ ನಾಟಕಕ್ಕೆ ಬರಲೇಬೇಕು ಅನ್ನುವಷ್ಟು ಚೆಂದ.. ಬೇರೆ ಬೇರೆ ಬಣ್ಣಗಳನ್ನ ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡಿದ್ದು ಇಡೀ ರಂಗ ಸ್ಥಳ ಕಲಾಕೃತಿಯಂತೆ ಗೋಚರಿಸುತ್ತಿತ್ತು.. ಇನ್ನು ಹಾಡುಗಾರಿಕೆ ಮತ್ತು ಸಂಗೀತ ಹಿತವಾಗಿತ್ತು.. ಇವೆಲ್ಲವನ್ನ ತೆರೆಯ ಮೇಲೆ ತಂದಂಥವರು ಜೀವನ್ ರಾಂ ಸುಳ್ಯ.. ಇವರ ನಿರ್ದೇಶನದಲ್ಲಿ ಅಚ್ಚುಕಟ್ಟುತನ ಎದ್ದು ಕಾಣ್ತಿತ್ತು.. ಕೊನೆಯಲ್ಲಿ ಅವರ ಮಾತುಗಳಲ್ಲಿ ಅವರ ಹಳೆಯ ದಿನಗಳ ಮೆಲುಕಿತ್ತು..

     ಒಟ್ಟಿನಲ್ಲಿ ಡಿಜಿಟಲ್ ಮಾಧ್ಯಮಗಳಿಂದ ಯಾವತ್ತೂ ಸಿಗದ ಅನುಭವಗಳು ಈ ರಂಗಭೂಮಿಯದ್ದು.. ಒಂದಷ್ಟು ಹೊತ್ತು ನಾವು ಮತ್ತು ರಂಗದಲ್ಲಿ ನಡೆಯುತ್ತಿರುವ ಕತೆ ಇವೆರಡರ ಜೊತೆ ಕಳೆದುಹೋಗಬೇಕಿದ್ದಲ್ಲಿ ಇಂತಹ ನಾಟಕಗಳನ್ನ ಆಗಾಗ ನೋಡಲೇಬೇಕು.. ಮತ್ತೆಲ್ಲಾದರೂ ಮಹಾಮಾಯಿ ನಾಟಕದ ಪ್ರದರ್ಶನವಿದ್ದಲ್ಲಿ ಖಂಡಿತಾ ಹೋಗಿ, ರಂಗದ ಆಸ್ವಾದನೆ ರಂಗದ ಇದಿರಲ್ಲೇ ಚೆಂದ..

~`ಶ್ರೀ'
    ತಲಗೇರಿ

ಮುಂಬೈಯಿಂದ ರಥಬೀದಿಗೆ ಬಂದ `ಬಣ್ಣದ ಕಾಲು'...



ನಾಗರಿಕತೆಯ ವಿಕಾಸವಾದಂತೆ ಹಳ್ಳಿಗಳು ಪಟ್ಟಣಗಳು ಮಹಾನಗರಗಳು ಅನ್ನುತ್ತಾ , ಭೌಗೋಳಿಕ ಭಿನ್ನ ಪ್ರದೇಶಗಳು ಸೃಷ್ಟಿಯಾಗ್ತಾ ಹೋದವು.. ಒಂದೇ ಭೂಮಿ , ಆದರೆ ಅಲ್ಲಿನ ಮನಃಸ್ಥಿತಿ , ಆಹಾರ ಪದ್ಧತಿ , ಜೀವನ ಶೈಲಿ ಮತ್ತು ಪ್ರಾಕೃತಿಕ ಭಿನ್ನತೆಗಳು ಎಲ್ಲಕ್ಕೂ ಅದರದ್ದೇ ಆದ ವಾತಾವರಣವನ್ನ ಕಟ್ಟಿಕೊಟ್ಟವು.. ಮಹಾನಗರದ ರಸ್ತೆಗಳ ನಿಯಾನ್ ದೀಪಗಳಿಗೂ, ಹಳ್ಳಿಯ ಗುಡಿಸಲಿನ ಲಾಟೀನು ಮತ್ತು ಚಿಮಣಿ ಬುರುಡೆಗಳಿಗೂ ಬಹುಶಃ ತಾಳೆ ಮಾಡಲು ಆಗದೇ ಇರುವಷ್ಟು ಅಂತರವೇನೋ! ಎರಡೂ ಬೆಳಕನ್ನು ಕೊಡುತ್ತವೆ ಅನ್ನುವುದು ಮಾತ್ರ ಎರಡಕ್ಕೂ ಇರುವ ಸಾಮ್ಯತೆ.. ಒಂದು ವೈಭೋಗದ ಸಂಕೇತವಾದರೆ ಇನ್ನೊಂದು ಪುರಾತನ ಜೀವನ ಪದ್ಧತಿಯ ಮೂಕ ಸಾಕ್ಷಿ.. ಹೀಗೆ ಮುಂಬೈ ಮಹಾನಗರದ ಪುಟ್ಟ ಪ್ರಪಂಚ ಮತ್ತು ಗೋಕರ್ಣದ ರಥಬೀದಿಯ ದೊಡ್ಡ ಜಗತ್ತಿನ ಸಮೀಕರಣವೇ `ಬಣ್ಣದ ಕಾಲು'

ಜಯಂತ ಕಾಯ್ಕಿಣಿ ಅನ್ನುವ ಈ ಜಾದೂಗಾರ ನನ್ನ ಮಟ್ಟಿಗೆ ಯಾವತ್ತೂ ಒಂದು ಪಿಳಿಪಿಳಿ ಕಂಗಳನ್ನ ಸದಾ ತೆರೆದಿಡುವಂತೆ ಮಾಡಬಲ್ಲ ವಿಸ್ಮಯದ ಮೂಟೆ.. ಅವರ ಪುಸ್ತಕಗಳನ್ನ ಓದುವುದಕ್ಕೆಂದು ಕೈಗೆತ್ತಿಕೊಳ್ಳುವಷ್ಟರಲ್ಲೇ ಪುಟಾಣಿ ನಗೆಯೊಂದು ಪ್ರಶಾಂತವಾಗಿ ತುಟಿಗಳಲ್ಲಿ ಅರಳುತ್ತದೆ.. ಬದುಕಿನ ದಿವ್ಯತೆಯನ್ನ ನಮ್ಮದೇ ಮನೆಯ ಪುಟ್ಟ ಪೋರನೊಬ್ಬ ಹಾಗೆ ಹೀಗೆಲ್ಲ ಓಡಾಡಿ ಹೇಳಿದಷ್ಟು ಮುದ್ದು ಮುದ್ದು.. ಅವರದೇ ಗೆಳೆಯ ಎಸ್ ಮಂಜುನಾಥ್ ಹೇಳಿದಂತೆ ಭಗ್ನ ಬದುಕಿನ ಅದೆಷ್ಟೋ ಜೀವಂತ ವಿವರಗಳು ಇವರಿಗೆ ಗೊತ್ತು ಮತ್ತು ಅವುಗಳಲ್ಲೇ ಈ ಬದುಕು ಒಂದು ದಿವ್ಯ ಎಂದು ಹೊಳೆಸುತ್ತಾರೆ.. ಬದುಕಿನ ಪರಿಶುದ್ಧ ಆವೃತ್ತಿಗಳಾದ ಇವರ ಕತೆಗಳ ಚೆಂದ ಓದುವುದರಿಂದ ಮಾತ್ರವೇ ದಕ್ಕಲಿಕ್ಕೆ ಸಾಧ್ಯ.. ಅಂಥ ಒಂದು ಓದು ನನಗೆ ಸಿಕ್ಕಿದ್ದಕ್ಕೆ ಕೆಲವು ಸಾಲುಗಳಲ್ಲಿ ನನಗೆ ದಕ್ಕಿದ್ದನ್ನ ಹೀಗೆ ತೆರೆದಿಡಲು ಹೊರಟಿದ್ದೇನೆ..

`ಬಣ್ಣದ ಕಾಲು' , ಒಟ್ಟು ೧೩ ಕತೆಗಳ ಸಂಕಲನ..ಒಂದೇ ಪುಸ್ತಕದಲ್ಲಿ ಎರಡು ಭಾಗಗಳಲ್ಲಿ ಕತೆಗಳನ್ನ ಪ್ರಸ್ತುತಪಡಿಸಲಾಗಿದೆ.. ಮೊದಲನೇ ಕತೆ `ಬಣ್ಣದ ಕಾಲು' ,‌ಇದರಲ್ಲಿ ಮುಂಬೈ ನಗರದ ನಿಬಿಡತೆಯ ಬಗ್ಗೆ ಮತ್ತು ಸಣ್ಣ ಸಣ್ಣ‌ ಖೋಲಿಗಳಲ್ಲಿ ಬದುಕು ನೂಕುವವರ ಚಿತ್ರಣವಿದೆ. ಮಹಾನಗರದ ಕನಸು ಕಂಡ ಪುಟ್ಟ ಪೋರನೊಬ್ಬ ಅಲ್ಲಿ ತನ್ನ ಗೆಳೆಯನಿಗಾಗಿ ಬಣ್ಣದ ಕಾಲು ತರುವ ಕನಸು ಕಾಣುತ್ತಾನೆ. ಮಗನ‌ ಕೀಟಲೆಗಳನ್ನು ಸಹಿಸಲಾರದೇ ಅವನನ್ನು ರಿಮಾಂಡ್ ಹೋಮಿಗೆ ಸೇರಿಸುವ ತವಕ ಈ ಪುಟ್ಟ ಹುಡುಗನ ತಂದೆ ತಾಯಿಯರದ್ದು.. ಮಹಾನಗರದ ಗಡಿಬಿಡಿ ತಂದೆ ಮತ್ತು ಮಗ ಇಬ್ಬರನ್ನೂ ಬೆಚ್ಚಿಬೀಳಿಸುತ್ತದೆ.. ಪುಟ್ಟ ಕನಸುಗಳನ್ನ ಬೆನ್ನಟ್ಟಿದವರ ಕತೆ ಇದು. ಇನ್ನು ಎರಡನೇ ಕತೆ ಚೌತಿ ಚಂದ್ರ.. ಬಸ್ಸಿನ ಡ್ರೈವರನೊಬ್ಬ ತನ್ನ ನಿತ್ಯದ ಚಾಕರಿಯಿಂದ ಬೇಸತ್ತು ತನ್ನ ಒಳಮನಸ್ಸಿನ ತುಡಿತದ ಬಾಲ ಹಿಡಿದು ಊರಿಗೆ ಬಂದಾಗ , ಅಲ್ಲಿನ‌ ಅವನ ಪ್ರಶ್ನೆಗಳಿಗೆ ಸಿಗುವಂಥ ಉತ್ತರ ಮತ್ತು ಆ ಉತ್ತರ ಕೊಟ್ಟ ವ್ಯಕ್ತಿಗೂ ವೃತ್ತಿಗೂ ಇರುವಂಥ ಸಂಬಂಧಗಳು, ಮಾನವೀಯ ತುಡಿತಗಳು ಮತ್ತು ಅನಿರೀಕ್ಷಿತ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲುತ್ತವೆ. ಇನ್ನು ಮುಂದಿನ‌ ಕತೆ ಸೇವಂತಿ‌ ಹೂವಿನ ಟ್ರಕ್ಕು.. ವಯಸ್ಸಾಗಿ ಓಡಾಡಲು ಆಗದೇ ಇರುವವಳೊಬ್ಬಳ ಕತೆ; ಮುದುಕಿ ಮತ್ತು ಆ ಮನೆಯವರು ಇಬ್ಬರೂ ಒಬ್ಬರಿಗೊಬ್ಬರು ಋಣದ ನೆರಳಿನಲ್ಲಿರುವವರು.. ಇಬ್ಬರ ಮನಸ್ಸಿನಲ್ಲಿಯೂ ನಡೆಯುವ ಜವಾಬ್ದಾರಿಯ ಕದನ ಮತ್ತು ಪೀಕಲಾಟದ ವ್ಯಥೆ ಈ ಕತೆ.. ನಾಲ್ಕನೆಯ ಕತೆಯ ಹೆಸರು ಅಪರೂಪ.. ಅಂಗವೈಫಲ್ಯದಿಂದ ಸಮಾಜದ ಕಣ್ಣಿನಿಂದ ದೂರವೇ ಉಳಿಯುತ್ತಿದ್ದ ಹುಡುಗಿಯ ಭಾವಚಿತ್ರ ತೆಗೆಯುವ ಒಂದು ಸಣ್ಣ ಅಂಶವಿಟ್ಟುಕೊಂಡ ಕತೆಯ ಅಂತ್ಯ ಎಂಥವರನ್ನೂ ಒಂದು ಕ್ಷಣ ವಿಚಲಿತರನ್ನಾಗಿಸುತ್ತದೆ. ಆದರೆ ಆ ಹುಡುಗಿ ಒಂದು ಚೆಂದ ಶಿಶುವಿನಂತೆ ಉಳಿದುಬಿಡುತ್ತಾಳೆ ಅದೇ ಮಂದಹಾಸದಲ್ಲಿ!.. ಮತ್ತೊಂದು ಕತೆ `ಹೊಸ್ತಿಲು'.. ಇಲ್ಲಿ ಸಾಂಸಾರಿಕ ಬದುಕನ್ನು ಕಟ್ಟಿಕೊಡುತ್ತಾ , ಸತ್ಯತೆಯ ಹುಡುಕಾಟ ಮತ್ತು ಪ್ರೀತಿಯ ಹಂಬಲ ವ್ಯಕ್ತವಾಗಿದೆ.. ಇನ್ನು ಮೊದಲನೇ ಭಾಗದ ಕೊನೆಯ ಕತೆ ದಿಟ್ಟಿಬೊಟ್ಟು , ಒಬ್ಬ ಕಲಾವಿದನ ಬದುಕನ್ನ ಒಂದು ಕಡೆಯಲ್ಲಿ ಹೇಳ್ತಾ , ಸಮಾಜದ ಚಿಂತಕನೊಬ್ಬ ಆಸ್ಪತ್ರೆಯಲ್ಲಿ ಮರುಗುವ ಕಥಾನಕ ಇದು.. ಖಾಯಿಲೆ ಕೂಪದಲ್ಲೂ ಬದುಕು ಜಡೆ ಹೆಣೆದ ಪುಟ್ಟ ಬಾಲೆಯಂತೆ ಮತ್ತು ಜಡೆ ಹೆಣೆವ ಅಮ್ಮನಂತೆ ಜೀವಂತವಾಗಬಲ್ಲದು ಅನ್ನುತ್ತದೆ ಈ ಕತೆ..

ಇನ್ನು ಭಾಗ ಎರಡರಲ್ಲಿನ ಮೊದಲ ಕತೆ ಸ್ವಪ್ನದೋಷ.. ಸಂಸಾರವಿದ್ದೂ ಕೆಲಸದ ನಿಮಿತ್ತ ದೂರ ಇರುವವನೊಬ್ಬ ಮತ್ತು ಚಿನ್ನದ ಬಳೆಯ ಕನಸು ಕಾಣುವ ಅವನ ಹೆಂಡತಿ.. ಇಲ್ಲಿ ಹೆಣ್ಣು ಇರಬಹುದಾದ ವಿವಿಧ ಪಾತ್ರಗಳಲ್ಲಿ ಆಕೆ ಅವನಿಗೆ ಎದುರಾಗುತ್ತಾಳೆ.. ಸ್ವಾವಲಂಬನೆಯ ಪ್ರತಿಜ್ಞೆಯಾಗಿ ಕತೆ ಉಳಿದುಹೋಗುತ್ತದೆ.. ಮುಂದಿನ ಕತೆ ಟ್ರೈಸಿಕಲ್.. ಬಾಲ್ಯವನ್ನ ಕೆದಕುವ ಮತ್ತು ನೆರೆಹೊರೆಗಳ ಆತ್ಮೀಯತೆಯನ್ನ ವರ್ಷಾನುವರ್ಷಗಳವರೆಗೂ ಕಾಪಿಡುವ ಕತೆ..ಮುಗ್ಧತೆಯೆದುರು ಸ್ವಾರ್ಥ ಕರಗಬೇಕು ಅನ್ನುವುದನ್ನ ಸೂಕ್ಷ್ಮವಾಗಿ ಕಟ್ಟಿಕೊಡುವ ಕತೆಯಿದು.. ಗಾಳಿಮರದ ನೆಳಲು ಅನ್ನುವ ಕತೆಯಲ್ಲಿ ಜೈಲಿಗೆ ಹೋದ ಗಂಡನನ್ನ ಕಾಣಲು ಹಾತೊರೆಯುವ ಮತ್ತು ಅವನ ಬರುವಿಕೆಯಲ್ಲಿ ಮಾಯವಾಗುವ ಅಸೂಯೆ ಮತ್ತು ಅವನೆಡೆಗಿನ ತಹತಹಿಕೆ, ಚಡಪಡಿಕೆಗಳ ಕತೆಯಲ್ಲಿ ಅವ ಒಂದು ಕ್ಷಣದ ಗಾಳಿಯಂತೆ ಬಂದುಹೋಗುತ್ತಾನೆ.. ಇನ್ನು ತೀರ ಎನ್ನುವ ಕತೆಯಲ್ಲಿ ಸಾವು ಅಪರಿಚಿತರನ್ನೂ ಬಂಧುಗಳನ್ನಾಗಿಸುತ್ತದೆ; ಸತ್ತುಬಿದ್ದ ಮೀನಿಗೆ ಜೀವ ಬರಲಿ ಎಂದು ಗೋಳಾಡುವವರ ಕತೆ, ಆದರೆ ಕೊನೆಗೆ ಎಲ್ಲರೂ ಅವರವರ ದಾರಿ ಹಿಡಿಯಲೇಬೇಕು, ಬದುಕು ಎಂದಿನಂತೆ ಮಾಮೂಲಿಯಾಗಿಬಿಡುತ್ತದೆ ಅನ್ನುತ್ತದೆ ಈ ಕತೆ.. ಚುಕ್ಕಾಣಿ ಅನ್ನೋ ಕತೆಯಲ್ಲಿ ಯಾರದೋ ಆಗಮನದಲ್ಲಿದ್ದವರಿಗೆ ಇನ್ನ್ಯಾರದ್ದೋ ಆಗಮನವಾಗಿ, ಸಮುದ್ರದಲ್ಲಿನ ಅಲೆಗಳು ಇನ್ಯಾವುದರದ್ದೋ ಮುನ್ಸೂಚನೆಯಂತೆಲ್ಲಾ ಭಾಸವಾಗಿ ಕೊನೆಗೆ ಆಸೆಯ ಲಾಂಚು ಮರಳಿ ಬಂದು ನಿಟ್ಟುಸಿರುಬಿಡುತ್ತದೆ.. ಮತ್ತೊಂದು ಕತೆ `ಬಿಡು ಬಿಡು ನಿನ್ನಯ..' , ಇದು ಮಾಸ್ತರರಿಬ್ಬರ ಕತೆ.. ಪ್ರಕೃತಿಯನ್ನ ಉಳಿಸಿಕೊಳ್ಳಬೇಕು ಅನ್ನುವವರೊಬ್ಬರಾದರೆ, ಅವರನ್ನ ಕಂಡರೆ ಭುಸುಗುಡುವ ಇನ್ನೊಬ್ಬರು.. ಇಬ್ಬರ ಬದುಕೂ ಬದಲಾದಾಗ ಇಬ್ಬರಲ್ಲೂ ಚಡಪಡಿಕೆ.. ಕೊನೆಗೆ ವೃದ್ಧಾಪ್ಯದಲ್ಲೂ ದ್ವೇಷದ ಕಿಚ್ಚಿದ್ದವನಲ್ಲಿ ನಿಸ್ತೇಜ ಬೂದಿ ಮಾತ್ರ ಇದ್ದಂತೆನಿಸತೊಡಗುತ್ತದೆ.. ಆಕ್ರೋಶವೆಲ್ಲ , ದೈನ್ಯತೆಯ ದನಿಯಾಗಿ ಬದಲಾದಂತನಿಸುತ್ತದೆ.. ವಿಕೃತ ಗೆಲುವಿನ ಆನಂದದಲ್ಲಿದ್ದವನೊಬ್ಬ ಕಳೆದುಕೊಂಡ ಬದುಕಿಗಾಗಿ ಹಲುಬುವ ಒಳದನಿಯಲ್ಲಿ ಸೋತುಹೊಗುತ್ತಾನೆ.. ಇನ್ನು ಕೊನೆಯ ಕತೆ ಚಂದ್ರಶಾಲೆ..  ಜಾತ್ರೆಯ ಸಂದರ್ಭವೊಂದನ್ನ ತೆಗೆದುಕೊಂಡು ಅಲ್ಲಿನ ಮೂರು ಭಿನ್ನ ವ್ಯಕ್ತಿಗಳ ಕುರಿತಾಗಿ ಕತೆಯಿದೆ.. ರಥಬೀದಿಯೇ ಈ ಎಲ್ಲಾ ಕತೆಗಳು ಸಂಧಿಸುವ ಜಾಗ..  ತೇರೊಂದು ಕಡೆ ಕದಲದೇ ನಿಂತಿದ್ದರೆ ತೇರನ್ನೇ ತನ್ನ ಗಂಡ ಎನ್ನುವವಳೊಂದು ಕಡೆ , ತೇರನ್ನ ನೋಡಲು ಬರುವಳೇನೋ ಎಂದು ಇಷ್ಟದ ಹುಡುಗಿಗೆ ಕಾದು ಕೂತಂಥವನೊಬ್ಬ , ಇನ್ನು ಕುಂಕುಮದ ಅಂಗಡಿಯಲ್ಲಿ ಕೂತಿರಬೇಕಾದವನೊಬ್ಬ ಬೆಟ್ಟದಲ್ಲಿ ಬಳೆಯೊಂದಿಗೆ ಪಾಳು ಗೋಡೆಗಳ ನಡುವೆ ಉಬ್ಬಸ ಬಂದಂತೆ ಆಡುತ್ತಿದ್ದ .. ಹೀಗೆ ಬೇರೆ ಬೇರೆ ಬಣ್ಣ ಆ ಜಾತ್ರೆಗೆ.. !

ಇವಿಷ್ಟು ಕತೆಗಳ ಸಾರಾಂಶಗಳಾದರೆ , ವಿವರಗಳನ್ನ ಓದಿಯೇ ಅನುಭವಿಸಬೇಕು.. ಅದರಲ್ಲೂ ನನ್ನಂಥವನಿಗೆ ನನ್ನ ಊರಿನಲ್ಲಿ ನಡೆದಿರಬಹುದಾದ ಸಾಧ್ಯತೆಗಳನ್ನ ಹೀಗೆಲ್ಲಾ ಕಾಣಬಹುದಾ ಅನ್ನುವ ಅಚ್ಚರಿಯನ್ನ ಉಳಿಸಿಕೊಳ್ಳುವ ಸಂಕಲನ ಇದು..ಸಣ್ಣ ಸಣ್ಣ ಸಂಗತಿಗಳನ್ನ ನಾವು ಗಮನಿಸುವುದು ತುಂಬಾನೇ ಕಡಿಮೆ, ಅದಕ್ಕೆಂದೇ ಬಹುಶಃ ಹತಾಶರಾಗಿ ನರಳುತ್ತೇವೆ ಬದುಕಿನ ಪುಟ್ಟ ಖುಷಿಗಾಗಿ.. ಕಾಯ್ಕಿಣಿಯವರ ಕತೆಗಳಲ್ಲಿ ಎಲ್ಲಕ್ಕೂ ಜೀವವಿದೆ, ಕೈಮುರಿದ ಕುರ್ಚಿ, ರಾತ್ರಿ ಪಾಳಿಯ ಬಸ್ಸು , ಇಂಜೆಕ್ಷನ್ನಿನ ವಾಸನೆ ಸೂಸುವ ಅಸ್ಪತ್ರೆ , ಉಪ್ಪುಗಾಳಿ , ಕಂಕುಳ ಬೆವರು , ರಸ್ತೆ ಬದಿಯ ಅಂಗಡಿ, ಕದ್ದುತಂದ ಸೀಯಾಳ, ರಾತ್ರಿ ಕಳ್ಳ ಚಂದ್ರ.. ಹೀಗೇ ಹೀಗೇ.. ಯಾಂತ್ರಿಕತೆಯ ಈ ಹೊಸ್ತಿಲಲ್ಲಿ ಮತ್ತು ಹೊತ್ತಿನಲ್ಲಿ ಬರಮಾಡಿಕೊಳ್ಳಬಹುದಾದ ಬರಹಗಳು ಶ್ರೀ ಜಯಂತ ಕಾಯ್ಕಿಣಿ ಅವರದ್ದು..

~`ಶ್ರೀ'
    ತಲಗೇರಿ

ಶಹರದ ಹೊಕ್ಕುಳೊಳಗೆ.. -೪

ಶಹರದ ಹೊಕ್ಕುಳೊಳಗೆ-೪
                         ... ಕದಡಿದ ನಗೆಯ ಬಿಂಬಗಳ ಹುಡುಕಾಟ...
     ಮುಗಿಲು ತಲುಪುವ ಹುರುಪಿನ ಎತ್ತರೆತ್ತರದ ಕಟ್ಟಡದ ಕೋಣೆಗಳಿಗೆ ಒಂದೆರಡು ಚಿಕ್ಕ ಕಿಟಕಿ , ಒಂದು ಬಾಗಿಲು..ಅಂತಸ್ತಿನ ಮೇಲೊಂದು ಅಂತಸ್ತು ಜೊತೆಗೆ ತಾರಸಿ.. ನಾಲ್ಕು ಗೋಡೆಗಳ ಮೈಗೆ ಬಿಸಿಲ‌‌ ನಾಚಿಸುವ ಬಣ್ಣ.. ಅಲ್ಲೇ ಒಂದಷ್ಟು ತೇಪೆ.. ಅಲ್ಲಿ ನಡೆದಾಡಿಕೊಂಡ ಕೈಕಾಲುಗಳ ಕತೆಗಳಲ್ಲಿ ನಗೆಯೆಂಬುದೊಂದು ಮರೀಚಿಕೆ.. ಹಣೆಯ ಮೇಲಿನ‌ ನೆರಿಗೆಗಳು ಒತ್ತೊತ್ತಾಗಿ ನಿಲ್ಲುತ್ತವೆ; ಕೆನ್ನೆಯೆಂಬುದಕ್ಕೆ ಇಲ್ಲಿ ವ್ಯಾಯಾಮವಿಲ್ಲ.. ಕಂಗಳು ಗಣಕಯಂತ್ರ ಮತ್ತು ಜಂಗಮವಾಣಿಯ ಪರದೆಗಳ ಪಿಕ್ಸೆಲ್ಗಳ ಜೊತೆಗಿನ ಸಂಭಾಷಣೆಯಲ್ಲಿ ತಮ್ಮ ಬಹುತೇಕ ಆಯಸ್ಸು ಕಳೆಯುತ್ತವೆ.. ರಾತ್ರಿಯೂಟಕ್ಕೆ ಬೆಳಗಿನ ತಿಂಡಿ, ಮಧ್ಯಾಹ್ನಕ್ಕೆ ಊಟದಂತಿರದ ಊಟ.. ಇನ್ನು ಬೆಳಿಗ್ಗೆ ಮತ್ತು ಸಂಜೆಯಲ್ಲಿ ಮೂಡ್ ಇದ್ದರೆ ಚಹಾ, ಕಾಫೀ ಹಾಗೇ ಒಂದಷ್ಟು ಚುರುಮುರಿ.. ಇಲ್ಲಾ , ತಳ್ಳುಗಾಡಿಯ ಮುಂದೆ ತನ್ನ ಅವಧಿಗಾಗಿ ಪೆಚ್ಚಾಗಿ ಕಾಯುವಿಕೆ.. ಚಪ್ಪರಿಸಿ ತಿನ್ನುವ ನಾಲಿಗೆಗೆ ಎಂದೂ ತೀರದ ರುಚಿ.. ಶಹರದ ಎಲ್ಲ ಕಟ್ಟಡದ ಗೋಡೆಗಳಿಗೂ ವಿಚಿತ್ರ ವಿಚಿತ್ರ ಕತೆಗಳ ಸೋಂಕು ತಗುಲಿರುತ್ತದೆ..
    
     ದಿನ ಬೆಳಿಗ್ಗೆ ಕೆಲಸಕ್ಕೆ ಹೋಗುವ ಮುಖದಲ್ಲಿ ಅದೆಷ್ಟೋ ನೆನಪುಗಳು ಸತ್ತ ಸೂತಕದ ಛಾಯೆ ಅಥವಾ ಭವಿಷ್ಯದ ಬೀಗದ ಕೈ ಹುಡುಕುವ ಚಿಂತೆ.. ದಪ್ಪ ದಪ್ಪ‌ ‌ಕನ್ನಡಕ ಹೊತ್ತ ಚಿಕ್ಕ ಮಕ್ಕಳ ಮೂಗಿನ ಅಳಲಿಗಿಲ್ಲಿ ನಾವು ಜಾಣ ಕಿವುಡರು.. ಕೇಜಿಗಟ್ಟಲೆ ಪುಸ್ತಕ ಹೊತ್ತ ಎರಡು ಕಾಲಿನ ಗಾಡಿಯೊಂದು ವಾಲುತ್ತಾ ವಾಲುತ್ತಾ ಶಾಲೆ ಸೇರಿಕೊಳ್ಳುತ್ತದೆ.. ( ಈ ಶಾಲೆ ಅನ್ನೋ ಶಬ್ದ ಸ್ವಲ್ಪವೇ ದಿನದಲ್ಲಿ ಶಬ್ದಕೋಶದಲ್ಲಿ ಮಾತ್ರ ಅಸ್ತಿತ್ವ ಪಡೆದು ವಿಷಾದದ ನಗೆಯೊಂದ ಬೀರುತ್ತದೆ ) ದೂರದರ್ಶನದ ಮುಂದೆ ಕುಳಿತ ಆತ್ಮವೊಂದು ಅಲ್ಲಿನ ಧಾರಾವಾಹಿಗಳ ಪಾತ್ರದ ವಿಮರ್ಶೆ ಮಾಡುತ್ತಾ ಅವುಗಳ ಕಣ್ಣೀರಿಗೆ ಇಲ್ಲಿ ಬೊಬ್ಬೆ ಹೊಡೆಯುತ್ತದೆ.. ಹೊರಗೆ ಹೋದಂಥ ಆಕೃತಿಗಳು ಟ್ರಾಫಿಕ್ಕಿನಲ್ಲಿ ಜೊತೆಗೆ ಸಿಕ್ಕಸಿಕ್ಕಲ್ಲಿ , ತಮ್ಮ‌ ಭಾಷಾಪಾಂಡಿತ್ಯ ಮೆರೆಯುವ ಎಲ್ಲ ಕಸರತ್ತು ನಡೆಸುತ್ತದೆ.. ಊರಿನ ನೆನಪಾದಾಗ ಭಾವುಕವಾಗುವ ಜೀವಗಳು ಇಲ್ಲಿ ಬಹುಶಃ ಬಹಳಷ್ಟಿವೆ.. ಅನಿವಾರ್ಯತೆ ಎಂಬ ನಾಟಕದಲ್ಲಿ ಕೈಗೆ ಸಿಕ್ಕ ಬಣ್ಣ ಮೆತ್ತಿಕೊಂಡು ರಂಗಸ್ಥಳಕ್ಕೆ ಧುಮುಕಿದವರು ನಾವುಗಳು.. ಇಂದಿಗೂ ನಮ್ಮ ನಮ್ಮ ಪಾತ್ರದ ಸ್ಪಷ್ಟ ಚಿತ್ರಣ ನಮ್ಮ ಕಣ್ಣ ರೆಪ್ಪೆಗಳ ಅಡಿಯಲ್ಲೇ ನಜ್ಜುಗುಜ್ಜಾಗಿ ನರಳುತ್ತಿದೆ.. ಸಮಾಜದ ವ್ಯವಸ್ಥಿತ ಫಿತೂರಿಯೊಳಗೆ ಸಸಾರಕ್ಕೆ ನಮ್ಮನ್ನ ನಾವು ತಳ್ಳಿಕೊಂಡು ಸಂಸಾರ ನಡೆಸುತ್ತಿರುವಂಥ ಅಕ್ಷರಸ್ಥ ಸಾಮಾನ್ಯ ಪ್ರಜೆಗಳು..
     ಇನ್ನು ಕೆಲಸ ಸಿಗದೇ ಬೇರೆ ಬೇರೆ ಊರಿನಿಂದ ಸಣ್ಣ ಸಣ್ಣ ಕೋರ್ಸ್ಗಳನ್ನ ಮಾಡಲಿಕ್ಕೆಂದು ಬರುವವರ ಅನುಭವಗಳು ಬದುಕಿನ ಇನ್ನೊಂದು ಮಗ್ಗುಲನ್ನೇ ಪರಿಚಯಿಸಿಬಿಡುತ್ತವೆ..ಈ ಎಲ್ಲಾ ಹೋರಾಟಗಳು ಮೂರು ಹೊತ್ತಿನ ಊಟ ಮತ್ತು ಕಣ್ತುಂಬ ನೆಮ್ಮದಿಯ ನಿದ್ರೆಗಾಗಿ.. ಬಹುಶಃ ಇವೆಲ್ಲವನ್ನೂ ದಕ್ಕಿಸಿಕೊಳ್ಳುವ ಓಟದಲ್ಲಿ ಎಲ್ಲರೊಂದಿಗೆ ಓಡುತ್ತಾ ಓಡುತ್ತಾ ಓಟದ ಮುಕ್ತಾಯದ ಗೆರೆ ಕಾಣಲಾಗದೇ ಕಕ್ಕಾಬಿಕ್ಕಿಯಾಗುತ್ತೇವಲ್ಲಾ ; ಅಲ್ಲಿಗೆ ಕೂದಲಿಗೆ ಬಣ್ಣ ಹಚ್ಚುವ ಸಮಯ ಬಂದಿರುತ್ತದೆ.. ಓಟದ ಮಧ್ಯ , ರಸ್ತೆಯ ಪಕ್ಕ ನಮ್ಮ ಹಳೆಯ ಸ್ನೇಹವೊಂದು ನಮ್ಮ ಕುಟುಂಬದ ಜೊತೆ ನಿಂತು ಕೈಬೀಸಿತ್ತೇನೋ ; ಗಮನಿಸಲೇ ಇಲ್ಲ.. ಒಂದು ಕಿರುನಗೆ ನಮ್ಮ‌‌ ಜೊತೆಯೇ ಓಡುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನ ಪರಿಚಯಿಸುತ್ತಿತ್ತೇನೋ ; ಆ ಕಡೆ ತಿರುಗುವುದನ್ನೇ ಮರೆತುಬಿಟ್ಟೆವಲ್ಲಾ... ನಾವೇ ಚಿಕ್ಕವರಿದ್ದಾಗ ನೆಟ್ಟಿದ್ದ ಗಿಡವೊಂದು ಈಗ ಹಣ್ಣು ಕೊಡಲು ಹಂಬಲಿಸುತ್ತಿತ್ತೇನೋ, ಗುರುತೇ ಹತ್ತಲಿಲ್ಲ.. ಈಗ ಮೈಲಿಗಲ್ಲುಗಳು ದಾಟಿಹೋದವು ; ಎಲ್ಲೂ ನಮ್ಮ ಹೆಸರಿಲ್ಲ.. ಬರೀ ದೂರದ ಅಳತೆಗಷ್ಟೇ ಅದನ್ನ ಬಳಸಿಕೊಂಡೆವು.. ದೂರ ಮುಗಿಯಲೇ ಇಲ್ಲ.. ಹತಾಶ ಸಂಜೆಯಲ್ಲಿ ಹಪಹಪಿಸುತ್ತೇವೆ, ಕಾಲು ಸೋತಿದ್ದು ಅರಿವಾಗುತ್ತದೆ.. ಕೈಕೊಟ್ಟು ನಿಲ್ಲೋಣವೆಂದರೆ ಯಾರೊಬ್ಬರ ಹೆಗಲಿಗೂ ನಮ್ಮ ಬೆವರಿನ ಕಲೆಯಿಲ್ಲ..
     ಮಹಾನಗರಕ್ಕೆ ಬಹಳಷ್ಟು ಬಣ್ಣದ ನೆರಳುಗಳಿವೆ..ಗಡಿಬಿಡಿಯನ್ನ ಬಗಲಿಗೇ ಜೋತುಹಾಕಿಕೊಂಡು ಏಳುವ ನಗರ, ಮಧ್ಯಾಹ್ನದ ಹೊತ್ತಿಗೆ ಹೊಟ್ಟೆಗಿಷ್ಟು ಬೀಳಲೆಂದು ಹಾತೊರೆಯುತ್ತದೆ.. ಸಂಜೆಯಾಗುತ್ತಿದ್ದಂತೆ ಎಣ್ಣೆಯ ಕಮಟು ವಾಸನೆಯನ್ನ ಸೂಸುತ್ತ ನಿಯಾನ್ ದೀಪಗಳ ಮಾದಕತೆಗೆ ಮೈಮುರಿಯುತ್ತದೆ.. ಬೀದಿಗಳಲ್ಲಿ ಬೆಳಕು ಮಾರಾಟಕ್ಕೆ ಸಿಗುತ್ತದೆ; ಕತ್ತಲೆಯಲ್ಲಿ ಯಾರಿಗೂ ಗೊತ್ತಿರದೇ ಸಣ್ಣ ಸಣ್ಣ ನರಳುವಿಕೆಯ ಹಂಚಿಕೊಂಡಂತೆ.. ರಾತ್ರಿ ಬೆಳಗಾಗುತ್ತದೆ, ಕೀಲುಗಳು ಎಂದಿನಂತೆ ಸಹಕರಿಸುತ್ತವೆ; ಒಮ್ಮೊಮ್ಮೆ ಶಪಿಸಿಕೊಳ್ಳುತ್ತ.. ಮಹಾನಗರ ಎಂದಿನಂತೆ ಎಲ್ಲವನ್ನೂ ಬಚ್ಚಿಟ್ಟುಕೊಂಡ ತಟಸ್ಥ ಗುಟ್ಟಂತೆ ಉಳಿದುಬಿಡುತ್ತದೆ.. ಶಹರದ ಹೊಕ್ಕುಳೊಳಗೆ ನಗೆಯ ಬಿಂಬಗಳ ಹುಡುಕಾಟ ಮತ್ತೆ ಮತ್ತೆ ನಡೆಯುತ್ತಲೇ ಇರುತ್ತದೆ; ಅಷ್ಟಿಷ್ಟು ವಿರಾಮದ ಆಚೆಗೂ..

~`ಶ್ರೀ'
    ತಲಗೇರಿ

ಶಹರದ ಹೊಕ್ಕುಳೊಳಗೆ.. -೩

ಶಹರದ ಹೊಕ್ಕುಳೊಳಗೆ-೩
                         ... ಕದಡಿದ ನಗೆಯ ಬಿಂಬಗಳ ಹುಡುಕಾಟ...
     ಮಹಾಪಟ್ಟಣವೊಂದಕ್ಕೆ ಮುಖಾಮುಖಿಯಾಗುವುದೆಂದರೆ ಬಹುಶಃ ನಮ್ಮೊಳಗಿನ ಹಲವು ಪಾತ್ರಗಳಿಗೆ ನಾವೇ ಪ್ರಶ್ನೆ ಕೇಳಿ, ಮತ್ತೆ ನಾವೇ ಉತ್ತರ ಕಂಡುಕೊಳ್ಳಲು ಹೆಣಗುವ ಒಂದು ಚಿಕ್ಕ ಪ್ರಕ್ರಿಯೆಯಷ್ಟೇ! ಒಂದಷ್ಟು ವರ್ಷಗಳ ಕಾಲ ಊರಿನ ಮನೆಗಳಲ್ಲಿ ವಾರಸ್ದಾರಿಕೆ ನಡೆಸುತ್ತಾ , ಊರಿನ ಹಾದಿಗಳಲ್ಲಿ ಸಿಕ್ಕ ಸಿಕ್ಕವರನ್ನೆಲ್ಲಾ ಮಾತನಾಡಿಸುತ್ತಾ, ಕೈಲೊಂದು ಚಿಕ್ಕ ಕೋಲು ಹಿಡಿದು , ಅದ್ಯಾವುದೋ ಸರಿಯಾಗಿ ರಾಗ ಬರದ ಹಾಡೊಂದ ಗುನುಗುತ್ತಾ ಹೊರಟ ನಾವು ಈ ಪಟ್ಟಣದ ಹಾದಿಗಳಲ್ಲಿ ಮೂಕರಾಗುತ್ತೇವೆ.. ರಸ್ತೆಯ ಎರಡೂ ಕಡೆಗಳಲ್ಲಿನ ವಾಹನಗಳು ಅವುಗಳದೇ ಭಾಷೆಯಲ್ಲಿ ಮಾತನಾಡಿಸುತ್ತವೆ; ನಾವು ಯಂತ್ರಗಳಲ್ಲವಲ್ಲ!.. ಮಹಾನಗರದ ಬೀದಿಗಳು ಅದೆಷ್ಟೇ ಪರಿಚಿತವಾಗಿದ್ದರೂ ಅಪರಿಚಿತವೇ..ಊರ ದಿಬ್ಬಗಳ ಏರಿಳಿಯುತ್ತಿದ್ದ ಅದೇ ಮುಖಗಳು, ಇಲ್ಲಿನ ಯಾವ ಸಮತಟ್ಟು ರಸ್ತೆಗಳಲ್ಲೂ ಕಾಣಸಿಗುವುದಿಲ್ಲ.. ನಮ್ಮೆಲ್ಲ ನೆನಪುಗಳು ಎಂದಿಗೂ ನಮ್ಮಮೊದಲ ಊರಿನ ವ್ಯಕ್ತಿಗಳ ಮೇಲೆಯೇ ಕಟ್ಟಲ್ಪಡುತ್ತದೆ.. `ಇವರು ಅವರಂತೆ' ಅನ್ನುವ ಆ ವಾಕ್ಯವೊಂದು ಸದಾ ಅಚ್ಚು ತೆಗೆದಿಟ್ಟಂತೆ !.. ಹೀಗೆ ಕಟ್ಟಲ್ಪಟ್ಟ ನೆನಪುಗಳು ಅದೆಷ್ಟು ಆವೃತ್ತಿಗಳಲ್ಲಿ ಪರಿಷ್ಕರಣೆಗೊಳ್ಳುತ್ತಲೇ ಹೋಗುತ್ತವೆಯೋ..
     ಬದುಕಿನ ಹೋರಾಟಕ್ಕೆ ಅಣಿಯಾದವರಂತೆ, ಯುದ್ಧಭೂಮಿಯೆಂಬಂತೆ ನಾವೀ ಮಹಾನಗರವನ್ನ ಪ್ರವೇಶಿಸುತ್ತೇವೆ. ದಿನನಿತ್ಯದ ಶಸ್ತ್ರಾಭ್ಯಾಸದಲ್ಲೇ ಸೋಲಿನ ನೆರಳನ್ನ ಇದಿರುಗೊಳ್ಳುತ್ತ ಪರಿತಪಿಸುತ್ತೇವೆ.. ಯಾಕೆ?.. ಬಹುಶಃ, ಆತುಕೊಳ್ಳುವ ಹೆಗಲುಗಳ, ಅಥವಾ ಸುತ್ತಲೂ ನಿಂತು ಧೈರ್ಯತುಂಬುವ ಕೌಟುಂಬಿಕತೆಯ ಕೊರತೆಯೇ?!.. ಮನುಷ್ಯ ಸಂಬಂಧಗಳ ನಿಜವಾದ ವಿಶ್ಲೇಷಣೆಗೆ ನಗರದಂತಹ ಪುಟವೊಂದು ಬಿಟ್ಟರೆ ಬೇರೆ ದೊರಕಲಾರದೇನೋ!..ಅದೆಷ್ಟೋ ಜಗತ್ತುಗಳು ಒಂದು ಪುಟ್ಟ ಪ್ರದೇಶದಲ್ಲಿ ಸೇರುತ್ತವೆ.. ಇಡೀ ಜಗತ್ತು ಏಕೀರ್ಭವಿಸುತ್ತದೆ.. ಇಲ್ಲಿನ ಬಹುತೇಕ ಸಂಬಂಧಗಳಿಗೆ ಒಂದು ನಿರ್ದಿಷ್ಟ ಮೇರೆಯಿರುತ್ತದೆ.. ನಮ್ಮವರು ಅನ್ನಿಸುವ ಜೀವಗಳು ಎಲ್ಲೋ ಬೆರಳೆಣಿಕೆಯಷ್ಟು; ಜಗತ್ತಿನ ಸುಗಂಧ ದ್ರವ್ಯಗಳ ಪ್ರಚಾರಕ್ಕಾಗಿ ಆಚೆ ಈಚೆ ಓಡಾಡುವ ದೇಹಗಳೇ ಹಲವು ಎನಿಸಿಬಿಡುತ್ತವೆ.. ಇಂಥ ಒಂದು ಪರಿಸರದಲ್ಲಿಯೇ ಅಮ್ಮನ ಕೈತುತ್ತು, ಅಪ್ಪನ ಸವೆದ ಚಪ್ಪಲಿ, ಮನೆಯ ಮೂಲೆಯಲ್ಲಿ ಚಳಿಯಲ್ಲಿ ಕುಯ್ ಗುಡುತ್ತಿದ್ದ ನಾಯಿ, ಈಗ ಭೂಮಿಯ ಇನ್ಯಾವುದೋ ಭಾಗದಲ್ಲಿ ಇರುವ ಅಕ್ಕ ಅಣ್ಣ ತಮ್ಮ ತಂಗಿ‌ಯರ ತರಹೇವಾರಿ ಜಗಳಗಳು, ಗದ್ದೆಯ ಅಂಚಿನ ವಿಹಾರ, ಕೊಕ್ಕರೆಗಳ ಒಂಟಿ ಕಾಲು, ಅರ್ಧ ಮುರಿದ ಸೇತುವೆ, ಯಾವುದೇ ನಿರ್ದಿಷ್ಟ ಆಕಾರವಿಲ್ಲದ ದೇವರ ಮೂರ್ತಿ, ಕೆಸರಿನಲ್ಲಿ ಕಲ್ಲು ಹೊಡೆಯುವ ಚೇಷ್ಟೆ, ಗಾಳಕ್ಕೆ ಸಿಕ್ಕಿಸುವ ನಂಜುಳ, ಫಟಕ್ಕನೆ ಎಳೆದಾಗ ಸಿಕ್ಕಿಕೊಂಡ ಮೀನು, ಕಲ್ಲು ಪೊಟರೆಗಳಲ್ಲಿ ಪುಟುಪುಟು ಅನ್ನುತ್ತಾ ಮರೆಯಾಗೋ ಏಡಿಗಳು, ಹುಣಸೇಮರ, ಜೊತೇಲ್ ಪಾಟಿಚೀಲ ಹಿಡ್ದು ಬರ್ತಿದ್ ಗೆಳೆಯರ ತಂಡ ಎಲ್ಲವೂ ಎಲ್ಲವೂ ಬಹುವಾಗಿ ಆವರಿಸಿಕೊಂಡುಬಿಡುತ್ತವೆ..
     ಹೀಗೇ ಮನಸ್ಸಿನ ಅದ್ಯಾವ್ದೋ ಅಡ್ಡಾದಿಡ್ಡಿ ಮೂಲೆಯಲ್ಲಿ ಅಜ್ಞಾತವಾಗಿ ಹುದುಗಿದ್ದ ಈ ನೆನಪುಗಳಿಗೆ ಹೊಸ ಜಾತ್ರೆ ಶುರುವಾಗೋದು ಈ ಮಳೆಯಲ್ಲಿ.. ! ರೋಮಗಳ ತುದಿಗೋ ಇಲ್ಲಾ ತೆಳು ಧೂಳಿನ ರಸ್ತೆಯ ಬೊಗಸೆಗೋ ಹನಿಯೊಂದು ಬಿದ್ದಾಗ ಕತ್ತೆತ್ತಿ ನೋಡುವ ನಾವು ಸೇರುವುದು ಯಾವುದೋ ಸೂರನ್ನಾದರೂ, ಈ ನೆನಪುಗಳು ಒಮ್ಮೊಮ್ಮೆಇರುವೆಗಳಂತೆ ಸಾಲಲ್ಲಿ , ಕೆಲವೊಮ್ಮೆ ಸಿಕ್ಕಸಿಕ್ಕ ಕಡೆಗಳಲ್ಲೆಲ್ಲಾ ನುಗ್ಗಿಬಿಡುತ್ತವೆ ಹೃದಯದ ಮುಖ್ಯ ಬೀದಿಗೆ.. ಸಂಜೆ ಸಮಯಕ್ಕೆ ಶುರುವಾಗುವ ಮಳೆಗಂತೂ ಅದೇನು ಖಯಾಲಿಯೋ..! ನಾಲ್ಕು ಪುಟಾಣಿ ಗೋಡೆಗಳ ಯಾವುದೋ ಮೂಲೆ ಅಥವಾ ಮಧ್ಯದಲ್ಲಿ , ಬೆಳದಿಂಗಳಂಥ ದೀಪಗಳಿದ್ದರೂ ಕತ್ತಲೆಯನ್ನೇ ಹಚ್ಚಿಕೊಂಡು ಕೂತು ಒಂದು ಕಪ್ ಚಹಾ ಅಥವಾ ಕಾಫಿಯನ್ನ ನೆನೆನೆನೆದು ಕೊರಗುವ ಪರದೇಶಿ ಬದುಕು ಬಹುಶಃ ಬ್ಯಾಚುಲರ್ ಎನಿಸಿಕೊಂಡವರ ಕರ್ಮ‌ಸಿದ್ಧಾಂತ ಅಥವಾ ನಿಧಾನಕ್ಕೆ ಸಂಪಾದಿಸಿಕೊಂಡ ಹಕ್ಕು ಎನ್ನಬಹುದೇನೋ!..
     ನಗರದ ಮನೆಗಳ ತಾರಸಿಯಲ್ಲಿ ಮನುಷ್ಯನ ಅದೆಷ್ಟು ಕತೆಗಳು ಓದಲಾಗದಂತೆ ಬಿದ್ದಿವೆಯೋ.. ಏಕಾಂತ ಮತ್ತು ಏಕಾಂಗಿತನದ, ಹರೆಯ ಮತ್ತು ಪ್ರಣಯದ ಅದೆಷ್ಟು ಸಂಚಿಕೆಗಳು ನಿರಂತರವಾಗಿ ಪ್ರಸಾರವಾಗಿವೆಯೋ, ತಾರಸಿ ಕೇವಲ ತಟಸ್ಥ ಮಾಧ್ಯಮ.. ಈ ನಗರವೋ ಧೀಮಂತ ಮೌನಿ..ಹೆಣ್ಣಿನಂತೆ! ಆಳಕ್ಕೆ ಇಳಿದಂತೆ ಇನ್ನಷ್ಟು ಮತ್ತಷ್ಟು ಕುತೂಹಲ ಹುಟ್ಟಿಸಿ, ತನ್ನ ತೆಕ್ಕೆಗೆ ಎಳೆದುಕೊಳ್ಳುವ ಚಾಲಾಕಿ.. ಒಮ್ಮೊಮ್ಮೆ ಕಾಲೆಳೆಯುತ್ತ , ಇನ್ನೊಮ್ಮೆ ಕುಪ್ಪಳಿಸುತ್ತ ಸಾಗಿದಾಗಲೆಲ್ಲ‌ ಸಲವೂ ವಿಸ್ಮಯಗಳು ಎದುರಾಗುತ್ತಲೇ ಇರುತ್ತವೆ.. ನಗರ ಪೂರ್ತಿ ಸ್ವಾತಂತ್ರ್ಯದ ಬಂಧೀಖಾನೆ, ಅಂದುಕೊಳ್ಳುವವರಿಗೆ; ಗಡಿಗಳಿಲ್ಲದ ನಕ್ಷೆ, ಅಪ್ಪಿಕೊಳ್ಳುವವರಿಗೆ..ಇನ್ನು ಕೆಲವರಿಗೆ ಬೆರಳು ತಾಕದ ಆಕಾಶ..!!

~`ಶ್ರೀ'
    ತಲಗೇರಿ

ಶಹರದ ಹೊಕ್ಕುಳೊಳಗೆ.. -೨

ಶಹರದ ಹೊಕ್ಕುಳೊಳಗೆ-೨
                         ... ಕದಡಿದ ನಗೆಯ ಬಿಂಬಗಳ ಹುಡುಕಾಟ...
     ಬೆಳಿಗ್ಗೆ ಮಧ್ಯಾಹ್ನ ಅಥವಾ ಸಂಜೆಗಳ ವ್ಯತ್ಯಾಸವಿಲ್ಲದೇ ತಳ್ಳುಗಾಡಿಯ ಮೇಲೊಂದಿಷ್ಟು ಆಗಷ್ಟೇ ನೀರು ಚಿಮುಕಿಸಿದ ಹಸಿಸೊಪ್ಪು , ತರಕಾರಿಗಳ ಮಳಿಗೆ ಸಿದ್ಧಪಡಿಸಿ, ಯಾವುದೋ ಹೊಚ್ಚ ಹೊಸ ರಾಗದಲ್ಲಿ ಅರ್ಥವೂ ಆಗದಂತೆ ಅರಚುವ ಆತನೊಬ್ಬನು ಶಹರದ ಬೀದಿಗಳಲ್ಲಿ ಓಡಾಡುತ್ತಾನೆ.. ಅರೆ ಮುರಿದ ತಕ್ಕಡಿಯಲ್ಲಿ ಅರ್ಧರ್ಧ ಕೇಜಿಯ ವ್ಯಾಪಾರ ನಡೆಯುತ್ತದೆ ಚೌಕಾಸಿಯ ಸಮಕ್ಷಮದಲ್ಲಿ... ಇನ್ನೊಂದಷ್ಟು ಕಡೆ ತರಕಾರಿ ಹಣ್ಣುಗಳು ಬೈಯುತ್ತಲೇ ಸ್ನಾನಮಾಡಿ ಪಾರದರ್ಶಕ ವಸ್ತ್ರ ತೊಟ್ಟು ವ್ಯಾಪಾರಕ್ಕಿಳಿಯುತ್ತವೆ ! ಮೊಣಕಾಲು ಅಥವಾ ಅದಕ್ಕಿಂತ ಇನ್ನೂ ಒಂಚೂರು ಉದ್ದದ ಬಟ್ಟೆಯ ಹೆಣ್ಣು ಗಂಡುಗಳು ತಾವೇ ತಳ್ಳುಗಾಡಿಗಳಲ್ಲಿ ತುಂಬಿಕೊಂಡು ತಂಪುಕೋಣೆಗಳಲ್ಲಿ ವಾಯುವಿಹಾರದ ನೆಪ ಹೇಳುತ್ತಾ ಅಲೆಯುತ್ತಾರೆ.. ಸೂರ್ಯನ ಬೆಳಕಿನಲ್ಲಿ ತಿರುಗುವ ವಸ್ತುಗಳಿಗಿಂತ, ಮಂದ ಹಳದಿ ಬೆಳಕಿನ ಇಲ್ಲಾ ಗಾಜಿನ ಉಪಸ್ಥಿತಿ ಇದ್ದಲ್ಲಿ ಬೆಲೆ ಜಾಸ್ತಿ!..ಇನ್ನು ಅವನೊಬ್ಬನಿದ್ದಾನೆ ಹಳದಿ ಮತ್ತು ಹಸಿರು ಅಥವಾ ಕಪ್ಪು ಮೈಯ ರಥದ ಸಾರಥಿ.. ಗಲ್ಲಿಗಲ್ಲಿಗಳಲ್ಲಿ ಮೂರು ಚಕ್ರದ ಗಾಡಿ ಹಿಡಿದು ನುಗ್ಗುತ್ತಾನೆ.. ಅವನಿಗೆ ತಾನಾಗಿ ಮಾತಿಗಿಳಿವ ಹಂಬಲವಿಲ್ಲ.. ಆದರೆ ನಾವೇ ಅವನ ಮಾತನಾಡಿಸಿದರೆ, ಅವನ ಕತೆಗಳಿಗೆ ಬರವಿಲ್ಲ.. ಬಹುಶಃ ಅವನಿಗೂ ನಿತ್ಯ ರಸ್ತೆಯ ಜೊತೆ ಸವೆಸುವ ಸಮಯದ ಜಿಡ್ಡು ಹಿಡಿದಿರಬೇಕು.. ಸಿಕ್ಕಸಿಕ್ಕಲ್ಲಿ ತಾತ್ಸಾರದ ಜಿಗುಪ್ಸೆಯ ಒಂಟಿತನದ ಹಾರನ್ ಒತ್ತುತ್ತಾನೆ.. ಆದರೆ ಅವನೂ ನಗುತ್ತಾನೆ; ನಮ್ಮ ಒಂದು ಸಣ್ಣ ನಗೆಗೆ..!
     ಈ ನಗರದ ಬೀದಿಗಳಲ್ಲಿ ಅದೆಷ್ಟೋ ಜನ ಓಡಾಡುತ್ತಾರೆ. ದಪ್ಪ ಸಪೂರ ಉದ್ದ ಗಿಡ್ಡ ಮತ್ತು ಹಲವು ಚರ್ಮದವರು.. ಯಾರು ಯಾರಿಗೂ ಪರಿಚಿತರಲ್ಲ ; ಆದರೂ ಸಂಬಂಧಿಗಳೇ ಅನ್ನೋದು ಈ ನಗರಕ್ಕೆ ಮಾತ್ರವೇ ಗೊತ್ತು.. ನಂದಿನಿ ಹಾಲಿನ  ಬಸಪ್ಪ , ಪೇಪರ್ ತರುವ ರಮೇಶ, ಕುಡಿಯುವ ನೀರಿನ ಕ್ಯಾನಿನ ನಾಗೇಶ, ಮನೆಗೆಲಸದ ವೆಂಕ್ಟಮ್ಮ ಹೀಗೇ ಹೀಗೇ.. ಎಲ್ಲರೂ ಒಂದೇ ಮನೆಗೆ ಬೇರೆ ಬೇರೆ ಸಮಯಕ್ಕೆ ಬರುತ್ತಾರೆ, ತಂತಮ್ಮ ಕೆಲಸ ಮುಗಿಸಿ ಹೊರಡುತ್ತಾರೆ.. ಇನ್ನು 20 ರೂಪಾಯಿಗೆ 3 ಅಥವಾ 4 ತಟ್ಟೆ ಇಡ್ಲಿ ಕೊಡುವ ಗೂಡು ಹೋಟೆಲ್ಲಿನ ಅಂಕಲ್,
ದಿನಸಿ ಸಾಮಾನಿನ ಅಂಗಡಿಯ ಶೆಟ್ರು , ಚಪ್ಪಲಿ ಅಂಗಡಿಯ ರಹೀಂ ಸಾಬ್, ದರ್ಜಿ ಗಜಾನನ, ಬೇಕರಿಯ ಸತೀಶಣ್ಣ ಎಲ್ಲರೂ ಒಂದೇ ನಗರದ ಬೇರೆ ಬೇರೆ ಬೀದಿಯ ಪಾಲುದಾರರು..
    ಬಹುಶಃ ನಮಗೇ ತಿಳಿಯದೆಯೇ, ಸಾವಿರಾರು ಗ್ರಾಹಕರಲ್ಲಿ ನಾವೊಬ್ಬರಾಗಿದ್ದರೂ, ಈ ಎಲ್ಲ ವ್ಯಾಪಾರಿಗಳ ತಲೆಯಲ್ಲಿ ನಮ್ಮ ಹೆಸರು ಉಳಿದಿರುತ್ತವೆ.. ಯಾರೂ ಗೊಡವೆಗೇ ಹೋಗದ ಆತ್ಮೀಯತೆಯೊಂದು ಸೇತುವಾಗಿರುತ್ತದೆ.. ಕೆಲವಷ್ಟು ಪರಿಚಯಗಳು ಹಾಗೆಯೇ, ಆಕಾಶದಲ್ಲಿ ತಾನಾಗೇ ಪ್ರತ್ಯಕ್ಷವಾಗುವ ಗಾಳಿಪಟದ ಹಾಗೆ.. ಯಾರು ಇದರ ರೂವಾರಿ, ಯಾಕಾಗಿ ಅದರ ಉಸ್ತುವಾರಿ ಅನ್ನುವುದರ ಕಿಂಚಿತ್ತೂ ಯೋಚನೆಯಿಲ್ಲದೆ ಗಾಳಿ ಇರುವ ತನಕ ಗಾಳಿಪಟ ಹಾರುತ್ತಿರುತ್ತದೆ.. ಯಾವುದೋ ಒಂದು ಕ್ಷಣದಲ್ಲಿ ಕಣ್ಮರೆಯಾಗುತ್ತದೆ ; ಆದರೂ ಮನಸ್ಸಲ್ಲೊಂದು ಪುಟ್ಟ ಜಾಗವನ್ನ ತನ್ನ ಹೆಸರಿಗೆ ಬರೆಸಿಕೊಳ್ಳುವ ಜಾಣ್ಮೆಯೇ ವಿಸ್ಮಯ.. ಇಲ್ಲಿ ನಗರದ ಯಾವ ಸಂಬಂಧಗಳಿಗೂ ಹೆಸರಿಲ್ಲ ; ಅವುಗಳ ಅವಧಿ ಮನೆ ಬದಲಾಗುವ ತನಕ ಅಥವಾ ಮನಸ್ಸು..!
     ಇನ್ನು ಪಾರ್ಕಿನ ಗೆಳೆಯರ ಬಗ್ಗೆ ಹೇಳದಿದ್ದರೆ ಹೇಗೆ, ಅಲ್ವಾ? ಉದ್ಯಾನವನದಲ್ಲಿ ಕೆಲವೊಮ್ಮೆ ಸಮಾನ ಮನಃಸ್ಥಿತಿಯ ದೇಹಗಳು ಭೇಟಿಯಾಗುತ್ತವೆ.. ಸೊಕ್ಕಿನಿಂದ ಹಿಡಿದು ಸುಕ್ಕುಗಟ್ಟಿದವರಿಗೂ ಉದ್ಯಾನವನ ಒಂಥರಾ ಸಮಾಧಾನದ ಸ್ಥಳ.. ಎತ್ತರೆತ್ತರದ ಕಾಂಕ್ರೀಟ್ ಕಟ್ಟಡದ ಮಧ್ಯೆ ಮತ್ತೆ ಮತ್ತೆ ಊರಿನ ಒಂದು ಭಾಗವನ್ನ ಮರುಕಳಿಸುವ ವ್ಯವಸ್ಥಿತ ಹಸಿರು ಜಾಗಕ್ಕೆ ಒಂದೈದತ್ತು ನಿಮಿಷದಿಂದ ಹಿಡಿದು ಒಂದೂವರೆ ಎರಡು ತಾಸುಗಳ ತನಕವೂ ಇದ್ದು ಆರೋಗ್ಯ ಪಡೆದುಕೊಳ್ಳುವ ಬಳಗವಿದೆ.. ಸುದ್ದಿ ಚಾವಡಿಯೆಂದೇ ಹೇಳಬಹುದೇನೋ ಕೆಲವೊಮ್ಮೆ; ಹಳೆ ತಲೆಮಾರುಗಳು ತಮ್ಮ ಯೌವನದ ದಿನದಿಂದ ಶುರುಮಾಡಿ ಇಂದಿನ ಯುವಪೀಳಿಗೆಯ ಕುರಿತು ನಿಟ್ಟುಸಿರು ಬಿಟ್ಟಾಗ ಒಂದು ಸಣ್ಣ ವಿರಾಮ.. ಹೊಸತಲೆಮಾರಿಗೆ ಪಾರ್ಕುಗಳ ಉಪಯೋಗ ಪಿಸುಮಾತುಗಳ ವಿಲೇವಾರಿ ಮತ್ತು ಇನ್ನೊಂದಿಷ್ಟು ಸರಕುಗಳ ಆಮದಿಗೆ ಮಾತ್ರವೇ! ಇನ್ನು ಕೆಲವರಿಗೆ ಲೇಖನಿಯ ತುದಿಗೆ ಅಕ್ಷರಗಳ ಇಳಿಸಲು ಸ್ಫೂರ್ತಿ ಕೊಡುವ ಜಾಗ.. ಇಲ್ಲಿ ನಾಳೆಯ ನೀರಸ ಯೋಚನೆಗಳಿವೆ, ಪ್ರಸ್ತುತ ವಿದ್ಯಮಾನದ ಚಿಂತನೆಗಳಿವೆ, ನಿನ್ನೆಯ ಊಹಾಪೋಹಗಳೂ ಇವೆ.. ಇಲ್ಲಿನ ಬೆಂಚುಗಳು ಬಹುಶಃ ಎಲ್ಲಕ್ಕೂ ಸಾಕ್ಷಿಯಾಗುತ್ತವೆ; ಆದರೂ ಕರಗುವುದಿಲ್ಲ..

~`ಶ್ರೀ'
    ತಲಗೇರಿ
    

ಶಹರದ ಹೊಕ್ಕುಳೊಳಗೆ.. -೧

ಶಹರದ ಹೊಕ್ಕುಳೊಳಗೆ.. -೧
                         ... ಕದಡಿದ ನಗೆಯ ಬಿಂಬಗಳ ಹುಡುಕಾಟ...
     ಕಾಂಕ್ರೀಟ್ ಕಾಡು..ಕಪ್ಪು ಬಣ್ಣವನ್ನು ಉಗಿ ಮಾಡಿ‌ ದಪ್ಪದಪ್ಪಗೆ ಹರಡಿದಂಥ ಹೊಗೆಯ ಪದರ..ಟ್ರಾಫಿಕ್ ಲೈಟಿನ ಎದುರುಗಡೆ ಒಂದೇ ಸಮನೆ ಬೊಬ್ಬಿರಿವ ಹಾರನ್ ಗಳು..ಆ ಭಾಷೆ ಈ ಭಾಷೆಯ ಅಚ್ಚ ಬೈಗುಳಗಳು..ಇಷ್ಟೇ ಇಷ್ಟೇ ಈ ಶಹರವೆಂಬ ದೊಡ್ಡಹೊಟ್ಟೆಯ ಹಣೆಬರಹ.. ಹೊಟ್ಟೆಪಾಡಿಗಾಗಿ ಇಲ್ಲಿ ಜೋತುಬೀಳಬೇಕಷ್ಟೇ, ಇಲ್ಲದಿದ್ದಲ್ಲಿ ಇಲ್ಲ್ಯಾಕೆ ಬರುತ್ತಿದ್ದೆ.. ಇಂತಹ ಅದೆಷ್ಟೋ ಮಾತುಗಳನ್ನ ದಿನನಿತ್ಯ ಕೇಳ್ತೀವಿ; ಅಷ್ಟೇ ಅಲ್ಲ , ಆಡ್ತೀವಿ.. ಶಹರ ಅಂದ್ರೆ ಇಷ್ಟೇನಾ? ಜರ್ಝರಿತ ರೋಗಿಷ್ಟ ದರಿದ್ರ ಅಶುದ್ಧ ವಾಂಛೆಗಳ ಅಸಹ್ಯ ಅನಾತ್ಮ ಕಸದ ತೊಟ್ಟಿ ಅನ್ನುವಷ್ಟರ ಮಟ್ಟಿಗೆ ಮೂಗುಮುರಿಯುತ್ತಲೇ ಕಾಲಚಕ್ರದ ನಿಟ್ಟುಸಿರಿನ ಇದಿರು ಕೈಕಟ್ಟಿ ನಿಲ್ಲುತ್ತೀವಲ್ಲಾ! ಇಷ್ಟೇನಾ ಶಹರ ಅಂದ್ರೆ?! ಅಲ್ಲ....
     ಒರಟು ತೊಗಟೆಯಷ್ಟನ್ನೇ ಕೆಕ್ಕರಿಸಿ ನೋಡುತ್ತಾ, ಒಳಗಿನ ರುಚಿಯ ಬಗೆಗೆ ದಾಖಲೆಯಿಲ್ಲದೇ ಮಾತನಾಡುವ ಖಯಾಲಿ ಇಂದಿನದಲ್ಲ.. ಪ್ರಕೃತಿಯ ಪರಿಭಾಷೆಯ ಉಕ್ತಿಗಳಲ್ಲಿ ಈ ಶಹರವೂ ಒಂದು..ವಾಸದ ಕೋಣೆಯಿಂದ ಹೊರಗೆ ಕಾಲಿಡುತ್ತಿದ್ದಂತೆಯೇ ಮುಖಕ್ಕೆ ರಾಚುವ ಸೂರ್ಯನ ಶ್ವಾಸಕ್ಕೆ ಬೈಯುತ್ತಲೇ ಬೀದಿಗಿಳಿಯುವ ನಾವು, ಎಳೆಬಿಸಿಲ ಮೆಲುದನಿಗೆ ಕಿವಿಗೊಟ್ಟಿದ್ದು ಎಂದು?! ಟ್ರಾಫಿಕ್ಕಿನ ರಗಳೆಯಲ್ಲಿ ಸುತ್ತಮುತ್ತಲು ಒಮ್ಮೆಯಾದರೂ ಕಣ್ಣು ಹರಿಸಿದ್ದೀವಾ..ಪಕ್ಕದ ಆಟೋದಲ್ಲಿ ಪಿಳಿಪಿಳಿ ಕಂಗಳ ಪುಟಾಣಿ, ಬೊಚ್ಚುಬಾಯಿಯಲ್ಲಿ ಆಗಷ್ಟೇ ಹುಟ್ಟುತ್ತಿರುವ ಮೊಗ್ಗು ಹಲ್ಲುಗಳನ್ನ ತೋರಿಸುತ್ತಿರಬಹುದು.. ದಿನಪತ್ರಿಕೆ ಮಾರುತ್ತ ,ಅರ್ಧ ಹರಿದ ಅಂಗಿಯ ಗುಂಡಿಗಳಲ್ಲಿ ಕನಸುಗಳ ಭದ್ರಪಡಿಸುತ್ತಿರುವ ಆ ಗಾಢ ಬಣ್ಣದ ಚರ್ಮದ ಹುಡುಗನ ಹೆಸರನ್ನೆಂದಾದರೂ ಕೇಳಿದ್ದೀವಾ.. ಧೂಮಪಾನ ಶ್ವಾಸಕೋಶದ ಕೋಣೆಗಳನ್ನ ಬಿಂಜಲು ಕಟ್ಟುವಂತೆ ಆವರಿಸುತ್ತದೆಂದು ಅರಿವಿದ್ದರೂ ಟ್ರಾಫಿಕ್ಕಿನ ಹೊಗೆಯಲ್ಲೇ ಬಿಳಿವಸ್ತ್ರ ತೊಟ್ಟು ,ಸಂಬಾಳಿಸುವ ಆ ಮನುಷ್ಯನೊಬ್ಬನಿಗೆ ಒಂದು ಧನ್ಯವಾದದ ನೋಟ ತಲುಪಿದೆಯಾ..
     ದಾರಿಯಂಚಲ್ಲಿ ನಡೆವಾಗ ಮೆತ್ತನೆಯ ಒಂದು ಸ್ಪರ್ಶಕ್ಕಾಗಿ ಹಾತೊರೆದ ಪುಟಾಣಿ ನಾಯಿಮರಿಯ ಹೆಜ್ಹೆ ಸದ್ದು ನಮ್ಮ ಬಿರುಸಿನ ಹೆಜ್ಜೆಗಳಲ್ಲಿ ಕರಗಿಹೋಯಿತೇನೋ.. ಆಗಷ್ಟೇ ಮೈದಳೆದ ಬೇಲಿಬದಿಯ ಹೂವ ಗೆಳೆತನಕ್ಕೆ ಹಾತೊರೆಯುತ್ತಿರುವ ಚಿಟ್ಟೆಯ ಗೋಗರೆತ ನಮ್ಮ ಅಟ್ಟಹಾಸದ ತರಂಗಗಳಲ್ಲಿ ಉಸಿರುಗಟ್ಟಿ ಸತ್ತಿರಬಹುದು..ಅಪರೂಪಕ್ಕೆ ಕಾಣಸಿಗುವ ಮರದ ಟೊಂಗೆಯ ಎಲೆಗೊಂಚಲುಗಳಲ್ಲಿ ಕುಳಿತು ವೀಕ್ಷಕರ ಹಂಗಿಲ್ಲದೇ ಹಾಡಿದ ಹಕ್ಕಿಯ ದನಿಯನ್ನ ಗಮನಿಸಲೇ ಇಲ್ಲವಲ್ಲ... ನಮ್ಮ ಪ್ರೀತಿಯ ನಿವೇದನೆಗೆ ಇಷ್ಟುದ್ದ ಮಲ್ಲಿಗೆ ದಂಡೆಯನಿತ್ತು , ಚಂದ್ರನ ರಾತ್ರಿಗಳಿಗೆ ಬೆಳದಿಂಗಳ ಪನ್ನೀರ ಘಮ ತುಂಬಿದವನ ಹಗಲುಗಳು ಬೆವರ ಹನಿಗಳ ಬಿಕ್ಕಳಿಗೆ ಹಾಗೇ ಇಂಗಿಹೋಗುತ್ತದೆ...
     ಬದುಕು ಹೋರಾಟ ಎಂಬುದರ ನಿಜವಾದ ಅಭಿವ್ಯಕ್ತಿ ಬಹುಶಃ ಶಹರಗಳಲ್ಲಿ ಮಾತ್ರವೇ ನ್ಯಾಯಯುತವಾಗಿ ದಕ್ಕುತ್ತದೆಂದು ಅನಿಸುತ್ತದೆ! ತೇಪೆ ಹಚ್ಚಿದರೂ ಹರಿದು ಗಾಢ ಚರ್ಮ‌ ಕಿಸಕ್ಕನೆ ನಗುವ ದಂಟುಕೋಲಿನ ಅವಳು , ಅರ್ಧ ಉರಿದ ಸಿಗರೇಟಿಗೆ ಇನ್ನಷ್ಟು ಪ್ರಾಯ ಕೊಡಲು ತನ್ನುಸಿರ ಸವೆಸುತಿರುವ ಸಾಲು ಎಲುಬಿನ ಅವನು.. ದಪ್ಪ ದಪ್ಪ ಅಂಗೈಗಳಲ್ಲಿ ಚಿಲ್ಲರೆಗಳ ಬೆವರ ವಾಸನೆಗೆ ಒಂದೊತ್ತಿನ‌ ತುತ್ತು ನುಂಗುತ್ತಾರೆ.. ಅದರಲ್ಲೂ ಕೆಲವೊಮ್ಮೆ ನಾಯಿಗಳಿಗೆ ಹಂಚುತ್ತಾರೆ.. ! ಅರೆ ಬರೆ ನೆರಳ ಮರದಡಿಯಲ್ಲಿ ಅವನೊಬ್ಬ ನಿಂತಿರುತ್ತಾನೆ ಚಿಕ್ಕ ಕೈಗಾಡಿ ಅಥವಾ ಸೈಕಲ್ಲಿನ ಮೇಲೆ ಒಂದಷ್ಟು ಎಳನೀರು ಹೇರಿಕೊಂಡು.. ಪರಮಜ್ಞಾನಿಯಂತೆ ಆತ ನೀರು ಗಂಜಿಗಳ ಎಳನೀರು ತೆಗೆದುಕೊಡುವಾಗ ಕೆಕ್ಕರಿಸಿ ನೋಡುತ್ತೇವೆ ; ಅವನ ಗಂಟಲಲಿ ಬತ್ತಿದ ನೀರ ಬಗ್ಗೆ ಕೇಳುವುದೇ ಇಲ್ಲ !.. ಅವ ಮೆತ್ತನೆಯ ದನಿಯಲ್ಲಿ ಅಲ್ಲಿ‌ ನಿಂತಷ್ಟು ಹೊತ್ತಿನ ಬಿಸಿಲ ಬಾಡಿಗೆಗೆ ಗೋಗರೆವಾಗ ನಮ್ಮ ಧ್ವನಿಗೆ ಎತ್ತರದ ಅಲಂಕಾರ! ನೆಲದ ಮೇಲೆ ಒಂಚೂರು ದಪ್ಪನೆಯ ಹೊದಿಕೆ ಹಾಸಿ ಅದರ ಮೇಲೊಂದಿಷ್ಟು ತರಕಾರಿ ಹಣ್ಣುಗಳ ಕೂಡಿಟ್ಟು ಅದನ್ನು ಮುಟ್ಟುವ ಕೈಗಳಿಗಾಗಿ ಇದಿರು ನೋಡುತ್ತಿರುವ ಆಕೆಯ ಮನಸ್ಸಿನಲ್ಲಿ ಯಾರಿರಬಹುದು..?! ತನ್ನ‌ ನಾಳೆಗಳ ರೂಪಿಸಲು ಈಗ ತೊಟ್ಟಿಲಲ್ಲಿ ಮಲಗಿರುವ ಕಂದ ಅಥವಾ ಜಾರುವ ಚಡ್ಡಿಯ ಎಳೆದೆಳೆದು ಮೂಗಿನ‌ ಸಿಂಬಳ ಒರೆಸುತ್ತ ಹರಿದ ಚಪ್ಪಲಿಗೆ ಬಳ್ಳಿ ಕಟ್ಟಿ ಕಾಲು ತೂರುತ್ತ ನಡೆವ ಸರ್ಕಾರಿ ಶಾಲೆಯ ಸಮವಸ್ತ್ರಧಾರಿ ಕುರುಚಲು ತಲೆಗೂದಲ ಪುಟಾಣಿ ತಮ್ಮ‌..?! ಬೇಲಿ ತುದಿಗೆಲ್ಲಾ ರಾತ್ರಿ ಯಾರೋ ಅಂಟಿಸಿದ್ದ ಮೊಗ್ಗುಗಳ ಕಿತ್ತು, ಈಗ ಕನಸುಗಳ ಹೆಣೆಯುತ್ತಾ ಒಂದೊಂದೇ ಮೊಗ್ಗುಗಳ ಪೋಣಿಸುವ ತಂಗಿಯೋ ಇಲ್ಲಾ ಹೆಸರಿಸದ ನೆಂಟರೋ!.. ಇನ್ನು , ಟೀ ಅಂಗಡಿಗಳಲ್ಲಿ ಅಕ್ಕಪಕ್ಕದ ದೇಹಗಳಿಗೆ ಚಹಾ ವಿತರಿಸುವ ಆತನೊಬ್ಬನಿದ್ದಾನೆ ಅಲ್ವಾ! ಒಂದು ಕೈಯಲ್ಲಿ ೪ ಅಥವಾ ೫ ಬಿಸಿ ಚಹಾ ಲೋಟಗಳ ಹಿಡಿದು ರಸ್ತೆಗಳ‌ ಪಟಪಟನೆ ದಾಟುತ್ತ ಯಾವ್ಯಾವಾಗಲೋ ಒಬ್ಬೊಬ್ಬನೇ ನಗುವ ಆತನ ಹೆಸರು ಕೇಳಿದ ನೆನಪೇ ಇಲ್ಲ‌ ನಂಗೆ.. ಕೇವಲ‌ ಚಹಾ ಖಾಲಿಯಾದ ಆ ಲೋಟ ಮಾತ್ರವೇ ಉಳಿದುದು.. ಅಲ್ಲಿ ಅವನೂ ಮತ್ತು ಅಕ್ಕಪಕ್ಕದಲ್ಲಿದ್ದವರಲ್ಲಿ ಇದ್ದ ನಾನೂ ರಸ್ತೆಯ ವಿರುದ್ಧ ತುದಿಗಳಿಗೆ ಮುಖಮಾಡುತ್ತೇವೆ.. ಚಹಾದ ಬಿಸಿ ನನ್ನ ಎದೆಗೂಡುಗಳ ಬೆಚ್ಚಗಾಗಿಸುತ್ತದೆ.. ಅವನ ನಿಟ್ಟುಸಿರ ಬಿಸಿಗೆ ಚಹಾದ ಬೀಜಗಳು ಮಾತ್ರವೇ ಬಲ್ಲವೇನೋ ಇಲ್ಲಾ ಲೋಟ ತೊಳೆವಾಗ ಚೂರೇ ಚೂರು ಉಳಿದ ಎಂಜಲು ಚಹಾದೊಂದಿಗೆ ಅರಬ್ಬೀ ಸಮುದ್ರ ಸೇರುತ್ತವೇನೋ !!

~`ಶ್ರೀ'
    ತಲಗೇರಿ

ಬುಧವಾರ, ಆಗಸ್ಟ್ 9, 2017

ಅಕ್ಕು : ಬಯಲು, ಗೋಡೆಯೊಳಗಣ ಹೂವಿನ ದಂತಕಥೆ..



     ಅದೊಂದು ಕಾಲಘಟ್ಟ.. ಪುರುಷ ಪ್ರಧಾನ ಸಮಾಜ.. ಹೆಣ್ಣು , ಅದೊಂದು ಚೌಕಟ್ಟಿನ ಚಿತ್ರ ಮಾತ್ರವೇ ಆಗಬೇಕು ಅನ್ನುವ ಅಲಿಖಿತ ನಿಶ್ಚಿತ ಕೌಟುಂಬಿಕ ಸಂವಿಧಾನ.. ಎಲ್ಲಾ ವ್ಯವಸ್ಥಿತ ಕಾಲದ ಸಮಾಜದಲ್ಲಿ ಬಹುಶಃ ಇದೊಂದು ತುಂಬಾನೇ ಚರ್ಚಿತ ವಿಷಯ.. ಅಬಲೆ ಅನ್ನುವಂಥ ಒಂದಷ್ಟು ನೆಪಗಳ ಪೊಳ್ಳು ಪೊರೆಯೊಳಗೆ ಹುದುಗಿಕೊಂಡ ವ್ಯವಸ್ಥೆಯಲ್ಲಿ ಪದೇ ಪದೇ ಒಂದು ಧ್ವನಿ ಯಾರಿಗೂ ಕೇಳುವುದೇ ಇಲ್ಲ‌... ಅದೆಷ್ಟೋ ತಲೆಮಾರುಗಳ ಕೂಗು; ಕ್ಷೀಣ ತೀಕ್ಷ್ಣ ಎಲ್ಲಾ ಹಂತಗಳಲ್ಲಿ ಜಾಲಾಡಲ್ಪಟ್ಟ ಗಂಟಲಿನ ಮೊರೆತ.. ಒತ್ತಾಯದ ಬದುಕು ಹೆಣ್ಣು ಗಂಡೆಂಬುದ ನೋಡದೇ ಎಲ್ಲರನ್ನೂ ಹಿಂಸಿಸುವಂಥದ್ದು.. ಆದರೂ ಕೆಲವೊಮ್ಮೆ ಒಂದು ವರ್ಗ ಮಾತ್ರವೇ ಅದರ ಹಿಡಿತಕ್ಕೆ ಸಿಲುಕುವುದು ಬಹುಶಃ ಎಲ್ಲಾ ಕಾಲಘಟ್ಟದ ದುರಂತವೇನೋ ! ಸ್ವಾತಂತ್ರ್ಯ ಮತ್ತು ಸ್ವೇಚ್ಛೆಯ ತೆಳು ಗೆರೆಯನ್ನ ಗಮನಿಸುವ ಸೂಕ್ಷ್ಮಮತಿ, ಕೂರದ ಕಾಲದ ಬಗಲಿಗೆ ಜೋತುಬಿದ್ದ ನಮ್ಮ‌ಕಣ್ಣುಗಳಿಗಿಲ್ಲ.. ಹೀಗೆ , ಬಾಡಿದ ಹೂಗಳ ಅರೆಗಂದು ಬಣ್ಣದ ನೆರಿಗೆಗಳ ಕಥಾನಕವೇ ಅಕ್ಕು ...

     ಇದೆಲ್ಲಿಯದೋ ದೂರದ ಕತೆಯಲ್ಲ , ಈಗಲೂ ಅದೆಷ್ಟೋ ಹಳ್ಳಿಗಳ ನಿತ್ಯ ಅಜ್ಞಾತ ಸಂಘರ್ಷ.. ಹರೆಯಕ್ಕೆ ರೆಕ್ಕೆ ಬಹಳ; ಅದರಲ್ಲೂ ಹೆಣ್ಣಿನ ಬಯಕೆಗಳಲ್ಲಿ ಸಣ್ಣಪುಟ್ಟ ಸಂಗತಿಗಳೇ ಅಧಿಕ.. ಕನ್ನಡಿಯೊಂದು ಆಪ್ತಮಿತ್ರ.. ಎಲ್ಲ ಕಾಲಕ್ಕೂ ಜೊತೆಯಾಗಬಲ್ಲ ಗೆಳತಿ.. ಶೀರ್ಷಿಕೆಯಿರದ ಒಂದಷ್ಟು ಆಸೆಗಳ ಪಟ್ಟಿಮಾಡುವಾಗಲೆಲ್ಲಾ ಕೈಬೆಸೆದ ನೆರಳು ಹ್ಞೂಂ ಅಂತಿರಬೇಕು.. ಮತ್ತು ಹಟವೊಂದು ಹೆಣ್ಣಿಗೆ ಹುಟ್ಟು ಕೊಟ್ಟ ಬಳುವಳಿಯೇನೋ ಅನ್ನುವಂತಿರುತ್ತದೆ.. ಈ ಗುಣಗಳ ಮೂರ್ತರೂಪವೇ ಈ ಕಥಾನಕದ ಅಮ್ಮಚ್ಚಿ... ಲಹರಿ ತಂತ್ರಿ ಅನ್ನುವವರ ಮಾಗಿದ ಅಭಿನಯ ಅವರೆಲ್ಲೋ ನಮ್ಮದೇ ಮನೆಯ ಹುಡುಗಿಯೆನ್ನುವಷ್ಟು ಆಪ್ತವಾಗಿಸುತ್ತದೆ.. ಅಮ್ಮಚ್ಚಿ ಬಯಲ ಹೂವು.. ತನ್ನದೇ ಲೋಕದಲ್ಲಿ ತಂಗಾಳಿಯಂಥ ಕನಸಿನಲ್ಲಿ ಚಿಟ್ಟೆಯ ರೆಕ್ಕೆಯ ಮೆದುವಾದ ಸ್ಪರ್ಶದ ಕುರಿತಾಗಿ ಹಾತೊರೆಯುತ್ತಿದ್ದಂಥವಳು.. ಮಿಡತೆಯ ಕಾಲಿಗೆ ಸಿಕ್ಕಿ ಮನೆಯೊಳಗೆ ಬಂದು ಬಿದ್ದಂಥದು.. ಇನ್ನು , ಅದೆಷ್ಟೋ ವಸಂತಗಳನ್ನ ಒಂಟಿಯಾಗಿ ಕಳೆದ ಸುಕ್ಕು ಚರ್ಮವೊಂದಿದೆ.. `ಪುಟ್ಟಮ್ಮತ್ತೆ' ; ನಿರ್ಭಾವ ಜಾಗೃತಿಯ ಕಲಿಸುವಂಥವಳು.. ಎದೆ, ಕಲ್ಲಾದಲ್ಲಿ ಪ್ರಾಯದ ಹಸಿವನ್ನೂ ಮೀರಿ ನಿಲ್ಲಬಹುದೆನ್ನೋ ಗಟ್ಟಿಗಿತ್ತಿ.. ಸಾವಿಗಿಂತ ಬದುಕಿನ ಪ್ರೀತಿ , ಮಾತೃತ್ವದ ರೀತಿಯನ್ನ ನೆಚ್ಚಿ ಉಳಿದಂಥವಳು.. ಎಲ್ಲಾ ಏರಿಳಿತಗಳ, ಅದೆಷ್ಟೋ ಹಗಲಿರುಳುಗಳ ಮೂಕಸಾಕ್ಷಿಯಾಗಿಯೇ ಉಳಿದುಹೋದಂಥವಳು.. ಋಣಕ್ಕೆ ಬಿದ್ದ , ಮತ್ತು ತಿಳಿಯದೆಯೇ ಮಿಡತೆಗೆ ಬಾಗಿಲು ತೆಗೆದವಳು; ಕಾಲನ ಕ್ರೂರ ಹವೆಗೆ ಜರ್ಝರಿತಳು.. ರಾಧಾಕೃಷ್ಣ ಉರಾಳರಲ್ಲಿ ಪುಟ್ಟಮ್ಮತ್ತೆ ಬಹುಶಃ ಪರಕಾಯ ಪ್ರವೇಶ ಮಾಡಿರಲೇಬೇಕು ಅನ್ನುವಷ್ಟು ಏಕೀಭೂತರು.. ಇನ್ನು , ಮಾನಸಿಕ ಸ್ತಿಮಿತ ಕಳೆದುಕೊಂಡಂಥವಳು.. ಪುರುಷ ಡಾಂಭಿಕತೆಯನ್ನ ಮತ್ತು ಸಮಾಜದ ಕಾಠಿಣ್ಯತೆಯನ್ನ ಸವಿಸ್ತಾರವಾಗಿ ತೆರೆದಿಡಬಲ್ಲಂಥವಳು; ಅವಳೇ `ಅಕ್ಕು' .. ಸೋಗು ಹಾಕುತ್ತಲೇ ಸಾಗ ಹಾಕುತ್ತ , ಮದದ ಜಾತ್ರೆಯಲ್ಲಿ ದಿಗಿಲನ್ನೇ ಆಮದು ಮಾಡಿಕೊಂಡು ಭ್ರಮರಗಳ ರೆಕ್ಕೆ ಮುರಿದವಳು, ಹಾರದೇ ಉಳಿದವಳು.. ಮತ್ತೆ , ಇದ್ದೂ ಇಲ್ಲದವಳು.. ಇವಳು ಗೋಡೆಗಿಷ್ಟು ಹಬ್ಬಿ ಮುಗುಳು ಹಡೆವ ಹಸಿ ಹಂಬಲದವಳು..ಬರೀ ಹಂಬಲದವಳಾಗೇ ಉಳಿದವಳು.. ಅಕ್ಕುವಾಗಿ ಮತ್ತು ನಿರ್ದೇಶಕಿಯಾಗಿ ಚಂಪಾಶೆಟ್ಟಿಯವರು ಕಾಡುತ್ತಲೇ ಉಳಿದುಹೋಗುತ್ತಾರೆ.. ಕ್ಷಣ ಕ್ಷಣದ ಮುಖಭಾವದಲ್ಲೂ ಕಟ್ಟಿಕೊಟ್ಟ ರೀತಿ ತುಂಬಾ ತುಂಬಾ ಚೆಂದ... ಎಲ್ಲಾ ಸಹಕಲಾವಿದರೂ ಇಡೀ ಕತೆಯ ಓಘಕ್ಕೆ ಮತ್ತು ಪಾತ್ರಕ್ಕೆ ಬೆನ್ನೆಲುಬಾಗಿ ನಿಂತವರು... ನೆರಳು ಬೆಳಕಿನ ಸಂಯೋಜನೆ, ಒಂದಷ್ಟು ಅದ್ಭುತ ಕಲಾಕೃತಿಗಳನ್ನು ಕಟ್ಟಿಕೊಟ್ಟಿಕೊಡುತ್ತದೆ.. ಕಾಶಿನಾಥ್ ಪತ್ತಾರ್ ಅವರ ಹಿನ್ನೆಲೆ ಸಂಗೀತ ಮಾನವೀಯ ನೆಲೆಯನ್ನ ಜಾಗೃತಗೊಳಿಸುತ್ತ ಸಾಗುತ್ತದೆ..

    ವೈದೇಹಿ ಅವರ ಸಣ್ಣ ಕತೆಗಳನ್ನ ಆಧರಿಸಿ ಹುಟ್ಟಿಕೊಂಡ ಕಥಾನಕ ಈ ಅಕ್ಕು ; ಅಲ್ಲೇ ಹೇಳಿದಂತೆ‌ ಶವಕೆ ಇಡಲೆಂದೇ ಕೆಲ ಹೂಗಳು ಅರಳುತ್ತವೆ.. ! ಕೊನೆಯದಾಗಿ ಒಂದು ಮಾತು; ರಂಗಶಂಕರ ತುಂಬಿತ್ತು... ರಂಗಭೂಮಿಯ ಘಮಲಿಗೆ ಬದುಕಿನ  ಆ ಪುಟ್ಟ ಭಾಗವೊಂದು ತುಂಬಾನೇ ಆಪ್ತವಾಗಿತ್ತು...

~`ಶ್ರೀ'
    ತಲಗೇರಿ

ಶನಿವಾರ, ಜನವರಿ 7, 2017

"ಅಂದು.. ಬಂದಿದ್ದೆ ನಾನು..."

ದ್ರವ್ಯವೊಮ್ಮೆ ಬೆರೆವಾಗ
ನಾಚಿ ಕರಗಿತ್ತು ಲವಣ
ಆಯಸ್ಸುಗಳ ಪೇರಿಸುತ್ತ
ಆಕಾರ ಪಡೆಯಿತು ಮೌನ..
ರಕ್ತ ಸೋರುವ ಬಳ್ಳಿಗರಳಿದ
ಹೂವಿಗೆ ಶಿಶುವೆಂದು ನಾಮಕರಣ..
ಅಂದು.. ಬಂದಿದ್ದೆ ನಾನು..

ತುಂಬಿಟ್ಟುಕೊಂಡ ಚೀಲದಲ್ಲಿ
ತೂರಿಬರುತ್ತಿದ್ದ ಆಹಾರ..
ತುರುಬಿಗೆ ಸಿಕ್ಕಿಸಿದ ಬಣ್ಣಗಳ
ಆಗಾಗ ಹೇಳುತ್ತಿದ್ದಳು ಅವಳು..
ಕಥನದಂತಿದ್ದ ನಾನು
ವಾಸ್ತವದ ಚಿಹ್ನೆಯಾಗಿದ್ದು
ನರಳುವಿಕೆಯ ತುದಿಯಲ್ಲಿ..
ಖಾಯಂ ವರ್ಗಾವಣೆಗೊಂಡು
ಅಂದು.. ಬಂದಿದ್ದೆ ನಾನು..

ಮೊದಲ ಅಳುವಿಗೆ
ಹಬ್ಬವೆಂದರು ಅವರು..
ಬೆಳೆಯುತ್ತಿದ್ದ ಭಾಗಗಳ
ಕಡಿದಾದ ನೆರಳುಗಳಲ್ಲಿ
ಜಾರುತ್ತಿತ್ತು ಎದೆಯಿಂದಲೇನೋ..
ಅಂದು ಬಂದಿದ್ದ ನಾನು
ಮತ್ತೆ ಹೋಗಲೇ ಇಲ್ಲ..
ಓಡತೊಡಗಿದ್ದೇನೆ, ಸಿಗಲೂ ಇಲ್ಲ..
ಮತ್ತೆ ಬರಬೇಕೆಂದಿದೆ ಹೊಸದಾಗಿ;
ಕಿಂಡಿಯಿದೆಯಾ?!...

~‘ಶ್ರೀ’
  ತಲಗೇರಿ

"ಪ್ರಪಂಚ"...

ಇಣುಕಬೇಕು ಕತ್ತೆತ್ತಿ
ತೆರೆದುಕೊಳ್ಳುತ್ತದೆ ಪ್ರಪಂಚವೊಂದು
ಕತ್ತಲೆಯ ನೆರಿಗೆಗಳು ಹಾಸಿಕೊಂಡಿದ್ದರೂ..
ಪುಟ್ಟ ಪುಟ್ಟ ಗೋಡೆಗಳಿಗಿಲ್ಲಿ
ಹಸಿರು ಚರ್ಮ
ತಿಳಿ ಹಳದಿಯಾಗಿ ಅರಳುತ್ತದೆ
ಬಿಸಿಲು ಬಿದ್ದಾಗ..
ಅರ್ಧ ಬಿಳುಪು ತುಸು ಕಪ್ಪು
ಗೆರೆಗಳು ಅಂಗಿ ತುಂಬಾ..
ಹೊದ್ದುಕೊಂಡ ನಿನ್ನೆಗಳಿಗೆ
ತೇಪೆ ಹಚ್ಚಲೇಬೇಕೆ?!..

ಹೊರಗೆಷ್ಟೇ ಬಿಸಿಲು ಸುರಿದರೂ
ಪ್ರತಿಫಲನವೆಂಬುದು ಹಸಿ ಸುಳ್ಳು..
ಅಂಟಿಕೊಂಡ ಜಾಳಿಗೆಗಳಿಗೆ
ಯಾರ ಮುಖಸ್ತುತಿಯೋ..
ತೂಗಿಬಿಟ್ಟ ಪೊಟ್ಟಣಗಳು
ಕಟ್ಟಬಲ್ಲವೇ ಬೆಲೆಯ
ಹಸಿವು ಉಕ್ಕಿಸಿದ ಬೆವರ ಕಲೆಗಳು
ಬೀಡುಬಿಟ್ಟ ಚಿಲ್ಲರೆಗಳಿಗೆ..

ಎಲ್ಲ ಜಾತಿಯ ತಿಂಡಿಯೂ
ಅದರದ್ದೇ ಆದ ಶೀಷೆಗಳಲ್ಲಿ..
ಅದೊಂದು ಅಂಗಡಿ..!
ಒಳಸರಿದಂತೆ ಇಲ್ಲ ಯಾವ ಕುರುಹೂ..
ಮಾರಾಟಕ್ಕಿಡಬಹುದಿತ್ತು ಮಿಂಚುಹುಳುಗಳ
ಅಲ್ಲಲ್ಲಿ ಮೂಲೆಯಲಿ ಹುಟ್ಟಿದ್ದರೆ;
ಜೊತೆಗೆ ಒಂದಷ್ಟು ಕೆ.ಜಿ. ಪ್ರೀತಿಯನ್ನೂ..

ಇಣುಕಬೇಕು ಮತ್ತೆ ಮತ್ತೆ..
ನಾನು ತೊಟ್ಟಿರುವ ಬಣ್ಣಕ್ಕೂ
ಅಲ್ಲಲ್ಲಿ ಚೆಲ್ಲಿರುವುದಕ್ಕೂ
ಹೆಸರುಗಳ ಕೊಡಬೇಕು..
ಕೇಳಬೇಕು ಮೂಲ ಯಾವುದೆಂದು
ಉತ್ತರಿಸಲು ಬರಬಹುದು ಮಾಲೀಕ..

~‘ಶ್ರೀ’
  ತಲಗೇರಿ

"ಗುಬ್ಬಚ್ಚಿಗಳಿಗೆ ಬಿಡಾರ ಇರಬೇಕಿತ್ತು"...

            

    ಈ ನೆನಪು ಅನ್ನೋದು ಒಂಥರಾ ಪಾತರಗಿತ್ತಿ ಇದ್ದಂತೆ.. ಯಾವಾಗ್ ಬರತ್ತೆ, ಯಾವಾಗ್ ಹೋಗತ್ತೆ ಅನ್ನೋದೇ ವಿಸ್ಮಯ.. ಒಮ್ಮೊಮ್ಮೆ ಜಗತ್ತಿನೆಲ್ಲ ಬಣ್ಣಗಳ ಮೈಗಂಟಿಸಿಕೊಂಡು ಬಂದು ಸಾವಿರಾರು ಹೂಗಳ ಕತೆ ಹೇಳಿದರೆ, ಇನ್ನು ಕೆಲವೊಮ್ಮೆ, ರೆಕ್ಕೆ ಹರಿದುಕೊಂಡು, ಕುಂಟುತ್ತಾ, ತೆವಳುತ್ತಾ ಬಂದು ವಾಸ್ತವಕ್ಕೆ ಇನ್ನೊಂದಿಷ್ಟು ಮುಖಗಳನ್ನ ಕೊಡುತ್ತದೆ.. ಬಹುಶಃ ನಿಮಗೆ ಗೊತ್ತಿರಲಿಕ್ಕಿಲ್ಲ; ಈ ಅವಳೆನ್ನೋ ಅವಳ ನೆನಪುಗಳೂ ಹಾಗೇ !.. ಮರೀಚಿಕೆ ಅನ್ನೋದಕ್ಕೆ ಪಕ್ಕಾ ಉದಾಹರಣೆಯಾಗಿದ್ದವಳು ಅವಳು.. ಸಿಕ್ಕಾಗ ಕಣ್ತುಂಬಿಕೊಂಡ ಅವಳನ್ನು ಎದೆಯೊಳಗೆ ಅಷ್ಟಷ್ಟಾಗಿ ಇಳಿಸಿಕೊಂಬುದೇ ಉತ್ಸವದಂತಿತ್ತು.. ಅವಳೊಂಥರ ಪುಟಾಣಿ ಕೃಷ್ಣನ ಥರ; ಕಳ್ಳ ಹೆಜ್ಜೆ ಹಾಕ್ತಾ ಕಿಲಕಿಲ ಅನ್ನೋಳು.. ಸಮೃದ್ಧವಾಗಿ ಬೀಳೋ ಮೊದಲ ಮಳೆಗೆ ಹಿತವಾಗಿ ಹೃದಯವನ್ನ ತಲ್ಲಣಿಸೋ ಒಂಥರಾ ಮಣ್ಣಿನ ಪರಿಮಳ ಹುಟ್ಟಿಕೊಳ್ಳುತ್ತಲ್ವಾ, ಹಾಗೆ; ಅವಳ ಗೆಜ್ಜೆ ಸದ್ದು ಅಂದ್ರೆ.. ! ಮತ್ತೊಂದಿಷ್ಟು ಕಾಲ ಕೊನೇ ಕೊನೇ ಹನಿಗಳನ್ನ ಗುಟುಕುಗಳಂತೆ ಮೆಲುಕು ಹಾಕೋದು ನನ್ನ ಜಾಯಮಾನ..

   ಈಗಲೂ ಅಷ್ಟೇ.. ಅವಳಿಲ್ಲದ ಸಂಜೆಗಳಲ್ಲಿ ಹಲುಬುತ್ತೇನೆ.. ಆ ಎತ್ತರದ ಗುಡ್ಡವಿದೆಯಲ್ಲಾ, ಅದರ ತುತ್ತತುದಿಗೆ ಒಂದು ಬಿಡಾರ ಮಾಡಬೇಕಿತ್ತು.. ಎರಡು ಗುಬ್ಬಚ್ಚಿಗಳಿಗೆ ಪುಟ್ಟ ಗೂಡೊಂದು ಇರಬೇಕಿತ್ತು.. ಅವಳುಸಿರ ಏರಿಳಿತದ ಜೋಗುಳಕ್ಕೆ ನೀಲಿ ಹಾಸಿಗೆಯಲ್ಲಿ ಮುದುರಿದ್ದ ಚಂದ್ರಮ  ರಾತ್ರಿಪೂರ್ತಿ ತಲೆದೂಗುತ್ತಿದ್ದ. ನಾನು ಅವನನ್ನು ತೋರಿಸೆಂದು ಹಟ ಮಾಡೋ ಮಗುವಾಗುತ್ತಿದ್ದೆ!.. ಅವಳು ಮರೀಚಿಕೆಯಾಗುತ್ತಿರಲಿಲ್ಲ.. ನಾಚಿಕೆ ಹೊತ್ತ ಬಿಂಕವಾಗಿ ಶೀತಲ ರಾತ್ರಿಗಳಲ್ಲಿ ಸುದ್ದಿ ಹೇಳಬರುವ ಬೆವರ ಹನಿಗಳಿಗೆ ನಾ ಕಟ್ಟೋ ಸುಂಕಕ್ಕೆ ಸಾಕ್ಷಿಯಾಗುತ್ತಿದ್ದಳು... ! ನಿಜ, ಗುಬ್ಬಚ್ಚಿಗಳಿಗೊಂದು ಬಿಡಾರ ಇರಬೇಕಿತ್ತು...

~‘ಶ್ರೀ’
  ತಲಗೇರಿ

ಶನಿವಾರ, ಅಕ್ಟೋಬರ್ 8, 2016

"ಮುಖವಾಡ ಕೊಡು, ಬದುಕಿಕೊಳ್ಳುತ್ತೇನೆ"...

                         

    ಹೌದು, ಕಡಲೇ.. ಚಿಕ್ಕವರಿದ್ದಾಗ ಜಾತ್ರೆ ಸಂತೆಗಳು ಬಂತೆಂದರೆ ಸಾಕು, ಅದೆಷ್ಟೋ ದಿನಗಳಿಂದಲೇ ಕನಸುಗಳ ಹೆಣೆಯುವಿಕೆ ಶುರುವಾಗಿಬಿಡುತ್ತಿತ್ತು. ತೆಗೆದುಕೊಂಡ ವಿಮಾನದ ರೆಕ್ಕೆ ಮುರಿದಿದೆ, ಕೀಲಿ ಕೊಡುವ ಹಕ್ಕಿ ಯಾಕೋ ಚೀಂವ್ ಚೀಂವ್ ಗುಡುತ್ತಿಲ್ಲ, ಬಡಿಯುವ ತಮಟೆಯ ಚರ್ಮ ಹರಿದುಹೋಗಿದೆ, ದುಡ್ಡಿಟ್ಟಾಗ ಬರುತ್ತಿದ್ದ ನಾಯಿಮರಿ ಬಾಗಿಲು ತೆಗೆಯುತ್ತಲೇ ಇಲ್ಲ.. ಈ ಸಲದ ಜಾತ್ರೆಯಲ್ಲಿ ಇವೆಲ್ಲವನ್ನೂ ಹೊಸದಾಗಿ ತೆಗೆದುಕೊಳ್ಳಬೇಕು ಅನ್ನೋ ಆಸೆಯ ಜೊತೆ, ಹಿಂದಿನ ಸಲ ಪಿಳಿ ಪಿಳಿ ಕಣ್ಣಿನ ಚಿಗುರು ಮೀಸೆಯ ಅಚ್ಚುಕಪ್ಪಿನ ಕಣ್ಣು ಹುಬ್ಬಿನ ಮುಖವಾಡ ತೆಗೆದುಕೊಂಡಿದ್ದೆ, ಈ ಸಲ ಒಂದೆರಡು ರಾಕ್ಷಸನ ಮುಖವಾಡ ಕೊಂಡುಕೊಳ್ಳಬೇಕು ಅಂತಂದುಕೊಳ್ಳುವಾಗ ಮುಖ ಮತ್ತು ಕಣ್ಣು ಇಷ್ಟಗಲ ಆಗುತ್ತಿತ್ತಲ್ಲಾ! ಆ ಮುಖವಾಡ ತೊಟ್ಟುಕೊಂಡು ಗೆಳೆಯನನ್ನೋ ಗೆಳತಿಯನ್ನೋ ಬೆಚ್ಚಿಬೀಳಿಸಿ ಹುಚ್ಚುಹುಚ್ಚಾಗಿ ಕುಣಿವಾಗ ಅದೆಷ್ಟು ಸಂಭ್ರಮವಿರುತ್ತಿತ್ತು. ಅಪ್ಪನ ಧ್ವನಿಯಲ್ಲಿ ಅಮ್ಮನ ಸೆರಗಿನಲ್ಲಿ ಹೊಕ್ಕಿಕೊಳ್ಳುತ್ತಿದ್ದ ಪ್ರೀತಿಯನ್ನು ಹೆಕ್ಕಿ ಹೆಕ್ಕಿ ಎತ್ತಿ ಎದೆಯಲ್ಲಿ ಬಚ್ಚಿಟ್ಟುಕೊಳ್ಳುವಿಕೆಯಿತ್ತಲ್ವಾ, ಅದೆಷ್ಟು ಮಧುರವಾಗಿತ್ತು! ಹಟ ಹಿಡಿದು ದಕ್ಕಿಸಿಕೊಂಡ ಮುಖವಾಡದ ಬಣ್ಣ ಮಾಸುವವರೆಗೆ ಮತ್ತೆ ಜಾತ್ರೆ ಬರುತ್ತದೆ, ಆಗ ಇನ್ನೊಂದು ಮುಖವಾಡ ಎಂಬ ಮುಗ್ಧತೆಯಲ್ಲಿ ಎಷ್ಟೊಂದು ಜೀವವಿತ್ತು.. ಬಹುಶಃ ಆಗ ಗೊತ್ತಿರಲಿಲ್ಲ ಕಡಲೇ, ದೊಡ್ಡವರಾಗುತ್ತ ಆಗುತ್ತ ಶಾಶ್ವತವಾಗಿ ಮುಖವಾಡ ತೊಟ್ಟುಕೊಂಡು ಅದರ ದಾಸರೇ ಆಗಿಬಿಡುತ್ತೇವೆಂದು.. ಕನ್ನಡಿಯೆದುರು ತಲೆಯೆತ್ತುವುದಕ್ಕೂ ಹೆದರುತ್ತೇವೆಂದು...

     ಕಿತ್ತಿಟ್ಟು ಬಂದಿದ್ದೇನೀಗ ಎಲ್ಲವನ್ನೂ.. ಇಷ್ಟು ದಿನಗಳ ಕಾಲ ಬಾಚಿ ಬಾಚಿ ಹಚ್ಚಿಕೊಂಡ ಮುಖವಾಡಗಳಲ್ಲಿ ಒಂದೂ ನನ್ನದಾಗಲೇ ಇಲ್ಲ, ಯಾವ ಮುಖವಾಡದ ಬಣ್ಣವೂ ನನ್ನ ಕೆನ್ನೆ ಮೇಲೆ ಆಪ್ತವಾಗಿ ಕೂರಲೇ ಇಲ್ಲ. ಚರ್ಮವನ್ನು ಸುಡುತ್ತ ಒಳಗೊಳಗೇ ಬೇಯುತ್ತಾ, ನನ್ನನ್ನು ನಾನು ಗುರುತಿಸಿಕೊಳ್ಳಲಾಗದ ಸ್ಥಿತಿಯಲ್ಲಿ ನನ್ನನ್ನು ಇಟ್ಟುಬಿಟ್ಟಿತ್ತು.. ನಾನು, ನನ್ನವರು ಎನ್ನುತ್ತಲೇ ಹೋದೆ; ಒಂದಷ್ಟು ಜನರ ಗುಂಪು ಅದನ್ನು ಸ್ವಾಭಿಮಾನ, ಪ್ರೀತಿ ಎಂದಿತು. ಎದುರು ಗುಂಪು ಅದನ್ನೇ ಸ್ವಾರ್ಥ ಎಂದಿತು. ಸಂಬಂಧಗಳ ಗೋಜಲನ್ನು ಬಿಡಿಸುತ್ತಾ ಹೋಗಬೇಕೆಂದುಕೊಂಡೆ ತತ್ವಜ್ಞಾನಿ ಎಂದರು. ನಿರ್ಲಿಪ್ತಳಾಗಿರಬೇಕೆಂದುಕೊಂಡೆ, ಕಲ್ಲುಬಂಡೆ ಅಂದರು.. ಚರ್ಮದ ಬಿಗಿತಕ್ಕೆ ಸ್ಪಂದಿಸುತ್ತಾ ಕತ್ತಲೆಯಲ್ಲಿ ದಿನನಿತ್ಯ ಚಿತ್ರಬಿಡಿಸಬೇಕೆಂದುಕೊಂಡೆ, ವೇಶ್ಯೆ ಅಂದರು. ಸಣ್ಣ ಸಣ್ಣ ವಯೋಸಹಜ ಬಯಕೆಗಳನ್ನು ಎದೆಯುಬ್ಬಿಸಿ ಈಡೇರಿಸಿಕೊಳ್ಳಹೋದೆ, ಗಂಡುಭೀರಿ ಎಂದರು. ಅನಿಸಿದ್ದನ್ನು ಎಲ್ಲರಲ್ಲೂ ಮನಬಿಚ್ಚಿ ಹೇಳಿಕೊಂಡೆ, ವಾಚಾಳಿ ಅಂದರು. ಮಾತುಗಳಿಗೆ ಲಗಾಮಿಟ್ಟು, ಎಲ್ಲ ಮೆಟ್ಟಿ ನಿಂತೆ; ವಿರಾಗಿಯೆಂದರು. ಎಲ್ಲರಂತೆ ಮನೆ ಜಮೀನು ಆಸ್ತಿಯೆಂದೆ, ಮೋಹಿಯೆಂದರು.. ಬೀದಿಗಳಲ್ಲಿ ಒಂದಷ್ಟು ದಿನ ಭಿಕ್ಷೆ ಬೇಡೋಣವೆಂದುಕೊಂಡೆ, ಮೈಬಗ್ಗಿಸಿ ದುಡಿಯೆಂದರು.. ಬಿಸಿಲಲ್ಲಿ ಚರ್ಮ ಸುಟ್ಟುಕೊಂಡರೆ, ಚಂದಿರನ ಬೆಳಕಲ್ಲಿ ಹವಾಮಾನದ ಬಿಸಿಯೇರಿಸುತ್ತೀಯಾ ಅಂತ ಕೇಳಿದರು.. ಹಸಿದಿದ್ದೇನೆ ಊಟ ಹಾಕೆಂದರೆ, ದುಡ್ಡು ಬೇಕೆಂದರು. ದುಡ್ಡಿನ ನೆರಳನ್ನಾದರೂ ಹಿಡಿಯಬೇಕೆಂದುಕೊಂಡೆ, ಲೋಭಿಯೆಂದರು. ಮೇಘಗಳೆಲ್ಲಾ ಒಟ್ಟುಗೂಡಿ ಹಬ್ಬ ಮಾಡುತ್ತಿದ್ದಾಗ, ಆಗ ತಾನೇ ಅರಳಿಕೊಂಡ ಘಮಲಿಗೆ ನಾಸಿಕದ ಸೊಗವಿಕ್ಕಿ, ಬೊಗಸೆಯಲಿ ಮುಗಿಲರಸ ಹಿಡಿಹಿಡಿದು ನಡುವಲ್ಲಿ ನವಿಲಾಗಬೇಕೆಂದುಕೊಂಡೆ, ಹುಚ್ಚುಚ್ಚಾಗಿ ಕುಣಿಯದಿರು; ನೀನು ಹುಡುಗಿಯೆಂದರು. ಅಮಾವಾಸ್ಯೆಯ ರಾತ್ರಿಯಲ್ಲಿ ಕಂದೀಲು ಹಿಡಿದು ಚಂದ್ರನನ್ನರಸುತ್ತಾ, ಅರಚುವ ಕಾಡುಜಿರಳೆಗಳ ಕತೆಗೆ ಕಿವಿಯಾಗಬೇಕೆಂದರೆ, ಹೊಕ್ಕುಳಿಗೆ ಹೂ ಬಿಡುವ ಸಮಯ, ಸಿಕ್ಕ ಸಿಕ್ಕ ಬೆರಳುಗಳಿಗಂಟಿ ಬಣ್ಣ ಕದಡೀತು ಪಕ್ಕಾ ಮಾಗುವ ಮುನ್ನವೇ ಎಂದು ಹೆದರಿಸಿದರು.. ಹೇಳು, ಕಡಲೇ.. ಹತ್ತೆಂಟು ಹುಚ್ಚು ಕಲ್ಪನೆಗಳಿದ್ದಿದ್ದರಿಂದಲೇ ನಾನು ಹೆಣ್ಣಲ್ಲವೇ!.. ರಾತ್ರಿ ನಕ್ಷತ್ರಗಳ ಕೊಯ್ದು ನನ್ನ ಹೆರಳಲ್ಲಿ ಸಿಕ್ಕಿಸಿ, ಮಧು ಬಟ್ಟಲ ಮಾಲೆ ಕಟ್ಟುವವನ ಎದೆಯ ರೋಮದ ಬೆವರಲ್ಲಿ ಕೈಯದ್ದಿ ಹೆಣ್ತನದ ಕ್ಯಾನ್ವಾಸಿಗಿಷ್ಟು ಕೈಯಚ್ಚು ಬರೆದುಕೊಳ್ಳುತ್ತೇನೆ ಅಂತ ಅಂದುಕೊಳ್ಳುವುದೂ ತಪ್ಪಾ ಕಡಲೇ.. ಇಷ್ಟೇ ಅಲ್ಲ ಕಡಲೇ, ಇನ್ನೂ ಏನೇನೋ.. ಇಷ್ಟೆಲ್ಲಾ ಮಾಡಿಯೂ ಯಾವ ಮುಖವಾಡವೂ ನನ್ನ ಸ್ವಂತದ್ದಾಗಲೇ ಇಲ್ಲ, ಇದೇ ನಾನೆಂದು ಹೇಳಿಕೊಳ್ಳುವಷ್ಟು ಆಪ್ತವಾಗಲೇ ಇಲ್ಲ.. ನಾನಾಗಲೇ ಇಲ್ಲ.. ಅಸಹ್ಯವಾಯಿತು. ಅದಕ್ಕೆಂದೇ ಇಂದು ಎಲ್ಲ ಮುಖವಾಡಗಳನ್ನು ಕಳಚಿಟ್ಟು ಬಂದಿದ್ದೇನೆ ಕಡಲೇ ನಿನ್ನಲ್ಲಿಗೆ. ನಾನು ಕೂತ ಈ ಕಲ್ಲಿನ ಮೇಲೆ ಅದೆಷ್ಟೋ ಪಾಚಿ  ಹಸಿರು ಹಸಿರಾಗಿ ಮೆರೆಯುತ್ತಿದೆ. ಒಂದಷ್ಟು ದಿನ.. ಅರೆಗಂದು ಬಣ್ಣದ ಹುಡಿಯಾಗಿ ಉದುರಿಹೋಗುತ್ತದೆ. ಈ ನೆನಪುಗಳೂ ಹೀಗೇ ಆಗಿದ್ದರೆ?!.. ಋತುಮಾನಗಳಿಗೆ ತಕ್ಕ ಫಸಲು ಯಾವತ್ತೂ ಬರುವಂತಿದ್ದರೆ!.. ಊಹ್ಞೂ.. ಕಳೆಗಳೇ ಜಾಸ್ತಿಯಾದಾಗ ಇಳುವರಿ ಎಲ್ಲಿಯದು.. ಹೀಗೇ ಎಷ್ಟೋ ವರ್ಷಗಳ ಬೆತ್ತಲೆ ಕಲ್ಲು ಮುಂದೊಂದು ದಿನ ಇನ್ನ್ಯಾರದೋ ಮನೆಯ ಮಣ್ಣಾಗಿ ಹೊಚ್ಚ ಹೊಸ ನೆರಳ ಬೇರಿಳಿಸಿಕೊಳ್ಳುವಾಗ ಈ ಪಾಚಿಯ ಗುರುತನ್ನು ಉಳಿಸಿಕೊಂಡು ಬಿಕ್ಕುತ್ತದೆಯೇ? ಮೋಡಗಳೆಲ್ಲವನ್ನೂ ತನ್ನೆದೆಗೆ ಬಿಟ್ಟುಕೊಂಡು , ಉಕ್ಕಿನ ಹಕ್ಕಿಗಳ ಧೂಮದ ಸುರುಳಿಸುರುಳಿಗೆ ಮತ್ತೆ ಮತ್ತೆ ತೆರೆದುಕೊಂಡು ತಿಳಿ ನೀಲಿ ತೊದಲಿನಲ್ಲಿ ಕಪ್ಪು ಬಿಳಿ ಕನಸುಗಳ ಬಾಯಿಪಾಠ ಮಾಡುವ ಓಹ್ ಗಗನಾ, ನಿನಗಿದು ಅರ್ಥವಾಗುವುದಿಲ್ಲ ಬಿಡು.. ನೀನು ಮತ್ತು ಭೂಮಿ  ಎಂದೂ ಭೇಟಿಯೇ ಆಗದ ಪ್ರೇಮಿಗಳಂತೆ.. ಅಥವಾ ದಿಗಂತದಲ್ಲಿ ಕೂಡಿಸಿದ್ದು ನಾವೇ; ಅದೂ ಭ್ರಮೆಯೇ!.. ಅದಕ್ಕೇ ಕಡಲೇ.. ಇದು ನಿನಗೆ ಮಾತ್ರ ಅರ್ಥವಾಗಬಹುದು.. ತವರು ಬಿಟ್ಟ ಅದೆಷ್ಟೋ ನದಿಗಳು ಬಂದು ನಿನ್ನ ಸೇರುತ್ತವೆ. ಎಲ್ಲಿಯದೋ ಕೊರಕಲು, ಎಲ್ಲಿಯದೋ ಮಣ್ಣ ಗಂಧ, ಎಲ್ಲಿಯದೋ ಸಸಿಯ ಕೊಳೆತ ಎಲೆಗಳ ಅಸ್ಥಿಪಂಜರ ಕರಗಿಸಿಕೊಂಡ ನೀರ ಪಾತ್ರಗಳು ನಿನ್ನೆದೆಯಲ್ಲಿ ಬೆರೆಯುತ್ತವೆ. ಇಷ್ಟೆಲ್ಲ ಆದರೂ ನಿನಗೊಂದು ಅಸ್ತಿತ್ವ ಸಿಕ್ಕಿಬಿಟ್ಟಿತು.; ಜೊತೆಗೆ ರುಚಿಯೂ.. ಅದೆಷ್ಟೋ ಭಾವಗಳು ನನ್ನೆದೆಯಲ್ಲಿ ಈಗಲೂ ಹುಟ್ಟಿಕೊಳ್ಳುತ್ತವೆ, ಇನ್ನೊಂದಿಷ್ಟು ಹುಟ್ಟಿಕೊಳ್ಳುವ ಮೊದಲೇ  ಗೋರಿ ಕಟ್ಟಿಕೊಳ್ಳುತ್ತವೆ. ಯಾರಿಗೂ ನನ್ನ ಅಸ್ತಿತ್ವವನ್ನು ಗಟ್ಟಿಪಡಿಸುವ ಎದೆಗಾರಿಕೆಯಿಲ್ಲ.. ಹೇಳು ಕಡಲೇ, ಹೇಳಲಿಲ್ಲವೇ ಯಾರೂ ನಿನಗೆ, ಹೂಟ್ಟೆಬಾಕನೆಂದು.. ಮಿಲನ ದರ್ಬಾರು ನಡೆಸುತ್ತಾ ಅದೇನೇನೋ ತನ್ನೊಳಗೇ ಬಚ್ಚಿಟ್ಟುಕೊಳ್ಳುವ ವ್ಯಾಮೋಹಿಯೆಂದು.. ಇಲ್ಲ, ಕಡಲೇ.. ನಿನ್ನೊಳಗೂ ಪಲ್ಲಟವಾಗುತ್ತಿರುವ ತುಂಡುಗಳಿವೆ.. ಅದಕ್ಕಾಗಿಯೇ ಅಲ್ಲವೇ ಒಮ್ಮೊಮ್ಮೆ ನೀನೂ ಸಿಡಿದೇಳುವುದು.. ಆದರೂ ಅದ್ ಹೇಗೆ ನೀನು ಆ ನಿರಂತರತೆಯನ್ನು ಕಾಯ್ದುಕೊಂಡೆ; ಬಹುತೇಕ ಒಂದೇ ತೆರನಾದ ಅಲೆ.. ಅದೆಷ್ಟೋ ತಪ್ಪಲುಗಳಲ್ಲಿ ಹಾಗೂ ಜಟೆಗಳಲ್ಲಿ ಮೂಲವಿಟ್ಟುಕೊಂಡು ಅದೆಷ್ಟೋ ಸಂಕ ಸೇತುವೆಗಳ ಕೆಳಗೆ ಹರಿದು, ಮತ್ತಿನ್ನೆಷ್ಟೋ  ಬಂಡೆಗಳ ಮೈಸವರಿ ಹೋಗುವ ನದಿಗಳು ನಿನ್ನೆದೆಯ ಸೇರಿದ ಮೇಲೆ ತಕರಾರೆತ್ತುವುದಿಲ್ಲವೇನೆ? ಅವೆಲ್ಲ ಮುಖವಾಡ ಕಳಚಿಟ್ಟವೇ, ಒಂದೇ ಒಳಗಾಗುವಂತೆ.. ಒಂದೇ ಹದವಾಗುವಂತೆ.. ಅಥವಾ ಪಾರದರ್ಶಕತೆಯ ಮುಖವಾಡ ತೊಟ್ಟಿದೆಯೇ?!.. ನಿನ್ನ ಆ ಅಗಾಧತೆಯ ಇದಿರು ನಾವೆಲ್ಲಾ ಅದೆಷ್ಟು ಚಿಕ್ಕವರಾಗಿಬಿಡುತ್ತೇವೆ ಅಲ್ವಾ!.. ಮತ್ತೆ ಮತ್ತೆ ಉಕ್ಕುತ್ತೀಯಾ ಗರ್ಭದೊಳಗಿನದೆಲ್ಲವನ್ನೂ ಗುಟ್ಟಾಗಿಯೇ ಇಟ್ಟುಕೊಂಡು; ಅದೆಂಥ ಕ್ರಿಯಾಶೀಲ ನೀನು..!

     ಗುರುತ್ವಗಳ ಗತಿಯಲ್ಲಿ ಏರುಪೇರಿದ್ದರೂ , ನಿನ್ನ ಮತ್ತು ದಡದ ಮರಳ ಸಂಬಂಧಗಳ ಮಧ್ಯ, ಮೈದಡವುತ್ತಾ ತಾಯ್ತನದ ಸುಖ ಪಡೆಯುತ್ತೀಯಾ.. ನೀಲ ನೀಲ ವಿಸ್ತಾರ.. ದೂರ ದೂರ ಹೋದಂತೆ ಇನ್ನೂ ಹತ್ತಿರ ಹತ್ತಿರ.. ಮುಳ್ಳುಪೊದೆಯ ಪುಟ್ಟ ಹೂವಿಗೆ ಹಾಡು ಹೇಳೋ ಗೆಳತಿ.. ನಿನ್ನ ಮೇಲೆ ಬಿದ್ದು ಬಿದ್ದು ನಿನ್ನ ಚೀಲದಿಂದ ಕದ್ದು ಕದ್ದು ತಿನ್ನುವ ಹದ್ದುಗಳಿಗೆ ಅಕ್ಕರೆಯ ಅಕ್ಕ.. ಭೂಮಿ ಮಡಿಲ ನೆರಿಗೆಯಲ್ಲಿ ಆಷ್ಟಷ್ಟೇ ಮೈಯ ಹರಡಿ, ಕಾಲು ಮುದುಡಿ ಮಲಗಿಕೊಂಡ ಮಗಳು.. ನಾನೂ ಒಬ್ಬ ಮಡದಿ.. ಬಹುಶಃ ಈ ನದಿಯಂತಿರಬೇಕು ನಾನು.. ಹರಿಯುತ್ತಿದ್ದರೆ ಮಾತ್ರ ಹಾಡು ಕೇಳುವುದು.. ಇನ್ನು ತಡ ಮಾಡುವುದಿಲ್ಲ; ಕಡಲೇ ಮತ್ತೆ ತಿರುಗಿ ಓಡಬೇಕು ನಾನು.. ಮತ್ತೆ ತಿರುಗಿ ನೋಡಬೇಕು ನಾನು.. ತುರ್ತಾಗಿ.. ತೊಟ್ಟುಕೊಂಡಿದ್ದೇನೆಂದೇ ತಿಳಿಯದ, ಮತ್ತೆ ಎಂದೂ ಕಳಚದ, ದಿಕ್ಕು ದಿಕ್ಕಿಗೆ ಬೇರೆ ಬೇರೆ ಬಣ್ಣ ತೋರುವ ಮುಖವಾಡ ಕೊಡು, ಬದುಕಿಕೊಳ್ಳುತ್ತೇನೆ.. ಬದುಕಿಸಿಕೊಳ್ಳುತ್ತೇನೆ.. ಸಂತೆ ಇನ್ನೂ ಮುಗಿದಿಲ್ಲ; ವ್ಯಾಪಾರವೂ...

~‘ಶ್ರೀ’
  ತಲಗೇರಿ

ಗುರುವಾರ, ಅಕ್ಟೋಬರ್ 6, 2016

"ಬಿಸಿಲು ಮಳೆ ಚಳಿಗೆ"...



ಅವಳೂರ ಕಡಲಲ್ಲಿ ಪ್ರತಿರಾತ್ರಿ ಮೃದಂಗದಂತೆ ಗುಂಯ್ ಗುಟ್ಟುವ ಅಲೆಗಳಿಗೆ ಅವನೂರ ಚಂದ್ರಮನ ತೋಳತೆಕ್ಕೆಯಲಿ ಪಿಸುಗುಡುತ್ತಿದ್ದ ನಾಳೆಗಳ ಇಂದಿನುಸಿರ ಬಿಸಿ ಸೆಳೆತ ಕಾರಣವಂತೆ.. ಇಷ್ಟಕ್ಕೂ, ಅಷ್ಟುದ್ದ ಮೈಹರವಿ ಬಿದ್ದಿರುವ ದಾರಿಗದು ಗೊತ್ತಿಲ್ಲವಂತೆ..ಆಯತದ ತಲೆದಿಂಬು ಅವಳ ಸುರುಳಿ ಸ್ವಪ್ನಗಳ ಎಳೆಯನ್ನು ಇಣುಕಿಣುಕಿ ಓದಿತ್ತಂತೆ.. ಹೆರಳಿಗಂಟಿದ್ದ ಹಳೇ ತಲೆಮಾರಿನ ಜಿಗುಟು ಸ್ನಾನಕ್ಕೆ ಹೊರಡುವಾಗ ಅಳಿದುಳಿದ ಗುಸುಗುಸು, ಮಂಚದ ಚಿತ್ತಾರಕ್ಕೆ ಕಣ್ಣುಮುಚ್ಚಾಲೆಯಾಡುವುದನ್ನು ಹೇಳಲೆತ್ನಿಸುತ್ತಿತ್ತಂತೆ.. ಒಂದೇ ನೆರಳ ಹಿಂದೆ ಅಡಗಿದ್ದ ದೀಪ, ಬೇರೆ ಬಣ್ಣ ಹಚ್ಚಲು ಕುಂಚ ಹುಡುಕುತ್ತಿತ್ತಂತೆ.. ಅವನಂತೂ ಅರ್ಧರಾತ್ರಿಯಲ್ಲಿ ಸುರಿದ ಮಳೆಯನ್ನು ಕೊಡಗಟ್ಟಲೆ ಹಿಡಿದು ರುಚಿ ನೋಡುತ್ತೇನೆಂದು ಚಪ್ಪಲಿ ಮೆಟ್ಟಿ, ಕೊಡೆಹಿಡಿದು ನಿಂತಿದ್ದಾನಂತೆ.. ಹೆಸರಿಲ್ಲದ ಕಾಡಹೂವೊಂದು ಎದ್ದು ಕುಳಿತು ತನ್ನ ನೆರಿಗೆ ಸರಿಪಡಿಸಿಕೊಂಡು, ಮಣ್ಣಿನಲಿ ಯಾರೋ ಧೂಪ ಹಚ್ಚಿಟ್ಟ ಕನಸು ಕಾಣುತ್ತ ಮತ್ತೆ ಮಲಗಿತಂತೆ.. ಅಷ್ಟಿಷ್ಟು ಸಂಗೀತ ಕಲಿತಿದ್ದ ಮುಗಿಲು ಆಗಾಗ ಅಭ್ಯಾಸ ಮಾಡುತ್ತಿತ್ತಂತೆ.. ಮೊನ್ನೆ ಅದು ಹೇಳಿದ ಮೇಲೆಯೇ ತಿಳಿದದ್ದು, ನಾಚಿಕೆಗೂ ಬಹಳಷ್ಟು ಅರ್ಥವುಂಟಂತೆ.. ಹ್ಞಾ, ಹೇಳುವುದ ಮರೆತಿದ್ದೆ; ಆದರಲ್ಲಿ ಯಾರಿಗೂ ತಿಳಿದಿರಲಿಲ್ಲ.. ಪ್ರೀತಿಗೆ ಸ್ವಂತ ಬಣ್ಣ ರುಚಿ ವಾಸನೆಯಿಲ್ಲ; ಅದು ಅನುಭೂತಿ ಅಷ್ಟೇ..! ನೆನಪಿಡಿ, ಬಾಡಿಗೆಯ ಫಲಕಗಳ ವಿಳಾಸದ ಅಕ್ಷರಗಳು ಮಸುಕಾಗುತ್ತವೆ ಬಿಸಿಲು ಮಳೆ ಚಳಿಗೆ...

~`ಶ್ರೀ'
    ತಲಗೇರಿ

ಸೋಮವಾರ, ಸೆಪ್ಟೆಂಬರ್ 19, 2016

"ಹೌದು, ಗಡಿಯಾರಗಳು ಮಾತನಾಡುತ್ತವೆ"...

                    

     ಇಷ್ಟಿಷ್ಟೇ ಮಾತನ್ನು ತಡೆತಡೆದು ಹೇಳಬಹುದೇ, ಅಷ್ಟೇನೂ ಗಮನಿಸದೆ ವಾಕ್ಯಗಳ ತಿದ್ದದೇನೆ.. ಪಾರಿಜಾತದ ನಗೆಯ ನಿನ್ನ ಕಂಗಳ ಕುಡಿಯ ಮೇಲುದುರಿದ ಇಬ್ಬನಿಯ ಕತೆಗಳನು ಹೆಕ್ಕಿ ಹೆಕ್ಕಿ ತಂದು ನಾ ಬರೆಯಲೇನು.. ಪರಿಚಯದ ಪುರವಣಿಯ ಗರಿಗರಿಯ ಹಾಳೆಗಳ ಎದೆಯೊಳಗೆ ಬೆಚ್ಚಗೆ ನಿನ್ನನ್ನು ಇರಿಸಲೇನು.. ನಾ ಒರಗಲೇನು ಹಾಗೇ ತಬ್ಬಿಕೊಂಡು.. ನೆನಪುಗಳನು ಮುದ್ದಾಗಿ ಹೊದ್ದುಕೊಂಡು...ಹೌದಂತೆ ಗೆಳತೀ.. ಈ ನೆನಪುಗಳಿಗೂ ಮತ್ತು ಕನಸುಗಳಿಗೂ ಒಂದೇ ರೂಪವಂತೆ.. ಸುರುಳಿ ಸುರುಳಿ ಮೆದುಳಿನಲಿ ಅಲ್ಲಲ್ಲಿ ಅಂಟಿ ಕೂತ ಇಬ್ಬರದೂ ಒಂದೇ ಗಮಕವಂತೆ.. ನುಸುಳಿಬರುವ ಪದಗಳಲ್ಲಿ ಪಲುಕು ಮಾತ್ರ ಬೇರೆಯಂತೆ!.. ಎಲ್ಲಕ್ಕೂ ಮೂಲ ಕಾಲವಂತೆ...

     ತುಂಬಾನೇ ವಿಚಿತ್ರ ಕಣೇ ಹುಡುಗಿ.. ಬದಲಾವಣೆಯನೇ ಕಾಲವೆಂದರೋ ಇಲ್ಲಾ, ಕಾಲವನೇ ಬದಲಾವಣೆಯೆಂದರೋ.... ಅಲ್ಲಿ ಇಲ್ಲಿ ಅದಲು ಬದಲೋ ಅಥವಾ ಒಂದೇ ತೊಗಲೋ.. ಗಟ್ಟಿ ಬಿಗಿದ ಮಾಂಸಖಂಡ ಹವೆಯ ಹಟದಲಿ, ಜೋತುಬೀಳೋ ತನಕ ತಿಕ್ಕಿಕೊಂಡ ‘ನಾನೂ’ ಕೂಡ ಹದಕೆ ಬರುವ ಹರಿವಿಗೆಂದೂ ತುಂಬು ಪ್ರಾಯವೇ?.. ಅಲ್ಲೂ ಎಳೆಯ ಮಧ್ಯ ಮುಪ್ಪುಗಳ ನ್ಯಾಯವೇ!.. ಅನುಕ್ರಮದ ಸರಣಿಯಲ್ಲಿ ಕಾಲವೆಂಬುದು ಭ್ರಮೆಯೇ.. ಅಥವಾ ತೀರಲಾರದ ಉಪಮೆಯೇ!.. ಒಂದಷ್ಟು ಕಿಸೆಗಳನು ಹೊಲಿದುಕೊಡು ಮಾರಾಯ್ತೀ, ನೆನಪುಗಳನು ಜೋಪಾನವಾಗಿ ಇಟ್ಟುಕೊಳ್ಳುತ್ತೇನೆ ಎದೆಗೆ ತುಂಬ ಹತ್ತಿರದಲ್ಲಿ... ತೇಪೆ ಹಚ್ಚಿದ ಎದೆಯೊಳಗೆ ತಡವಿಕೊಂಡಂತೆಲ್ಲಾ.., ಎಂದೋ ಮಾಸಿದ ನುಣುಪು, ಮೊನ್ನೆಯಷ್ಟೇ ಹೊಲಿದುಕೊಂಡ ಹಸಿ ಹುರುಪು, ಜೊತೆ ಜೊತೆಗೇ ಅರ್ಧರ್ಧ ಬಿಟ್ಟ ದಾರದ ಸೋಂಕು.. ಇರಲಿಬಿಡು, ನೆನಪುಗಳಲಾದರೂ ನೀನು ಪಾಲುದಾರಳಾದೆಯಲ್ಲ!.. ನೇರಳೆ ಮರದ ನೆರಳ ಕೆಳಗೆ ನವಿಲುಗರಿ ತಂದು ಬಣ್ಣಗಳ  ಬೇರ್ಪಡಿಸು ಎಂದಿದ್ದೆಯಲ್ಲ.. ಕಾಲುದಾರಿಯ ಬೇಲಿತುದಿಗೆ ಅಡಗಿಕೊಂಡ ಮೊಗ್ಗ ತಂದು ಹೆರಳ ಸಲಿಗೆಯ ಕೇಳಿಕೊಂಡ ನನಗೆ ಪೂರ್ತಿ ಹಕ್ಕು ಕೊಟ್ಟ ಮೇಲೂ, ಬಾಡಲಿಲ್ಲ ಮೊಗ್ಗು.. ಅರಳಿಕೊಂತು ಬಿಸಿಲು ಬಿದ್ದ ಹಾಗೆ..! ಅಂದು ಒಮ್ಮೆ ಕೆಸರಿನಲ್ಲಿ ಹೆಸರ ಬರೆದು ಕೆನ್ನೆಗೊಂದು ಬೊಟ್ಟು ಇಟ್ಟ ಮೇಲೆ ಸ್ಪರ್ಶಕೊಂದು ಅರ್ಥ ಬಂದಿತ್ತು..

     ಆಗಾಗ ಹಲುಬುತ್ತೇನೆ ಹುಡುಗೀ.. ಒಮ್ಮೆ ಜೋರಾದ ಮಳೆಯಲ್ಲಿ ತುಂಬಾನೇ ನೆನೆಯಬೇಕು.. ನಿನಗೆಂದೇ ನಾ ಹಚ್ಚಿಕೊಂಡ ಬಣ್ಣಗಳೆಲ್ಲಾ ತೊಳೆದುಹೋಗಿ ಖಾಲಿಯೆಂಬ(?) ನಾನುಳಿಯಬೇಕು.. ಬೆರಕೆ ಬಣ್ಣಗಳು ನೀರಿನಲಿ ಅದೆಷ್ಟು ಚಿತ್ರ ಬಿಡಿಸುವವೋ, ನಾ ಕಾದು ನೋಡಬೇಕು.. ಬೇಡ, ಬೇಡ.. ಮಳೆ ಬರುವುದೇ ಬೇಡ.. ನಿನಗೆಂದೇ ನಾ ಒಣಗಿಸಿಟ್ಟ ನಿನ್ನದೇ ಚಹರೆಗಳವು ಗೆಳತೀ.. ಹೇಳಿದೆನಲ್ಲ, ಮತ್ತೊಂದು ಮಗ್ಗುಲಲ್ಲಿ ಕನಸುಗಳಿವೆ.. ನನ್ನತನವ ಅಡವಿಡಬೇಕಿಲ್ಲವಂತೆ ಕನಸು ಕಾಣೋದಿಕ್ಕೆ.. ನೆನಪುಗಳೇ ಕನಸುಗಳೆಂದು, ಕನಸುಗಳೇ ನೆನಪುಗಳೆಂದು ಬಿಕರಿಗಿಡುತ್ತೇನೆ.. ದರ ಮಾತ್ರ ಕೇಳಬೇಡ; ಇದು ಮನಸಿನ ವ್ಯಾಪಾರ.. ! ಇನ್ನೊಂದಿಷ್ಟು ದಿನದಲ್ಲಿ ಹೊಸ ಒಪ್ಪಂದ ಶುರುವಾಗಬಹುದು.. ಮತ್ತ್ಯಾವುದೋ ಲೇಖನಿ ಇನ್ನೊಂದು ಶೀರ್ಷಿಕೆಯ ಬರೆಯಬಹುದು.. ನಾನು ಕೇಳಿಸಿಕೊಳ್ಳುತ್ತೇನೆ; ಹೌದು, ಇನ್ನು ಮುಂದೆ ಗಡಿಯಾರಗಳು ಮಾತನಾಡುತ್ತವೆ...


~‘ಶ್ರೀ’
  ತಲಗೇರಿ 

ಶನಿವಾರ, ಸೆಪ್ಟೆಂಬರ್ 17, 2016

‘ಅನ್ವೇಷಣ’ದ ಹಾದಿಯಲ್ಲಿ...

                 


     ಈ ಹುಡುಕಾಟ ಎನ್ನುವುದು ಹೇಗೆ ಮತ್ತು ಯಾಕೆ ಹುಟ್ಟಿಕೊಳ್ಳುತ್ತದೆ ಅನ್ನುವುದು ಒಂಥರಾ ವಿಸ್ಮಯ.. ಯಾರೂ ಇದರಿಂದ ಹೊರತಾಗಿಲ್ಲ; ಈ ಹುಡುಕಾಟವನ್ನೇ ವಸ್ತುವಾಗಿಸಿಕೊಂಡು ಶ್ರೀ ಎಸ್ ಎಲ್ ಭೈರಪ್ಪನವರು ಬರೆದಂಥ ಕಾದಂಬರಿ ‘ಅನ್ವೇಷಣ’. ಪಾತ್ರಗಳ ಗಟ್ಟಿತನ, ಕತೆಯ ಓಘ ಇತ್ಯಾದಿಗಳ ಬಗ್ಗೆ ಹೇಳಿ ವಿಮರ್ಶಾತ್ಮಕ ಓದುಗನಾಗುವುದಕ್ಕಿಂತ, ಅದರ ಸೌಂದರ್ಯವನ್ನು ಹಾಗೇ ಎದೆಗೆ ತುಂಬಿಕೊಂಡು ರಸಾಸ್ವಾದಕನಾಗುವುದೇ ಆಪ್ಯಾಯಮಾನ ಎನಿಸಿತು.‘ಅನ್ವೇಷಣ’ದ ಹಾದಿಯಲ್ಲಿ ನಾನು ಕಂಡ ನೆರಳು ಬೆಳಕುಗಳ ಸಂಯೋಜನೆಯನ್ನು ತಮ್ಮ ಮುಂದೆ ಈಗ ಹೀಗೆ ಹರಡುತ್ತಿದ್ದೇನೆ...

     ವ್ಯಕ್ತಿತ್ವಕ್ಕನುಗುಣವಾಗಿ ಆಲೋಚನೆ, ನಿರ್ಧಾರ, ಕೆಲಸಗಳ ಸರಣಿಯಲ್ಲಿ ಏರುಪೇರಾಗುತ್ತದೆ; ಅನುಕ್ರಮವಾಗೇ ಜರುಗಬೇಕೆಂದೇನಿಲ್ಲ.. ಇದು ಊಟ ಮಾಡುವಾಗ ಹಾಕಿಸಿಕೊಳ್ಳುವ ಪದಾರ್ಥಗಳಂತೆ!.. ಒಂದು ವಿಷಯ ಹೊರಗಿನಿಂದ ನೋಡುವವರಿಗೆ ಬೇರೆಯದಾಗಿಯೇ ಕಾಣಬಹುದು. ಆದರೆ, ಅದರಲ್ಲಿನ ತಿರುಳು ಇನ್ನೇನೋ ಆಗಿರಬಹುದು. ಅಂತೆಯೇ ಸಂಬಂಧಗಳು; ಹೊರಗಿನಿಂದ ಒಂದು ಹೆಣ್ಣು ಗಂಡಿನ ಸಂಬಂದ್ಘಕ್ಕೆ ಕಲ್ಪನೆಯ ರೆಕ್ಕೆ ಕೊಟ್ಟು, ಅದನ್ನು ಎಷ್ಟು ಕೆಳ ಮಟ್ಟಕ್ಕಾದರೂ ಇಳಿಸಬಹುದು ( ಇಳಿಸುತ್ತೇವೆಂಬುದೂ ಭ್ರಮೆಯೇ?! ).. ಆದರೆ ಆ ಸಂಬಂಧದ ಒಳ, ತಾಯಿ ಮಕ್ಕಳಷ್ಟು ಪವಿತ್ರವೂ ಆಗಿರಬಹುದು. ನಮ್ಮವರು ಎಂದುಕೊಡವರ ಬಗೆಗಿನ ಯೋಚನೆಗಳ ವರ್ತುಲದಲ್ಲಿ ಅವರ ಬಗೆಗೆ ಒಂದಷ್ಟು ಚಿತ್ರಗಳು ಗಾಢವಾಗಿ ಅಚ್ಚೊತ್ತಿಕೊಂಡಿರುತ್ತವೆ; ಅದು ಎಂಥಹುದೇ ಸ್ಥಿತಿಯಲ್ಲಿ ನಾವಿದ್ದರೂ!.. ಮನುಷ್ಯ ಸಂಬಂಧಗಳ ಕುರಿತಾಗಿ ಹೇಳುತ್ತಾ, ಒಂದು ಕಡೆ, ದಾರಿಯಲ್ಲಿ ನಡೆದುಹೋಗುವ ಪಾತ್ರವೊಂದನ್ನು ಮಾತನಾಡಿಸುವ ಜನರ ಮೂಲಕ ಅಂದಿನ ಹಳ್ಳಿಯ ಜೀವನಶೈಲಿಗೂ, ಇಂದಿನ ನಮ್ಮ ಜೀವನಶೈಲಿಗೂ ಇರುವ ವ್ಯತ್ಯಾಸವನ್ನು ಥಟ್ಟನೆ ನಮ್ಮೆದುರಿಗೆ ತಂದು ನಿಲ್ಲಿಸುತ್ತಾರೆ.

     ಸಾವಿರಾರು ಜನ ಓಡಾಡೋ ದಾರಿಯಲ್ಲಿ ಗರಿಕೆಯೂ ಬೆಳೆಯೋದಿಲ್ಲ. ಆದರೆ ಆ ದಾರಿಗೂ ‘ತನ್ನವರದ್ದು’ ಅನ್ನುವ ಹೆಜ್ಜೆಗಳು ಶಾಶ್ವತವಾಗಿ ಉಳಿಯಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ಆ ದಾರಿಯ ಧ್ವನಿ ಯಾರಿಗೂ ಕೇಳುವುದಿಲ್ಲ. ಎಲ್ಲೋ ಒಂದು ಚಿಗುರು ಕಾಣಿಸಿಕೊಳ್ಳಲಿ ಅಥವಾ ಉಳಿದುಹೋಗಲಿ ಅನ್ನುವಾಗ ಸಂಬಂಧದ ಬೇರುಗಳ ಗಟ್ಟಿತನ ಪ್ರಶ್ನೆಯಾಗುತ್ತದೆ. ಅಸಹಾಯಕ ದಾರಿಯ ಮೌನವು ಕಣ್ಣನ್ನು ತೇವವಾಗಿಸುತ್ತದೆ. ನೆನಪುಗಳು ಅದೆಷ್ಟು ಕೊಲ್ಲುತ್ತವೆ ; ಆದರೆ ಭಯವನ್ನು ಮೀರಿದವನು ಸಾವಿಗೆ ಹೆದರುವುದಿಲ್ಲ.. ಯಾವಾಗಲೂ ಕೇವಲ ದುಡ್ಡು ಕೊಟ್ಟು ತಂದ ವಸ್ತುವಿನಲ್ಲಿ ಋಣದ ಭಾರ ಕಡಿಮೆ ಅನ್ನುತ್ತಾ, ಅದು ಪ್ರೀತಿಗೆ ಅಂಟಿಕೊಳ್ಳುವುದು ಕೂಡಾ ಕಡಿಮೆಯೆಂದು ಶ್ರೀಯುತರು ಹೇಳಿದ್ದಾರೆ.

     ಒಂದು ಕಡೆ ಓದುವ ಮನಸ್ಸು (ಕರ್ತವ್ಯ), ಬಣ್ಣದ ಬದುಕಿನ ಸೆಳೆತ (ನಾವು ಹಾಕುವ ಸೋಗು), ಅಮ್ಮನನ್ನು ಹುಡುಕುತ್ತಾ ಅಲೆಯುವಿಕೆ (ನಮ್ಮೊಳಗಿನ ಮಗುತನ), ಹುತ್ತದೊಳಗೆ ಕೈಯಿಡುವಿಕೆ, ರೈಲುಹಳಿಗಳಲ್ಲಿ ನಡೆಯುವುದು (ಭಂಡತನ), ಆಗಾಗ ಅಳುವ ಹುಡುಗ (ಎಲ್ಲವನ್ನೂ ಕಳೆದುಕೊಳ್ಳುವ ಹತಾಶ ಭಾವ), ಒಂದಷ್ಟು ಗುಟ್ಟುಗಳು, ಎಲ್ಲವನ್ನೂ ತಿಳಿದು ನಿರ್ಲಿಪ್ತ ಸ್ಥಿತಿ, ನಮ್ಮೊಳಗೇ ಇರುವ ಒಂದು ಸತ್ತ್ವಯುತ ಅಧಿಕಾರ, ಎಲ್ಲೇ ಹೋದರೂ ನಮ್ಮ ಜೊತೆಗೇ ಸಾಗುವ ಗಾಯ, ಬೇನೆಗಳು, ನಮ್ಮನ್ನು ತಿದ್ದಿ ತೀಡುವ ಅನುಭವ ಮುಪ್ಪಂತೆ ಒಬ್ಬ ಪ್ರೌಢ, ತನ್ನನ್ನೇ ತಾನು ಒರೆಹಚ್ಚಿಕೊಳ್ಳುವ ಪ್ರಕ್ರಿಯೆ, ಪುರುಷಾರ್ಥಗಳೊಂದರ ಅಭಿವ್ಯಕ್ತಿ ಇದ್ದುದನ್ನು ಬಿಟ್ಟು ಇಲ್ಲದಿದ್ದುದರ ಕಡೆ ಅಥವಾ ಬೇರೆಯವರ ವಸ್ತುವಿನ ಕಡೆಗೆ ಸೆಳೆವ ಮನಸ್ಸು ಹೀಗೇ ಹೀಗೇ ಪ್ರತಿಯೊಂದು ಭಾವವೂ ಇಲ್ಲಿ ಒಂದೊಂದು ಪಾತ್ರವಾಗಿ ಕತೆಯ ತುಂಬಾ ಅಲೆದಾಡುತ್ತವೆ

     ನಮ್ಮ ಬೆನ್ನ ಮೇಲಿನ ಗಾಯ ನಮಗೆ ಕಾಣಿಸೋದಿಲ್ಲ, ಅದಕ್ಕೆ ಕನ್ನಡಿ ಹಿಡಿಯುವ ಪ್ರಯತ್ನವನ್ನೂ ನಾವು ಮಾಡೋದಿಲ್ಲ. ನೋವು ದೈಹಿಕವಾಗಿರಲಿ ಅಥವಾ ಮಾನಸಿಕವಾಗಿರಲಿ, ಗಮನಿಸಿದರೆ ಮಾತ್ರವೇ ಅರಿವಿಗೆ ಬರುತ್ತದೆ; ಅಂದರೆ ಇದಕ್ಕೆಲ್ಲಾ ಕಾರಣ ಮನಸ್ಸು ಮಾತ್ರ...

     ಮನುಷ್ಯ ತನಗೇ ತಾನು ಸತ್ಯ ಹೇಳಿಕೊಳ್ಳುವಲ್ಲಿಯೂ ತಡವರಿಸುತ್ತಾನೆ. ತನ್ನ ನಿಜವಾದ ಚಿತ್ರ ಮನಸ್ಸಿನಲ್ಲಿ ಮೂಡಿದಾಗ, ಅರೆಬರೆ ಸುಳ್ಳು ಅಲ್ಲಿಂದಲೇ ಆರಂಭವಾಗುತ್ತದೆ. ಅದಕ್ಕೆ ಸಮರ್ಥನೆಗಳೂ ಹುಟ್ಟಿಕೊಳ್ಳುತ್ತವೆ. ಈ ಸತ್ಯ ಸುಳ್ಳುಗಳೆಲ್ಲಾ ಅವರವರ ದೃಷ್ಟಿಗೆ ಸಂಬಂಧಿಸಿದ್ದಷ್ಟೇ ಅಲ್ಲವೇ! ಯಾವತ್ತು ಮನುಷ್ಯ ತನಗೇ ತಾನು ನಿಜ ಹೇಳಿಕೊಳ್ಳುವ ಶಕ್ತಿ ಪಡೆಯುತ್ತಾನೋ, ಆಗ ಆತ ಒಂದು ಮಟ್ಟ ಮುಟ್ಟಿದ ಅಂತ ಅರ್ಥ. ಕೆಲವೊಮ್ಮೆ ಪರಿಸ್ಥಿತಿ ಮನುಷ್ಯನ ಆಚಾರ ವಿಚಾರಗಳನ್ನು ರೂಪಿಸುತ್ತದೆ.

     ಪುರುಷಾರ್ಥಗಳಲ್ಲಿನ ಆಸಕ್ತಿ ಕಡಿಮೆಯಾದಂತೆ ನಾವು ಮಾಗುತ್ತಿದ್ದೇವೆ ಅಂತ ಅರ್ಥ. ಆ ನಿರಾಸಕ್ತಿ, ಒಳಗಿನ ಆಸಕ್ತಿಗೆ ಪೂರಕ. ನಮ್ಮನ್ನು ನಾವು ತಿಳಿಯುವ ಈ ಪ್ರಕ್ರಿಯೆಯಲ್ಲಿ, ಆಸಕ್ತಿ ನಿರಾಸಕ್ತಿಗಳು ಹಗಲು ರಾತ್ರಿಗಳಿದ್ದಂತೆ. ಅಕ್ಕಿ ಬೇಯುತ್ತದೆ, ಬೇಳೆಯೂ ಬೇಯುತ್ತದೆ.. ಆದರೆ ಉತ್ತಮ ಊಟದ ರುಚಿ ನಮ್ಮ ಕೈಯಲ್ಲೇ ಇದೆ. ಕೆಲವೊಮ್ಮೆ ಮನುಷ್ಯನ ಆಸೆಗಳು ಆತನನ್ನು ಮತ್ತೆ ಜೀವನ್ಮುಖಿಯಾಗಿಸುತ್ತವೆ. ನಮ್ಮಲ್ಲಿ ಅಂದರೆ, ಪ್ರಕೃತಿಯಲ್ಲಿ ಎಲ್ಲವೂ ಇದೆ. ಆದರೆ, ನಮ್ಮಲ್ಲಿನ ಸೌಂದರ್ಯಕ್ಕೆ ಅದನ್ನು ಬಳಸಿಕೊಳ್ಳಬೇಕಾದುದು ನಮಗೇ ಬಿಟ್ಟಿದ್ದು.

     ಬೇರೆಯವರ ಮೇಲೆ ಹೊರಿಸುವ ತಪ್ಪುಗಳು ನಮ್ಮ ತಪ್ಪುಗಳಿಂದ ನಮ್ಮ ಮೇಲಾದ ಕಲೆಯನ್ನು ಅಳಿಸಿಹಾಕುವುದಿಲ್ಲ. ಆ ಕಲೆಯನ್ನು ತಿಕ್ಕಬೇಕು, ಹಳೇ ಪೊರೆ ಕಳಚಿ ಮತ್ತೆ ಮರುಹುಟ್ಟು ಇರಬೇಕು.

     ಅಧ್ಯಾತ್ಮ ಎನ್ನುವುದು ಜೀವನವನ್ನು ತುಂಬ ಕಂಡವರಲ್ಲಿ ಮತ್ತು ಅನುಭವಿಸಿದವರಲ್ಲಿ ಜಾಗೃತವಾಗುತ್ತದೆ. ಏನೂ ಕಾಣದವರಲ್ಲಿ ಅದರ ಕಲ್ಪನೆಯಷ್ಟೇ ಮೂಡುತ್ತದೆ.

     ಬರೆಯುವಿಕೆಯ ಮಹತ್ವವನ್ನೂ ಸೂಚ್ಯವಾಗಿ ಶ್ರೀಯುತರು ಹೇಳುತ್ತಾರೆ. ಬರೆಯುತ್ತಾ ಹೋದರೆ ಎಷ್ಟು ಪುಸ್ತಕ ಪ್ರಕಟಿಸಬಹುದಾಗಿತ್ತು ಎಂದು ಒಂದು ಪಾತ್ರದ ಮೂಲಕ ಹೇಳುತ್ತಾ, ಬರವಣಿಗೆಯಲ್ಲಿ ಗಟ್ಟಿತನ ಇರಬೇಕು, ಬರೆದದ್ದು ನೆಲೆ ಕೊಡಬೇಕು, ಅನಿಸಿದ್ದೆಲ್ಲವೂ ಬರವಣಿಗೆಯ ರೂಪ ಪಡೆದುಕೊಳ್ಳಲಿಕ್ಕಾಗುವುದಿಲ್ಲ ಎಂಬುದನ್ನು ಸೂಕ್ಷ್ಮವಾಗಿ ಹೇಳಿದ್ದಾರೆ.

     ಹುಡುಕಾಟದಲ್ಲಿ ಹತ್ತಿರ ಬಂದ ನಮ್ಮನ್ನೇ ನಾವು ಕೆಲವೊಮ್ಮೆ ದೂರ ತಳ್ಳಿಕೊಳ್ಳುತ್ತೇವೆ. ಬಹುಶಃ ಅಷ್ಟು ವರ್ಷಗಳ ತಿಕ್ಕಾಟದ ಮೇಲಿನ ಜಿಗುಪ್ಸೆಯೋ ಅಥವಾ ಅಸ್ತಿತ್ವಕ್ಕೊಂದು ಅರ್ಥ ಕಂಡುಕೊಳ್ಳಲಾರದ ತಳಮಳದ ಇನ್ನೊಂದು ಮುಖವೋ.. ಹಪಹಪಿಸುತ್ತೇವೆ, ಸುಕ್ಕಾಗುತ್ತೇವೆ, ಮತ್ತೆ ಮತ್ತೆ ಬಿದ್ದು ಬಿದ್ದು ಏಳುತ್ತೇವೆ, ಗಟ್ಟಿಯಾಗುತ್ತೇವೆ. ಇನ್ನ್ಯಾವುದರಲ್ಲೋ ಅರ್ಥ ಹುಡುಕಲು ಶುರುವಿಟ್ಟುಕೊಳ್ಳುತ್ತೇವೆ. ಕೊನೆಗೆ ಯಾವುದೋ ಒಂದು ಮುಖವನ್ನಿಟ್ಟುಕೂಂಡು ಸಮಾಧಾನದ ಭ್ರಾಂತಿಯಲ್ಲಿ ಕಣ್ಣು ಮುಚ್ಚುತ್ತೇವೆ.

     ನಾವದೆಷ್ಟು ಜನ ಸ್ಥಿರಚಿತ್ತರಿದ್ದೇವೆ? ಏನೋ ಆಗಬೇಕೆಂದು ಕನವರಿಸುತ್ತೇವೆ. ಆ ಕನವರಿಕೆ ಒಳ್ಳೆಯ ನಿದ್ರೆಯಲ್ಲಿನ ಒಂದೆರಡು ಕ್ಷಣಗಳಾಗಿ ಹೊರಟುಹೋಗುತ್ತದೆಯೇ ಹೊರತು, ಹಗಲಿನ ಚುರುಕಾಗುವುದೇ ಇಲ್ಲ. ಸುಮ್ಮನೆ ನಡೆಯುತ್ತೇವೆ ಸಿಕ್ಕ ಸಿಕ್ಕ ಕಾಲುದಾರಿಗಳಲ್ಲಿ ಉದ್ದೇಶವೇ ಇರದೆ!.. ಸಂಬಂಧಗಳಿಗೆ ವ್ಯಾಖ್ಯೆ ಮತ್ತು ಅರ್ಥವನ್ನು ಕೊಟ್ಟುಕೊಳ್ಳುವವರು ನಾವೇ.. ಸಂಬಂಧಗಳ ಹೆಸರಿಗಿಂತಲೂ ಹೆಚ್ಚಾದ ಅನುಭೂತಿಯನ್ನು ನಾವೇ ಹುಟ್ಟಿಸಿಕೊಳ್ಳಬಹುದಲ್ವಾ?..

     ಬದುಕಿನ ಒಂದಷ್ಟು ಪುಟಗಳು ಖಾಲಿ ಅನ್ನುವುದಕ್ಕಿಂತ ಅವು ಮುಂದೆ ಬರೆಯಬೇಕಾದವುಗಳು ಅಂತ ಅಂದುಕೊಳ್ಳುವುದರಲ್ಲಿ ಅದೆಂಥ ಜೀವನೋತ್ಸಾಹವಿದೆ ಅಲ್ಲವೇ!.. ಬಹುಶಃ ಇದನ್ನೇ ಹುಡುಕಾಟ ಎನ್ನಬಹುದೇನೋ..!

     ಸಾವು ಭೌತಿಕವಾದದ್ದಲ್ಲ; ಅದು ಬೌದ್ಧಿಕವಾದದ್ದು.. ಹೊಸಹುಟ್ಟು, ಪುನರ್ ಸೃಷ್ಟಿಗೊಳ್ಳುತ್ತಲೇ ಇರುವ ನಮ್ಮ ವ್ಯಕ್ತಿತ್ವದ ಪಕ್ವತೆಗೆ ಪರಿಕರವಾಗಬೇಕು.. ನಿಜ, ಅದೆಷ್ಟೋ ಜನ ತಮ್ಮನ್ನು ತಾವು ಅರಿತಿದ್ದರೆ, ಪರಿಸ್ಥಿತಿಯ ಪರಿಹಾಸ್ಯಕ್ಕೆ ಪೆಚ್ಚು ಮೋರೆ ಹಾಕಿಕೊಂಡು ಆಗ ಸಿಕ್ಕ ಮುಖವಾಡಗಳನ್ನು ಹಾಕಿಕೊಳ್ಳುತ್ತಾ, ಒಂದಷ್ಟು ದಿನ ಭ್ರಮೆಯಲ್ಲಿ ಮೆರೆಯುತ್ತಾ ಮತ್ತೆ ಮತ್ತೆ ಸಾಯುತ್ತೇವೆ, ಹಾಗೇ ಹುಟ್ಟುತ್ತೇವೆ (ಕೆಲವೊಮ್ಮೆ!).. ಆಗಾಗ ಸತ್ತು ಹುಟ್ಟಬೇಕಂತೆ, ಹೇಗೆ?.. ಹೊಸ ಬದುಕಿನ ಅಥವಾ ಹೊಸ ಚೈತನ್ಯದ ಮರುಹುಟ್ಟೇ ಅಥವಾ ಹೊಸ ವ್ಯಕ್ತಿತ್ವದ್ದೇ?.. ಪ್ರತೀ ಸಲ ಮುಖವಾಡ ಬದಲಿಸಿಕೊಂಡಾಗಲೂ ಸಾವು ಹುಟ್ಟಿನ ಸರಸ ಖಚಿತವೇ? ಇಷ್ಟೆಲ್ಲಾ ಪಾತ್ರಗಳ ಭಾಗವಾಗುವಾಗ ‘ನಮ್ಮದು’ ಅಂತ ಒಂದು ಭಾವ ಆವರಿಸಿಕೊಳ್ಳುವುದಿಲ್ಲವೇ? ಒಂದಕ್ಕೇ ಆತುಕೊಳ್ಳುವವ ಬಹುಶಃ ಮನುಷ್ಯನಾಗಿರುವುದೇ ಇಲ್ಲವೇನೋ!.. ಪಾತ್ರಗಳ ಮತ್ತು ಅವುಗಳ ಸಂಬಂಧಗಳ ನಡುವಿನ ಎಳೆತ, ಸೆಳೆತ, ಬಿಗಿತಗಳೇ ಮನುಷ್ಯನನ್ನು ಕ್ರಿಯಾಶೀಲನಾಗಿಸುವುದು?!.. ಅಥವಾ ತಡೆದು ತಡೆದು ಬಣ್ಣಬಿಡುವ ತೀವ್ರತೆಯ ಹೆಚ್ಚಿಸುವುದು.. ಹುಡುಕುತ್ತೇವೆ, ಹುಡುಕಿಯೇ ಹುಡುಕುತ್ತೇವೆ ಯಾವುದೋ ಒಂದು ಘಟ್ಟದಲ್ಲಿ.. ಅದುವೇ ನಮ್ಮದೆಂದು ಅಥವಾ ಅದೇ ನಾವೆಂದು ಒಪ್ಪಿಕೊಳ್ಳುವ ಧೈರ್ಯ ಅಥವಾ ಮನಃಸ್ಥಿತಿ ಬಹುಶಃ ನಮಗಿರುವುದು ತುಂಬಾ ಕಡಿಮೆ. ಸಿಕ್ಕಿದೆ ಅಂದುಕೊಳ್ಳುತ್ತಿರುವಾಗಲೇ ಕಳೆದುಕೊಂಡಿರುತ್ತೇವೆ. ಯಾಕೆಂದರೆ ನಾವು ಹುಡುಕುವುದು ನಾವಾಗಿ ಅಲ್ಲ; ಅವರಾಗಿ!.. ನನಗೆ ಗೊತ್ತಿರುವ ನಾನಾದರೂ ಎಷ್ಟು ಸತ್ಯ? ಅಥವಾ ನಾನು ನನ್ನ ಚಿತ್ರ ಇಷ್ಟೇ ಇರಬೇಕೆಂದು ನನ್ನ ಸಂತೋಷಕ್ಕೆ ನಾನೇ ಎಳೆದ ಗೆರೆಗಳಲ್ಲಿ ಅದೆಷ್ಟು ನಾನಿದ್ದೇನೆ?!.. ಇದೇ ‘ಅನ್ವೇಷಣ’... :) :) :)


~‘ಶ್ರೀ’
  ತಲಗೇರಿ

ಭಾನುವಾರ, ಆಗಸ್ಟ್ 21, 2016

                                                  "ಅರ್ಧ ಅರ್ಧವೇ ಆವರಿಸು"...

     ಮೊದಲೇ ಹೇಳಿಬಿಡುತ್ತೇನೆ ಹುಡುಗೀ.. ಇವು ದಿನರಾತ್ರಿ ಸರಿವ, ಪೋಲಿ ಹುಡುಗನ ಸರಣಿ ಸ್ವಪ್ನದ ಕಂತುಗಳ ತುಣುಕುಗಳಲ್ಲ.. ಎಲ್ಲೋ ಮುಚ್ಚಿಟ್ಟ ನಕ್ಷತ್ರದೆದೆಯಿಂದ ಸ್ರವಿಸಿದ ಹಾಲ್ನೊರೆಯ ಹಸೀ ಸುಳ್ಳುಗಳೂ ಅಲ್ಲ!. ಪ್ರಾಯದ ಹರಿವಾಣದಲ್ಲಿ ಹಚ್ಚಿಟ್ಟ ಕಿರುಹಣತೆಗಳ ಹೊಂಬೆಳಕಿಗೆ ಚಿತ್ರ ಬರೆವ ಧೀಮಂತ ನೆರಳುಗಳ ಪಲ್ಲವಿಯಿದು..ಬಿಸಿಯೆದೆಯ ಅದೆಷ್ಟೋ ಕಂಪನಗಳಿಗೂ ಆರದೇ ಉಳಿದ ನನ್ನದೆಂಬುವ ಪ್ರೀತಿ ಬಿಂದುಗಳ ಜೋಡಿ ಜೋಡಿ ಕನವರಿಕೆಗಳ ತುಸು ತಲ್ಲಣವಿದು.. ನನಗೂ ನಿನಗೂ ಇಲ್ಲೊಂದು ಕತೆಯ ಕಟ್ಟುತಿದೆ ನೋಡು, ಗೊತ್ತಿಲ್ಲದೇ ಹುಟ್ಟಿಕೊಂಡ ಪದಪುಂಜಗಳ ಬಿಡಿಬಿಡಿಯ ಲಹರಿಗಳು ಒಟ್ಟಾಗಿ ಹರಿದಂಥ ಹಾಡು...

     ಗೆಳತೀ.. ಚಂದ್ರಮನ ಮೈಯಿಂದ ಜಾರಿದ ಬೆವರಿಗೆ ಆಯಸ್ಕಾಂತೀಯ ಗುಣವಿದೆಯೆಂದು ತಿಳಿದಿದ್ದೇ ಅದು ನಿನ್ನ ಹೆರಳುಗಳಲ್ಲಿ ಹೆಪ್ಪುಗಟ್ಟಿ ಮತ್ತೆ ಕರಗಿ ಮೈಯೆಲ್ಲಾ ಚದುರಿದಾಗ..ಮುಗಿಲ ದಿಬ್ಬಗಳು ಒಂದಾಗಿ ನಿನ್ನ ಮುಟ್ಟಲು ರಾಯಭಾರಿಯ ಅಟ್ಟಿದಾಗ ನಾ ಸುಮ್ಮನಿರುವುದು ಶಾಸ್ತ್ರ ಸಮ್ಮತವೇನೇ ಹುಡುಗೀ..!

                          ಸ್ವಪ್ನಗಳಿಗೆ ಸೇತುವೆಯ ಕಟ್ಟು ಗೆಳತಿ
                          ಈ ಸಂಜೆ ಕಿರಣಗಳ ಹಗ್ಗ ಹೊಸೆಯುತ್ತ..
                          ನನ್ನೆದೆಯ ಅಂಗಳದಿ ನಡೆದಾಡು ಗೆಳತಿ
                          ಅದಕಿರಲಿ ತಂಪು ಜಡಿಮಳೆಯ ಸಂಗೀತ...

     ಬಿಟ್ಟುಬಿಡೆಂದು ನಟ್ಟ ನಡುವೆ ಅಲ್ಲಲ್ಲಿಯೇ ಕನವರಿಸುವಾಗ, ಕದ್ದು ಕದ್ದು ಪಿಸುಮಾತ ಉಸುರಿದ್ದವಂತೆ ಸುತ್ತಲಿದ್ದ ಮಿಂಚುಹುಳುಗಳು..ಕತ್ತಲೆಯ ಹಂಗಿನಲ್ಲೂ ಕಡು ಶಾಪ ಕರಗಿದಂತೆ ಉರಿದುರಿದು ಮೆರೆದ ಮೇಣದ ಬತ್ತಿಯ ಬಿಸಿ ಗಂಧಕ್ಕೆ ರೆಕ್ಕೆ ಸುಟ್ಟಿದ ಪತಂಗಗಳು ಕೊರಗಲಿಲ್ಲವಂತೆ! ಬೆಳಕಿನೆದೆಯಲ್ಲಿ ಈಜುವುದು ಒಪ್ಪಂದವಿರದ ಹಕ್ಕೆಂದು ನೆನಪಾಗಿ ಉಳಿದವಂತೆ!.. ಇನ್ನು, ಇಷ್ಟು ವರ್ಷಗಳ ಕಾಲ ನಿನ್ನ ಮುಂಗುರುಳ ಜೋಕಾಲಿಯನು ಜೀಕಿದ್ದ ತಂಗಾಳಿಗೆ ನನ್ನ ಬೆರಳುಗಳ ಮೇಲೆ ಹೊಸದಾದ ಹೊಟ್ಟೆಕಿಚ್ಚಂತೆ... ನನ್ನುಸಿರ ಮೊಗೆಮೊಗೆದು ನಿನ್ನೆದೆಗೆ ತುಂಬುವ ಹೊಸ ಹುನ್ನಾರದ ರೂವಾರಿ ತಂಗಾಳಿಗೀಗ ನಮ್ಮಿಬ್ಬರಲೂ ಒಂದಾಗೋ ತವಕವಂತೆ.. ಸದಾ ಹಸಿವೆಂದು ಭೋರ್ಗರೆವ ಕಡಲ ಮೊರೆತಕ್ಕೆ, ನಮ್ಮ ಹೆಜ್ಜೆಗಳು ಕೂಡಿ, ಅದರ ತೀರದಲ್ಲಿ ಮೆಲ್ಲ ಮೆಲ್ಲ ಗುರುತು ಬಿಟ್ಟಾಗ, ಕಿರು ಬೆರಳಿಂದ ಹೆಬ್ಬೆರಳ ತನಕ ಹಬ್ಬಿಕೊಂಡ ಪುಟ್ಟ ಪುಟ್ಟ ಆಸೆಗಳ ಭಾಷೆ ಅರ್ಥವಾಯಿತಂತೆ! ಕಡಲೂ ತನ್ನ ಒಳಹರಿವ ನಿರಂತರತೆಗೆ ದನಿಯಾದ ನದಿಗಳ ಕುರಿತು ಪದ್ಯ ಬರೆಯುತ್ತೇನೆಂದು ಸದ್ಯ ಪ್ರೀತಿಯಲ್ಲಿ ಮತ್ತೊಮ್ಮೆ ಒದ್ದೆಯಾಗಲು ಕಾಯುತ್ತಿದೆಯಂತೆ!..

     ಹುಡುಗೀ.. ಋತುಮಾನವೆಲ್ಲ ನಿನ್ನದೇ ಗುಂಗಿನಲಿ ಬೀಗಬೇಕೆಂದು ಕಾದು ಕುಳಿತವನು ನಾನು.. ಮುದ್ದು ಮುದ್ದು ಅಂತರದಲ್ಲಿ ಅದೇನೋ ಸೆಳೆತ.. ಇದ್ದರೂ ಇಲ್ಲದಂತೆ, ಒಮ್ಮೊಮ್ಮೆ ಉಬ್ಬು ತಗ್ಗುಗಳಲ್ಲೆಲ್ಲಾ ಅಲೆದಲೆದು ಇಳಿದಿಳಿದು ಬಸವಳಿದು, ಕಣಿವೆಯಲ್ಲರಳಿದ ಹೂವ ಕಿಸೆಯಲ್ಲಿ ಜೋಪಾನವಾಗಿಟ್ಟು, ಬೊಗಸೆಯಲ್ಲೇ ತಬ್ಬುವ ಭಾಗ್ಯ ತೊದಲಿದಾ ತಕಧಿಮಿತಾ.. ಪೂರ್ತಿ ದಕ್ಕುವ ಪರಿಚಯದ ದಿಕ್ಕಾಗಬೇಡ ಹುಡುಗೀ..ಮೊಗ್ಗು ಮುಸುಕಿದ ಇಡಿಯ ಪಲ್ಲಂಗದಿ ಅರ್ಧ ಅರ್ಧವೇ ಆವರಿಸು.. ಅರಳುವಾಗಲೂ ಇರಲಿ ಅಲ್ಪ ವಿರಾಮ...


 ~`ಶ್ರೀ'
     ತಲಗೇರಿ 

ಬುಧವಾರ, ಆಗಸ್ಟ್ 3, 2016

"ಪ್ರಕ್ರಿಯೆ"...

ಧರೆಯೊಳಗೆ ಅಧರವನ್ನಿಟ್ಟು
ಎಂದೋ ಕದ್ದ ಗುಲಾಬಿ ಪಕಳೆಗೆ
ಬಿಂಕ ತುಂಬಿದ ಕಾಲ..
ದಾರಿ ತುಂಬ ಸುಳಿವು
ಅಲೆದಿದ್ದು ಯಾಕೆ!..
ದುಂಬಿಗೀಗ ತಿಳಿದಿಹುದು
ಅರೆ ಒಗರು ಜೇನ
ನೀನಲ್ಲಿ ಮೆತ್ತಿದ್ದು...

ತಗ್ಗಿನಲೂ ಉಬ್ಬುಗಳ
ಕಾಯ್ದುಕೊಳ್ಳುವಿಕೆ ಹೊಸತಲ್ಲ
ಪ್ರಕೃತಿಗೆ...
ಬಣ್ಣದಾ ಹನಿ
ಜಾರಿದಾ ಬಳಿಕವೂ
ಹಗ್ಗದಂತೆ ಹುರಿಗೊಳಿಸಿ
ಮೈಗಂಟಿಕೊಂಬುದರ
ತಾತ್ಪರ್ಯವೇನು!
ಕಣಿವೆಯ ಅಂಚುಗಳ
ತೀಡಿತೇ ಮಳೆಬಾನು...

ಕಳೆದದ್ದು ಹುಡುಕುವುದು
ಕಳೆದುಹೋದದ್ದರಲ್ಲಲ್ಲ;
ಉಳಿದುಕೊಂಡಿದ್ದರಲ್ಲಿ!..
ಬೆಳಕು ತೀರಿದ್ದು
ಕಾವು ಇಳಿಯಿತೆಂದಲ್ಲ;
ಟಿಸಿಲೊಡೆವ ಗಳಿಗೆಗೆ
ಮತ್ತೆ ಅಣಿಯಾಗಲೆಂದು..
ಯಾರೋ ಬಚ್ಚಿಟ್ಟ ಹಿತವಿದೆ
ಅಲ್ಲೂ ಇಲ್ಲೂ;
ಕಪ್ಪಿನಲಿ ಕರಗಿರುವ
ಕಸುವ ಹುಡುಕುವುದರಲ್ಲಿ..
ಮೈಬಿರಿದು, ತೊದಲಿಗೆ
ಬಿಡಿಬಿಡಿಯ ಕಡಲಾಗುವುದರಲ್ಲಿ..
ಹಗಲು ಹರೆಯದಿ ಕೊಟ್ಟ
ಕಲೆಯಿಹುದು ಚಂದ್ರನಲ್ಲೂ..!

                        ~‘ಶ್ರೀ’
                          ತಲಗೇರಿ

ಮಂಗಳವಾರ, ಆಗಸ್ಟ್ 2, 2016

ಮಳೆಗಾಲದಲ್ಲಿ ನಾ ಕಂಡ ‘ಗ್ರಹಣ’

    ಶ್ರೀ ಎಸ್ ಎಲ್ ಭೈರಪ್ಪನವರ ಕಾದಂಬರಿ ‘ಗ್ರಹಣ’. ಗ್ರಹಣದ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು ರೂಪುಗೊಂಡಂತಹ ಕಾದಂಬರಿ ಇದು. ಮನೋವೈಜ್ಞಾನಿಕ ವಿಷಯಗಳ ಜೊತೆಗೆ ಧರ್ಮದ ತಳಹದಿಯೊಟ್ಟಿಗೆ ಮತ್ತೆ ಒಂದಷ್ಟು ನಂಬಿಕೆಗಳ ಪ್ರಶ್ನೆಗಳು ಸೇರಿಕೊಂಡಂತಹ ವಿಶೇಷ ಕೃತಿ. ವಿಭಿನ್ನ ಕಥಾವಸ್ತು, ಧರ್ಮದ ಬಗೆಗಿನ ವಿಶ್ಲೇಷಣೆ, ಸ್ವಾವಲಂಬನೆಯ ಪರಿಕಲ್ಪನೆ, ಅಂತಃಸತ್ವಗಳ ದೃಢತೆ ಮುಂತಾದವುಗಳು ಇಲ್ಲಿನ ಪ್ರಮುಖ ಅಂಶಗಳು.

   ಗ್ರಹಣದ ಬಗೆಗಿನ ವೈಜ್ಞಾನಿಕ ಉಪನ್ಯಾಸದೊಂದಿಗೆ ಆರಂಭವಾಗುವ ಕತೆ ಮುಂದೆ ಇನ್ನಷ್ಟು ಆಳಕ್ಕಿಳಿಯುತ್ತದೆ. ಮುಖದ ತೇಜಸ್ಸಿಗೆ ವರ್ಣ ಕಾರಣವಲ್ಲ, ಕಲಿತ ವಿದ್ಯೆ ಕಾರಣ ಅನ್ನುತ್ತಾ ಶ್ರೀಯುತರು ಜ್ಞಾನದ ಮಹತ್ತತೆಯನ್ನು ಹೇಳಿದ್ದಾರೆ. ವಿಜ್ಞಾನವನ್ನು ಎಷ್ಟೇ ನಂಬಿದರೂ ಭಾರತೀಯರ ಮನಸ್ಸಿನಲ್ಲಿರುವ ಗ್ರಹಣದ ಪರಿಕಲ್ಪನೆ, ಸಂಬಂಧಗಳ ವಿಷಯ ಬಂದಾಗ ವಿಜ್ಞಾನಕ್ಕಿಂತ ನಂಬಿಕೆಗಳಿಗೆ ಒತ್ತುಕೊಡುವ ಜನಾಂಗದ ಮನಃಸ್ಥಿತಿ ಇಲ್ಲಿ ವ್ಯಕ್ತ. ಒಂದೊಮ್ಮೆ ದ್ವೇಷಿಸಿದವರೂ ಮುಂದೊಮ್ಮೆ ಆಪ್ತರಾಗಬಹುದಾದ ಸಾಧ್ಯತೆಯನ್ನು  ಹೇಳಿದ್ದಾರೆ. ಆಶ್ರಮ ಪದ್ಧತಿಯ ವಿಶ್ಲೇಷಣೆ ಇದರ ಮೂಲ ಕಥಾವಸ್ತುವಾಗಿದೆ. ಅದರಲ್ಲೂ ಸನ್ಯಾಸ ಮತ್ತು ಗಾರ್ಹಸ್ಥ್ಯದ ನಡುವಣ ತಾಕಲಾಟಗಳು ಪ್ರತಿಬಿಂಬಿಸಲ್ಪಟ್ಟಿವೆ.

   ಸನ್ಯಾಸಿಯಂತೆ ಜೀವನ ನಡೆಸಿದಾತ ಇದ್ದಕ್ಕಿದ್ದಂತೆ ಮದುವೆಯಾಗುತ್ತೇನೆಂದರೆ ಅದು ತಪ್ಪಾಗುತ್ತದೆಯೇ? ಅದು ಚಿಂತಿಸುವವರ ಮನಃಸ್ಥಿತಿಗಳ ಮೇಲೆ ನಿರ್ಧರಿಸಲ್ಪಡುತ್ತದೆ. ಒಂದು ಕೆಲಸ ಮಾಡುವಾಗ ಅದಕ್ಕೊಂದು ಪ್ರೇರಣೆ, ನೈತಿಕ ಸ್ಥೈರ್ಯ ಮತ್ತು ಒಂದು ಶಕ್ತಿಶಾಲಿ ಹಿನ್ನೆಲೆ ಬೇಕು ಎನ್ನುತ್ತಾ ಬಹುಶಃ ಅದಕ್ಕಾಗಿಯೇ ದೇವರ ಅಸ್ತಿತ್ವ ಬಲವಾಯಿತೇನೋ ಎನ್ನುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ. ಪ್ರತಿಯೊಂದು ಕ್ರಿಯೆಗೂ ಒಂದು ನಿಮಿತ್ತವಿರಬೇಕು. ಎಲ್ಲ ಕ್ರಿಯೆಗಳಲ್ಲೂ ಒಂದು ಇನ್ನೊಂದನ್ನು ಉದ್ದೀಪಿಸುವಂತಿರುತ್ತವೆ; ಪರೋಕ್ಷ ಅಥವಾ ಅಪರೋಕ್ಷವಾಗಿ.. ದೇವರು ಅನ್ನುವುದು ನಮ್ಮ ಅಜ್ಞತೆಯನ್ನು ಮುಚ್ಚಿಕೊಳ್ಳುವ ಒಂದು ಒಣಮಾತು ಅನ್ನುತ್ತಾ ಒಂದು ವಿಭಿನ್ನ ವಾದವನ್ನು ಮಂಡಿಸುತ್ತಾರೆ. ಹಿಮಾಲಯ ಅನ್ನುವುದು ಕೇವಲ ಭೌತವಸ್ತುವಾಗದೆಯೇ ಅಹಂಕಾರವನ್ನು ಮೆಟ್ಟಿ ನಿಲ್ಲುವ ಒಂದು ಪ್ರಚಂಡ ಶಕ್ತಿ, ಇಂತಹ ಶಕ್ತಿಯನ್ನೇ ದೈವತ್ವವೆನ್ನಬಹುದೆಂಬ ಅರ್ಥಕ್ಕೆ ಇಲ್ಲಿ ನೆಲೆಯಿದೆ. ಮಾಡುವ ಕೆಲಸಕ್ಕೆ ಪ್ರತಿಯಾಗಿ ಏನನ್ನಾದರೂ ಪಡೆಯಬಹುದು, ಇಲ್ಲದಿದ್ದಲ್ಲಿ ಅದು ಅಹಂಕಾರಕ್ಕೆಡೆ ಮಾಡಬಹುದು ಎಂಬ ಸಂಶಯವನ್ನೂ ಹೊರಹಾಕಿ, ಸೇವೆ ಎನ್ನುವುದು ಪವಿತ್ರವಾದದ್ದು, ಆದರೆ ಅದಕ್ಕೆ ಮತಧರ್ಮವೆಂಬ ಆಧಾರ ಬೇಕೆ? ಇದ್ಯಾವುದೂ ಇಲ್ಲದೆಯೂ ಸೇವೆ ಇರಲಾರದೇ, ಇರಬಾರದೇ ಎಂದು ಪ್ರಶ್ನಿಸುತ್ತಾರೆ. ದಯವಿಲ್ಲದ ಧರ್ಮವಿಲ್ಲ ಧರ್ಮವಿಲ್ಲದ ದಯವೂ ಇಲ್ಲ, ಪರೋಪಕಾರಕ್ಕೆ ಅಧ್ಯಾತ್ಮದ ಆಧಾರವೇ ಬೇಕಿಲ್ಲ, ಸಹಕಾರ ಅನ್ನೋದು ಕೆಳವರ್ಗದ ಪ್ರಾಣಿಗಳಲ್ಲಿಯೂ ಇರುತ್ತದೆ ಅನ್ನುವ ಮಾತು, ಮಾನವನ ಹೆಚ್ಚುವಂತಿಕೆಯ ಜಂಭಕ್ಕೆ ಕಡಿವಾಣ ಹಾಕುತ್ತದೆ.

   ಸನ್ಯಾಸವೆಂದರೆ ಸಾಗರ, ಮಾತೃ ಗರ್ಭದಿಂದ ಹೊರಬಂದು ಮಗುವಿನಂತೆ ಹರಿದು, ಗೃಹಸ್ಥನಾಗಿ ಹರವಿಕೊಂಡು, ವಾನಪ್ರಸ್ಥನಂತೆ ಸಮುದ್ರ ತಟದಲ್ಲಿ ಹರಿದು, ಅನಂತರ ಮಹಾಜಲದಲ್ಲಿ ತನ್ನ ಪ್ರತ್ಯೇಕತೆಯನ್ನು ಅಳಿಸಿಹಾಕುತ್ತದೆ ಈ ನದಿ. ಸನ್ಯಾಸವೆಂದರೆ ಐಕ್ಯತೆಯ ಅಥವಾ ಸಂಗಮದ ಸಮಯ. ತನ್ನ ಅಸ್ತಿತ್ವವನ್ನು ಇನ್ನೊಂದು ಮಹಾನ್ ಅಸ್ತಿತ್ವದೊಂದಿಗೆ ಬೆರೆಸಿ ಆ ಶಕ್ತಿಯಲ್ಲಿ ಲೀನವಾಗುವ ಪ್ರಕ್ರಿಯೆ. ಉಗಮವು ಯಾವಾಗಲೂ ಕೆಳಗಿನ ಪಾತ್ರಕ್ಕಿಂತ ಸಣ್ಣದು, ಬೆಟ್ಟ ಗುಡ್ಡಗಳ ಸಾವಿರಾರು ಜಿನುಗು ಸ್ಥಳಗಳ ನೀರು ಕೂಡಿ ಹರಿದು ಕೆಳಗಿನ ವಿಸ್ತಾರದಿಂದ ನದಿ ಎಂಬ ಹೆಸರನ್ನು ಪಡೆಯುತ್ತದೆ. ಈ ಜಿನುಗುಗಳಲ್ಲಿ ಎದ್ದು ಕಾಣುವಂಥದ್ದನ್ನು ಗುರುತಿಸಿ ಅದಕ್ಕೆ ಮೂಲದ ಪಟ್ಟ ಕಟ್ಟುತ್ತೇವೆ. ಇಷ್ಟೇ ನಮ್ಮ ತಿಳಿವಳಿಕೆ ಎಂದು ತಿಳಿಸುತ್ತಾರೆ. ಶುದ್ಧ ನೀತಿಯ, ಆತ್ಮ ಸಾಕ್ಷಿಯ ಜೀವನ ನಡೆಸುವುದು ಸಂಸಾರಿಗೆ ಸಾಧ್ಯವಿಲ್ಲ; ಅದಕ್ಕೇ ಅದನ್ನು ಬಂಧನವೆನ್ನುತ್ತಾರೆ ಅನ್ನುವಾಗ ಅರ್ಥಕ್ಕೀಗ ರೆಕ್ಕೆ ಮೂಡುತ್ತದೆ. ಗೆಲುವು ಸೋಲುಗಳು ಕೇವಲ ಭಾಸಗಳು ಅನ್ನುವ ಸತ್ಯ ಇಲ್ಲಿ ಹೇಳಲ್ಪಟ್ಟಿದೆ. ಸನ್ಯಾಸ ಅನ್ನುವುದನ್ನು ಪ್ರತಿಯೊಬ್ಬ ಸಂಸಾರಿಯೂ ಪಾಲಿಸತಕ್ಕದ್ದು, ಅದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗ.

   ಮನುಷ್ಯನಿಗೆ ಬದುಕುವುದಕ್ಕೆ ಪೊರೆಯ ಅಗತ್ಯ ಬೇಕೇ? ಎಂದು ಕೇಳುತ್ತಾ, ಬಿರುದನ್ನು ಸ್ವೀಕರಿಸಿದವನು ತನ್ನ ಸ್ವಂತ ಹೆಸರನ್ನು ಕಳೆದುಕೊಂಡಂತೆಯೇ ಅನ್ನುತ್ತಾರೆ. ಹೆಸರಿನೊಂದಿಗೆ ವ್ಯಕ್ತಿತ್ವವನ್ನು ತಳುಕು ಹಾಕಿ ಆತ್ಮವಿಮರ್ಶೆ ಮಾಡಿಕೊಳ್ಳುವುದಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮಗುವಿಗೆ ಹೆಸರಿಡುವಾಗ ಯಾರೂ ಅದರ ಒಪ್ಪಿಗೆಯನ್ನು ಕೇಳುವುದಿಲ್ಲ, ಮಗುವಿನೊಂದಿಗೆ ಹೆಸರೂ ಬೆಳೆಯುತ್ತದೆ, ಹೆಸರಿನೊಂದಿಗೆ ಮಗುವೂ.. ವ್ಯಕ್ತಿತ್ವ ಮತ್ತು ಹೆಸರು ಅವಿಭಾಜ್ಯವಾಗುತ್ತದೆ; ಹೆಸರು ಬದಲಾದರೆ ವ್ಯಕ್ತಿತ್ವ ಬದಲಾದಂತೆ ಅನ್ನುತ್ತಾ ಪ್ರತಿಯೊಬ್ಬರ ಬದುಕಿನಲ್ಲಿ ಹೆಸರೆನ್ನುವುದು ಅಸ್ತಿತ್ವದ ಕುರುಹೇ? ಎಂಬುದನ್ನು ಯೋಚಿಸುವಂತೆ ಮಾಡುತ್ತಾರೆ.

  ಒಂದು ವಿಭಿನ್ನ ಮನೋರೋಗವನ್ನು ಕತೆಯಲ್ಲಿ ಸಮರ್ಥವಾಗಿ ಬಳಸಲಾಗಿದೆ. ಮೋಹ ಮನಸ್ಸನ್ನು ಮುಚ್ಚುವಂಥದ್ದು ಪ್ರೀತಿ ಮನಸ್ಸನ್ನು ತೆರೆಯುವಂಥದ್ದು. ತುಂಬಿದ ಎಲ್ಲ ಕರಿಮೋಡ ಮಳೆ ತರಿಸುವುದಿಲ್ಲ; ಇದ್ದ ಮೋಡ ಮುಂದೆ ಸಾಗುತ್ತದೆ, ಹೊಸ ಮೋಡ ಬರುತ್ತದೆ ಅನ್ನುತ್ತಾ ಯೋಚನೆಗಳ ಪ್ರಕ್ರಿಯೆಯನ್ನು ಅವುಗಳಿಂದುಂಟಾಗುವ ಸನ್ನಿವೇಶಗಳನ್ನು ಬಣ್ಣಿಸಿದ್ದಾರೆ. ಮಳೆಯಲ್ಲಿ ನಿಂತ ಕೈ ಗಡಿಯಾರ ಮತ್ತೆ ಸದ್ದು ಮಾಡಲಿಲ್ಲ ಅನ್ನುತ್ತಾ ಆ ಕತೆಯಲ್ಲಿನ ಒಂದು ಪಾತ್ರದ ಸಂಬಂಧದ ಪರಿಸ್ಥಿತಿಯನ್ನು ಹೇಳಿದ ಪರಿ ಚೆಂದ.

  ಹೀಗೆ, ಗ್ರಹಣ ಅನ್ನುವುದು ಒಂದಷ್ಟು ಹೊತ್ತಿನ ಮಂಕೇ? ಎಂದು ವಿಶ್ಲೇಷಣೆಗೊಳಪಡಿಸಿದ, ಆಶ್ರಮ ಪದ್ಧತಿಯ ಕೊನೆಯ ಸ್ತರವಾದ ಸನ್ಯಾಸಕ್ಕೆ ಧುಮುಕಿ ಮತ್ತೆ ಗೃಹಸ್ಥನಾಗುವ ಬಯಕೆ ಏನೆಲ್ಲಾ ಪರಿವರ್ತನೆಗಳನ್ನು ತರಬಲ್ಲದು, ಅದರ ಪರಿಣಾಮಗಳೇನಾಗಬಹುದು, ಪ್ರಕೃತಿ ನಿಯಮದ ವಿಶೇಷತೆಗಳೇನು, ಧರ್ಮಕ್ಕೆ ಯಾವ ವ್ಯಾಖ್ಯಾನ ಕೊಡಬಹುದು ಎಂಬಿತ್ಯಾದಿ ಪ್ರಶ್ನಾವಳಿಗಳ ಒಟ್ಟು ಮೊತ್ತ ಗ್ರಹಣ. ಕೆಲವರಿಗೆ ಕತೆ ಅಪೂರ್ಣವೆನಿಸಿದರೆ ಕೆಲವರಿಗೆ ಪೂರ್ಣ ಅನಿಸಬಹುದು. ಯಾವುದೇ ಕತೆಯಲ್ಲಾದರೂ ಪ್ರತಿಯೊಂದು ಪಾತ್ರಕ್ಕೂ ಅದರದ್ದೇ ಆದ ಅಂತ್ಯ ಇರುತ್ತದೆ. ಆ ಅಂತ್ಯಕ್ಕೂ ಒಂದು ಅರ್ಥ ಇರುತ್ತದೆ. ನನಗೀ ಕತೆ ಅಪೂರ್ಣವಾದಂತೆ ಕಂಡಿಲ್ಲ, ತಾವೂ ಒಮ್ಮೆ ಓದಿ, ಅಭಿಪ್ರಾಯ ಹಂಚಿಕೊಳ್ಳಿ...

                                                                                                                               ~‘ಶ್ರೀ’
                                                                                                                                  ತಲಗೇರಿ

"ಯಾನ"ದ ಜೊತೆ ಮಳೆಗಾಲದ ಸಂಜೆ...

     ಶ್ರೀ ಎಸ್ ಎಲ್ ಭೈರಪ್ಪನವರಿಂದ ರೂಪುಗೊಂಡಂತಹ ಕಾದಂಬರಿ ‘ಯಾನ’..ನನ್ನ ಬುದ್ಧಿಮಟ್ಟಕ್ಕೆ ನಿಲುಕಿದಷ್ಟನ್ನು ತಮ್ಮೊಂದಿಗೆ ಹಂಚಿಕೊಳ್ಳುವಾಸೆ, ಅದಕ್ಕಾಗಿಯೇ ಈ ಲೇಖನ..

    ಬರೆಯುವಿಕೆಯನ್ನ ತಪಸ್ಸಂತೆ ಸ್ವೀಕರಿಸಿದವರಲ್ಲಿ ಶ್ರೀಯುತರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಬಹುಶಃ ಇಂಥದ್ದೊಂದು ವಸ್ತುವನ್ನು ಇಷ್ಟು ಸಮರ್ಥವಾಗಿ ಇವರು ಮಾತ್ರವೇ ಬರೆಯಲಿಕ್ಕೆ ಸಾಧ್ಯ ಅನಿಸುತ್ತದೆ. ವಿಭಿನ್ನ ದೃಷ್ಟಿಕೋನದಲ್ಲಿ ಎಲ್ಲಿಯೂ ಲಯ ತಪ್ಪದಂತೆ ಒಂದು ವಿಷಯವನ್ನು ಮಂಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಈ ಕಾದಂಬರಿಯಲ್ಲಿ ಎಲ್ಲವುಗಳ ಸಮಾಗಮವಿದೆ. ಅವರೇ ಹೇಳಿರುವಂತೆ, ಇದು ಕೇವಲ ವಿಜ್ಞಾನದ ಕತೆಯಲ್ಲ; ಯಾವುದೇ ವರ್ಗಕ್ಕೂ ಸೇರುವುದಿಲ್ಲ. ಮನುಷ್ಯನ ಅನುಭವಗಳ ಶೋಧದ ಗುಚ್ಛ ಇದು, ಅಸ್ತಿತ್ವದ ಹುಡುಕಾಟ ಇದು. ಒಂದಷ್ಟು ನಂಬಿಕೆಗಳನ್ನ ಪ್ರಶ್ನಿಸುತ್ತಲೇ ಅದರಾಳಕ್ಕೆ ನಮ್ಮನ್ನೂ ಇಳಿಸಿ, ಮತ್ತೆ ಅಲ್ಲೇ ಉತ್ತರವನ್ನೂ ದೊರಕಿಸುವ ಅವರ ಪಾಂಡಿತ್ಯಕ್ಕೆ ಯಾರಾದರೂ ಶರಣಾಗಲೇಬೇಕು. ಒಂದು ಕಾದಂಬರಿ ಬರೆಯುವಾಗ ಪೂರ್ವಭಾವಿಯಾಗಿ ಒಂದಷ್ಟು ಸಂಶೋಧನೆಗಳಿರುತ್ತವಲ್ಲಾ, ಬಹುಶಃ ಮತ್ತ್ಯಾರೂ ಒಂದು ಕಾದಂಬರಿಗಾಗಿ ಇಷ್ಟು ಆಳಕ್ಕಿಳಿಯುವುದಿಲ್ಲವೇನೋ; ಕೇವಲ ಆಳವಲ್ಲ, ವಿಸ್ತಾರಕ್ಕೂ ಕೂಡ...

    ಅಸ್ತಿತ್ವದ ಹುಡುಕಾಟದ ಈ ಕತೆ ಒಂದು ವಿಶಿಷ್ಟ ವಿಷಯದೊಂದಿಗೆ ಶುರುವಾಗುತ್ತದೆ. ಅಕ್ಕ ಮತ್ತು ತಮ್ಮನ ನಡುವಿನ ಮದುವೆ..! ಅಲ್ಲಿಂದಲೇ ಕಾದಂಬರಿ ನನ್ನನ್ನ ಸಂಪೂರ್ಣವಾಗಿ ಆವರಿಸಿಕೊಂಡುಬಿಟ್ಟಿತು. ಮೇಲ್ನೋಟಕ್ಕೆ ನಮ್ಮ ನಂಬಿಕೆಗಳಿಗೆ ವಿರುದ್ಧವಾಗಿರುವಂತೆ ತೋರಿದರೂ ಕೊನೆಯಲ್ಲಿ ಇದಕ್ಕೆ ನ್ಯಾಯ ಒದಗಿಸುತ್ತಾರೆ. ನಮ್ಮೆಲ್ಲರ ಮನಸುಗಳ ಪಾವಿತ್ರ್ಯವನ್ನ ಎತ್ತಿ ಹಿಡಿಯುತ್ತಾ ಭಾರತೀಯತೆಯನ್ನ ಮತ್ತೆ ಮತ್ತೆ ಪ್ರತಿಬಿಂಬಿಸುತ್ತಾರೆ. ಕರ್ತವ್ಯ ಮತ್ತು ನೈತಿಕತೆಯ ವಿಷಯ ಬಂದಾಗ ಕರ್ತವ್ಯವನ್ನೇ ಮೊದಲಾಗಿಸಿ, "ಕ್ಷೇತ್ರೇ ಕ್ಷೇತ್ರೇ ಧರ್ಮಂ ಕುರು" ಎಂಬ ತತ್ತ್ವಕ್ಕೆ ಒತ್ತು ಕೊಡುತ್ತಾರೆ. ಒಂದು ವಿಶಿಷ್ಟ ಕರ್ತವ್ಯವನ್ನು ಪೂರೈಸಬೇಕಾದ ಹೆಣ್ಣೊಬ್ಬಳಿಗೆ ನೈತಿಕತೆ ಮತ್ತು ಕರ್ತವ್ಯದ ಬಗೆಗಿನ ದ್ವಂದ್ವಕ್ಕೆ ಸಮರ್ಥ ಧ್ವನಿ ಈ ಕಾದಂಬರಿಯಲ್ಲಿದೆ. ಕೇದಾರನಾಥನನ್ನು ಬಣ್ಣಿಸುತ್ತಾ ಒಂದಷ್ಟು ವರ್ಷಗಳ ಹಿಂದಿನ ಭಾರತದ ಭೌಗೋಳಿಕ ಸ್ಥಿತಿ ಮತ್ತು ಇಂದಿನ ಭಾರತದ ಪರಿಸ್ಥಿತಿಯನ್ನ ಹೇಳುತ್ತಾರೆ. ವಾಣಿಜ್ಯೀಕರಣದ ಸ್ಪರ್ಶದಿಂದ ಪವಿತ್ರ ಕ್ಷೇತ್ರಗಳಲ್ಲಾಗುವ ಬದಲಾವಣೆಗೆ ಮನಸ್ಸು ದುಃಖಿಸುತ್ತದೆ. ಜೊತೆಗೆ ವೈಜ್ಞಾನಿಕತೆಯ ಇಂದಿನ ಯುಗದಲ್ಲೂ ಅಪ್ಪಟ ಭಾರತೀಯ ನಾರಿಯೋರ್ವಳ ಮನಃಸ್ಥಿತಿ ಹೇಗಿರುತ್ತದೆ ಅನ್ನುವುದನ್ನ ಕತೆಯುದ್ದಕ್ಕೂ ಹೇಳುತ್ತಾ ಸಾಗುತ್ತಾರೆ; ಅದು ಭಾರತದ ಪೂಜನೀಯ ಸ್ಥಾನಕ್ಕೆ ಪುಷ್ಟಿ ಕೊಡುತ್ತದೆ. ಇಲ್ಲಿನ ನಾರಿ ಎಂದಿಗೂ ಪ್ರಬುದ್ಧಳು, ಮಾನಸಿಕವಾಗಿ ಹಾಗೇ ದೈಹಿಕವಾಗಿ ಅಷ್ಟೇ ಗಟ್ಟಿಗಳು ಅನ್ನುತ್ತಾ ಅವಳ ಮಹತ್ತತೆಯನ್ನ ಗಹನತೆಯನ್ನ ಪಾವಿತ್ರ್ಯತೆಯನ್ನ ಪ್ರತಿಧ್ವನಿಸುತ್ತಾರೆ.

    ಜಗತ್ತಿನಲ್ಲಿ ಅದೆಷ್ಟೇ ಧರ್ಮಗಳಿದ್ದರೂ, ಎಲ್ಲ ನಂಬಿಕೆಗಳೂ ಆಯಾ ಕಾಲಘಟ್ಟಕ್ಕೆ, ಆಯಾ ಪರಿಸ್ಥಿತಿಗೆ ತಕ್ಕಂತೆ ಪುನರ್ರಚನೆಗೊಳ್ಳುತ್ತವೆ. ಆ ಧರ್ಮಗಳ ಹೊರತಾಗಿಯೂ ಕೆಲವೊಮ್ಮೆ ನಂಬಿಕೆಗಳು ಅಸ್ತಿತ್ವ ಪಡೆಯುತ್ತವೆ. ಪರಿಸ್ಥಿತಿಗೆ ತಕ್ಕಂತೆ, ಮನಃಸ್ಥಿತಿಗೆ ತಕ್ಕಂತೆ ಒಂದು ವಿಷಯ/ವಸ್ತು ವಿಭಿನ್ನ ಅರ್ಥವನ್ನು, ವಿಭಿನ್ನ ದೃಷ್ಟಿಕೋನವನ್ನು ಪಡೆಯುತ್ತದೆ. ಅದಕ್ಕೆ ಉದಾಹರಣೆಯೆಂಬಂತೆ ಅರಳು ಮಲ್ಲಿಗೆಯಂತೆ ಕಂಡ ನಕ್ಷತ್ರ ಇನ್ನೊಮ್ಮೆ ಉರಿವ ಜ್ವಾಲೆಯಾಗಿ ಕಾಣುವಿಕೆಯನ್ನ ಹೇಳಿದ್ದಾರೆ. ಇದು ಒಂದೇ ವ್ಯಕ್ತಿಯ ಬೇರೆ ಬೇರೆ ಮನಃಸ್ಥಿತಿ ಮತ್ತು ಸನ್ನಿವೇಶಗಳಲ್ಲಿನ ಎರಡು ವಿಭಿನ್ನ ದೃಷ್ಟಿಕೋನಗಳು. ಅನಂತದ ಬಗೆಗಿನ ಆಸಕ್ತಿ, ಅನಂತತೆಯಲ್ಲೇ ಕೊನೆಗೊಳ್ಳುತ್ತದೆ. ಆಸಕ್ತಿ ಅಥವಾ ಮಗ್ನತೆ ಕೊನೆಯಲ್ಲಿ ನಮ್ಮನ್ನೇ ತಾನಾಗಿಸಿಕೊಳ್ಳುತ್ತದೆ. ಅದಕ್ಕಾಗಿಯೇ ಇಲ್ಲಿನ ಪ್ರತಿ ಪಾತ್ರವೂ ಒಂದೊಂದು ಭಾವವಾಗಿ ರೂಪುಗೊಂಡಿದ್ದು.. ವೈಜ್ಞಾನಿಕತೆ ಅನ್ನುವುದು ಅನಂತದ ಹೊರತಾಗಿಲ್ಲ; ಅದೂ ಕೂಡ ಪೂರ್ಣತೆ ಮತ್ತು ಶೂನ್ಯತೆಗಳ ಹುಡುಕಾಟದಲ್ಲಿದೆ..

    ಭೂಮಿಯಿಂದ ಆಚೆ ಬಂದಾಗ, ಹಿಮಾಲಯದಲ್ಲಿನ ಅವಘಡಗಳು ಬೆಂಗಳೂರಿನ ಸ್ವಂತ ಮನೆಯಲ್ಲಾಗುವ ಅವಘಡದಂತೆ ಏಕರೂಪವಾಗುತ್ತದೆ. ಒಂದು ಪರಿಧಿಯಿಂದಾಚೆಗೆ ಎಲ್ಲವೂ ಏಕತ್ವದಲ್ಲಿ ಸಂಗಮಿಸುತ್ತವೆ. ಪ್ರಜ್ಞೆ ಮತ್ತು ನೋವು ಒಂದಕ್ಕೊಂದು ಸಂಬಂಧಿಸಿದವುಗಳು.. ಇಲ್ಲಿ ಎಲ್ಲವೂ ನಮ್ಮ ಮನಃಸ್ಥಿತಿಗೆ ಸಂಬಂಧಿಸಿದ್ದು.. ನಮ್ಮ ಮನಃಸ್ಥಿತಿಗೆ ತಕ್ಕಂತೆ ಬದಲಾಗುತ್ತವೆ; ರೂಪುಗೊಳ್ಳುತ್ತವೆ.. ಒಂದಕ್ಕೊಂದು ಪರೋಕ್ಷವಾಗಿಯೋ ಅಪರೋಕ್ಷವಾಗಿಯೋ, ಆದರೆ ಪೂರಕವಾಗಿ.. ! ಎಲ್ಲಕ್ಕೂ ಒಂದು ಅಂತ್ಯ ಅನ್ನುವುದು ಇದ್ದೇ ಇದೆ; ಅದೇ ತರ ವೈಭವ ಅನ್ನುವುದು ಒಂದು ಸಲ ನೇಪಥ್ಯಕ್ಕೆ ಸರಿದ ಮೇಲೆ ಜನರ ಮನಸ್ಸಿನಿಂದಲೂ ಕ್ರಮೇಣ ಅದು ಮರೆಯಾಗುತ್ತದೆ, ಅದೇ ತರ ನಮ್ಮೆಲ್ಲರ ಬೇರೆ ಬೇರೆ ಸ್ತರಗಳ ಸ್ಥಿತಿಗಳು..

    ಸೂರ್ಯನನ್ನು ಸತ್ಯದ ನೆಲೆಯಾಗಿರಿಸಿಕೊಂಡು ಅದರ ಮೂಲವನ್ನು ಹುಡುಕುತ್ತಾ, ಕಪ್ಪು ರಂಧ್ರದಲ್ಲಿನ ವಿಸ್ಮಯವನ್ನ ಹೆಣ್ಣೊಳಗಿನ ಭಾವಕ್ಕೆ ಏಕೀರ್ಭವಿಸುತ್ತಾ, ತತ್ತ್ವಜ್ಞಾನ ಮತ್ತು ಭೌತವಿಜ್ಞಾನಗಳೊಂದಿಗೆ ಸಮೀಕರಿಸಿಕೊಂಡು ಹೋಗುವಿಕೆಯ ಚೆಂದವನ್ನ ನಾವಾಗೇ ಅನುಭವಿಸಬೇಕು. ನನ್ನೊಳಗೇ ನಾನಾಗಿ, ನಾನೇ ನನ್ನೊಳಗಾಗುವ ಪ್ರಕ್ರಿಯೆ, ಹಾಗೆಯೇ ಮೆದುಳು ಭೌತ ವಸ್ತುವೇ ಅಥವಾ ಭೌತ ವಸ್ತು ಎನ್ನುವುದು ಬುದ್ಧಿಯ ರೂಪವೇ ಎನ್ನುವಂತಹ ಸಿದ್ಧಾಂತ.. ಸತ್ಯವೆಂದರೇ ಬರಿ ಭಾವವೇ? ಅಂತ ಪ್ರಶ್ನಿಸುತ್ತಾ, ಸಾರ್ವಕಾಲಿಕ ಮತ್ತು ಸಾರ್ವದೇಶಿಕ ಸತ್ಯವೆಂಬುದಿಲ್ಲ ಅನ್ನುವುದನ್ನ ಅನಾವರಣಗೊಳಿಸುತ್ತಾರೆ. ಅರಿವಿನ ಅರಿವಿಲ್ಲದೇ ಅಪೂರ್ಣ ಎಲ್ಲಾ, ಒಲಿಯದ ಪ್ರಕೃತಿಯಿಂದ ವಿಮುಖನಾದಾಗ ಮಾತ್ರವೇ ಅಧ್ಯಾತ್ಮದ ಅಗತ್ಯ ಕಾಣುವುದು ಅನ್ನುತ್ತಾ, ನಾವು ಭಾರತೀಯರು ಗಂಡು ಹೆಣ್ಣಿನ ಮಿಲನವನ್ನು ಕೇವಲ ಭೌತಿಕ ಕ್ರಿಯೆಯಾಗಿ ಕಾಣುವುದಿಲ್ಲ, ಅದು ಕೇವಲದ ಭೌತಿಕತೆ ಅಲ್ಲಾ, ಅದು ಆತ್ಮಗಳಿಗೆ ಸಂಬಂಧಿಸಿದ್ದು ಅನ್ನುವುದನ್ನ ಸೂಚ್ಯವಾಗಿ ಹೇಳಿದ್ದಾರೆ.. ಹೀಗೇ ಭೌತವಿಜ್ಞಾನ, ತತ್ತ್ವಜ್ಞಾನ, ಖಗೋಳ, ಭೂಗೋಳ, ಮನಃಶ್ಶಾಸ್ತ್ರ ಹೀಗೆ ಹತ್ತು ಹಲವು ಮಜಲುಗಳ ಪ್ರಬುದ್ಧ ಅಂಶಗಳನ್ನು ಒಂದೇ ಕಡೆ ಕಲೆ ಹಾಕಿದ್ದು ಈ ಕಾದಂಬರಿಯಲ್ಲಿ ಕಂಡುಬರುತ್ತದೆ.. ನಿಮ್ಮಲ್ಲೂ ಯಾರಿಗಾದರೂ ‘ಯಾನ’ದ ಬಗೆಗೆ ಹೇಳಿಕೊಳ್ಳಬೇಕೆನಿಸಿದರೆ ದಯವಿಟ್ಟು ಹಂಚಿಕೊಳ್ಳಿ, ಹೊಸ ಜಗತ್ತಿಗೆ ಮತ್ತೆ ಮತ್ತೆ ತೆರೆದುಕೊಳ್ಳುತ್ತಾ ಇರೋಣ... :) :) :)

                                                                                                                                       ~‘ಶ್ರೀ’
                                                                                                                                          ತಲಗೇರಿ

ಎಚ್ಚೆಸ್ವಿ ಕಥಾಲೋಕದಲ್ಲೊಂದಷ್ಟು ಹೊತ್ತು...

     ‘ಎಚ್ಚೆಸ್ವಿ ಅವರ ಈವರೆಗಿನ ಕತೆಗಳು’ ಅನ್ನುವ ಪುಸ್ತಕದಲ್ಲಿ ಎಚ್ಚೆಸ್ವಿ ಅವರು ಬರೆದಂಥ ಕತೆಗಳನ್ನ ಕಲೆಹಾಕಲಾಗಿದೆ. ಆ ಪುಸ್ತಕದ ಜೊತೆ ನಾನು ಕಳೆದ ಕ್ಷಣಗಳನ್ನು ಹೀಗೆ ಹಂಚಿಕೊಂಬಾಸೆ...

     ಸುಮಾರು ಮೂವತ್ತು ವರ್ಷಗಳಿಗಿಂತಲೂ ಹಳೆಯದಾದ ಕತೆಗಳು ಈ ಪುಸ್ತಕದಲ್ಲಿರುವುದರಿಂದ, ಇಂದಿನ ಓದುಗನಿಗೆ ಒಂದು ಹೊಸ ಅನುಭವ ದಕ್ಕುತ್ತದೆ. ಕ್ರಾಂತಿಗಳೆಲ್ಲಾ ವೈಯಕ್ತಿಕ ಒತ್ತಡಗಳ ಮೂಲದಿಂದಾನೇ ಹುಟ್ಟುತ್ತವೋ ಏನೋ ಯಾರಿಗೆ ಗೊತ್ತು ಅನ್ನುತ್ತಾ ಅಂತರ್ಜಾತೀಯ ವಿವಾಹವಾಗಲು ಯೋಚಿಸುವ ಒಬ್ಬ ವ್ಯಕ್ತಿಯ ಬಗೆಗೆ ಹೇಳಿದ್ದಾರೆ. ಪ್ರವಾಹವನ್ನು ಪ್ರೇಮಕ್ಕೆ ಹೋಲಿಸಿ, ಕೊನೆಯಲ್ಲಿ ಕ್ಷಣ ಕ್ಷಣಕ್ಕೆ ಅವಳು ದೂರಾಗುತ್ತಿದ್ದಳು ಅನ್ನುವಾಗ ನಾವೇ ನಮ್ಮ ಸ್ವಂತದ್ದೇ ಏನನ್ನೋ ಕಳೆದುಕೊಳ್ಳುತ್ತಿದ್ದೇವೆ ಅನ್ನುವ ಭಾವ ಆವರಿಸಿಕೊಳ್ಳುತ್ತದೆ. ಪ್ರವಾಹ ಇಳಿಯುವುದು ಹೇಗೆ ಒಳ್ಳೆಯದೋ ಹಾಗೇ ಕೆಲವೊಮ್ಮೆ ದೂರಾಗುವ ಪ್ರೀತಿ ಕೂಡಾ ಭವಿಷ್ಯದ ಹಿತಕ್ಕಾಗಿ ಎಂಬುದನ್ನ ಸೂಚ್ಯವಾಗಿ ತಿಳಿಸಿದ್ದಾರೆ.

     ಅವರ ಇನ್ನೊಂದು ಕತೆಯಲ್ಲಿ, ಹೆಣವೊಂದು ದೇವಸ್ಥಾನದ ಎದುರಿಗಿದ್ದರೂ ಜನರು ತಮ್ಮದೇ ಧಾಟಿಗಳಲ್ಲಿ ಅದನ್ನು ವಿಶ್ಲೇಷಿಸಿ, ತಮ್ಮ ತಮ್ಮ ಕೆಲಸಗಳನ್ನು ಮುಗಿಸಿಕೊಳ್ಳುವತ್ತ ಗಮನ ಹರಿಸುತ್ತಾರೆ, ಶವ ಸಂಸ್ಕಾರಕ್ಕಾಗಿ ಒಟ್ಟಾದ ಹಣ ಅವಳ ಹಸಿವನ್ನು ನೀಗಿಸಲೂ ಸಹಾಯ ಮಾಡುತ್ತದೆ. ಅಸಹಾಯಕತೆ, ಆಸೆ ಕೊನೆಗೆ ಗಟ್ಟಿಯಾಗಿ ಅಳುವಲ್ಲಿಗೆ ಕಾಡುವ ವಿಷಯವಾಗಿ ಉಳಿಯುತ್ತದೆಯಷ್ಟೆ..

    ‘ತಲೆಗೊಂದು ಕೋಗಿಲೆ’ ಎನ್ನುವ ಕತೆಯಲ್ಲಿ ಊಹೆಯೆಂಬುದು ಕಟ್ಟುವಿಕೆಗೆ ಸಹಕಾರಿಯಾಗುತ್ತದೆ, ಆದರೆ ಯೋಚನೆ ಏನನ್ನೂ ಕಟ್ಟಲಾರದು ಎಂದು ಹೇಳುತ್ತಾರೆ. ಊಹೆ ಸುಳ್ಳನ್ನು ಅಲಂಕರಿಸುತ್ತದೆ, ಸತ್ಯವನ್ನು ಸುಳ್ಳಿನ ಕೋಟೆಯಲ್ಲಿಟ್ಟು ಕಾಪಾಡುತ್ತದೆ. ಪ್ರಾಣಿ ಪಕ್ಷಿಗಳ ಹೆಸರನ್ನು ಬರೆದಿಟ್ಟ ಹಲಗೆಗಳು ಯಾರಿಗಾಗಿ ಮತ್ತು ಯಾತಕ್ಕಾಗಿ ಇವೆ ಎಂದು ಕೇಳುತ್ತಾ ಅಸ್ತಿತ್ವದ ಬಗೆಗೆ ವಿಶ್ಲೇಷಿಸಿದ್ದಾರೆ.

     ಮನಸ್ಸಿನಲ್ಲಿರುವ ಆಸೆಗಳೇ ಕನಸುಗಳಾಗುತ್ತವೆ ಎಂಬುದು ‘ಉಳಿಕೆ’ ಕತೆಯಲ್ಲಿ ವ್ಯಕ್ತವಾಗಿದೆ. ಕಣ್ಣಿಗೆ ಕಾಣುವುದಷ್ಟೇ ಸತ್ಯ ಎನ್ನುವುದೂ ಸೂಚ್ಯ. ಬೆಳಕಿನಲ್ಲಿ ಕಲ್ಪನೆ ಬೆಳೆಯಲಾರದು, ಕತ್ತಲಿನಲ್ಲಿ ಮಾತ್ರವೇ ಕಲ್ಪನೆ ಬೆಳೆಯುವುದು, ಯಾಕಂದ್ರೆ ಕತ್ತಲೆಗೆ ನಿರ್ದಿಷ್ಟ ರೂಪು ಇರುವುದಿಲ್ಲ.. ಆದರೆ ಬೆಳಕಿನಲ್ಲಿ ಜಗತ್ತು ಸೀಮಿತವಾಗುತ್ತದೆ ಎಂಬುದು ಅತ್ಯಂತ ಆಳದ ವಿಷಯ. ಮರವೊಂದು ಉದುರಿದಾಗ ಅದರಲ್ಲಿ ಗೂಡು ಕಟ್ಟಿದ್ದ ಹಕ್ಕಿಗಳೆಲ್ಲಾ ಹಾರಿಹೋಗುತ್ತವೆ ಅನ್ನುವಾಗ ಸಂಬಂಧಗಳ ಪದರಗಳು ಒಂದೊಂದೇ ಕಳಚಿಕೊಂಡಂತಾಗುತ್ತದೆ.

    ಸಾಯುವ ಕನಸೂ ಕೂಡ ಕೆಲವೊಮ್ಮೆ ಸುಂದರವಾಗಿ ಕಾಣುತ್ತದೆ ಎಂದಾಗ, ಬದುಕಿನ ಬಗೆಗಿನ ಒಬ್ಬ ವ್ಯಕ್ತಿಯ ದ್ವೇಷ ಅನಾವರಣವಾಗುತ್ತದೆ. ಅವನು ಬದುಕಿನ ಕ್ರೂರ ಆಘಾತಕ್ಕೆ ಸಿಲುಕಿ ಅದೆಷ್ಟು ನಲುಗಿರಬಹುದು ಎಂಬುದು ತಿಳಿಯುತ್ತದೆ. ಅಸಹಾಯಕತೆ, ಬಡತನ ಇದ್ದರೂ ಕೂಡ ಬಿಡದ ಸ್ವಾಭಿಮಾನ ಒಂದು ವಿಶಿಷ್ಟ ಅಂಶವಾಗಿ ಸ್ಥಾನ ಪಡೆದ ಕತೆ ‘ಚಂಬಣ್ಣನ ಬೊಂಬೆ ವ್ಯಾಪಾರ’. ಇಲ್ಲಿ ಹಣ ಕೂಡ ಗೌಣವಾಗಿದೆ ಸ್ವಾಭಿಮಾನದ ಇದಿರು..

    ‘ಅದೇ ಮುಖ’ ಎಂಬ ಕತೆಯಲ್ಲಿ ಚೌಕವನ್ನ ಚೌಕದ ಪಾಲಿಗೆ ಬಿಟ್ಟು ಚಲಿಸಲಾಗದೆ ಹೆಜ್ಜೆ ಕಿತ್ತಿಡಲಾಗದೆ ಇರುವ ಮರವನ್ನ ತಮ್ಮ ತಮ್ಮಲ್ಲೇ ಚೌಕಟ್ಟು ನಿರ್ಮಿಸಿಕೊಂಡು ಅದರಲ್ಲೇ ಒದ್ದಾಡುವ ಜನರ ಮನಃಸ್ಥಿತಿಯಯ ಚಿತ್ರಣವಿದೆ. ಯಾವುದೇ ಒಬ್ಬ ವ್ಯಕ್ತಿ, ಯಾವುದೋ ಒಂದು ಪ್ರದೇಶವನ್ನ ಅಥವಾ ಸಂಬಂಧವನ್ನ ಅತಿಯಾಗಿ ಹಚ್ಚಿಕೊಳ್ಳುವುದೆಂದರೆ ಅದು ಮಣ್ಣಿನಲ್ಲಿ ಸಿಕ್ಕಿಕೊಂಡ ಮರದ ಹಾಗೆ ಭಯಂಕರ ಹಿಂಸೆ, ಕೆಲವೊಮ್ಮೆ ಬಿಡಿಸಿಕೊಳ್ಳುವುದರಲ್ಲಿ ಮತ್ತು ಕ್ಷಮಿಸುವುದರಲ್ಲಿ ಬದುಕಿನ ಅರ್ಥ ಹುದುಗಿರಬೇಕು ಅಲ್ಲವೇ ಎಂದು ಪ್ರಶ್ನಿಸುತ್ತಾರೆ.

    ‘ಪುಟ್ಟಾರಿಯ ಮತಾಂತರ’ ನನ್ನನ್ನು ತುಂಬಾನೇ ಕಾಡಿದ ಕತೆ. ಸಂಬಂಧ ಎಂದರೇನು ಎಂಬ ಪ್ರಶ್ನೆಗೆ ಹಚ್ಚಿಕೊಂಡರೆ ಉಂಟು, ಬಿಟ್ಟರೆ ಇಲ್ಲ ಎಂಬ ಅತ್ಯಂತ ಸಮರ್ಪಕ ಉತ್ತರವನ್ನು ಕೊಟ್ಟಿದ್ದಾರೆ.  ನೆನಪುಗಳ ಮಹತ್ವವನ್ನು ಹೇಳುತ್ತಾ, ನೆನಪುಗಳು ಬೆಳೆಯದ ಯಾವ ವಸ್ತುವೂ ಸ್ವಂತದ್ದಾಗುವುದಿಲ್ಲವೇನೋ ಅನ್ನುತ್ತಾರೆ. ಧರ್ಮ ಶಾಸ್ತ್ರಗಳು ಒಬ್ಬ ಮನುಷ್ಯನ ಬದುಕನ್ನು ಕಟ್ಟಬೇಕು, ಮನಃಶಾಂತಿಯನ್ನು ನೀಡಬೇಕು. ಸಂತಸರಹಿತ ಧರ್ಮ ಆಚರಣೆ ಮತ್ತು ಕಟ್ಟಳೆಗಳು ಬದುಕಿನ ಅರ್ಥದಿಂದ ಬಲು ದೂರ ಎಂಬುದು ಸೂಕ್ಷ್ಮವಾಗಿ ಹೇಳಲ್ಪಟ್ಟಿದೆ.

    ಎಚ್ಚೆಸ್ವಿ ಅವರ ಪ್ರತಿಯೊಂದು ಕತೆಯಲ್ಲಿಯೂ ಹಳ್ಳಿಯ ಪರಿಸರದ ಸೊಗಡಿದೆ. ಮನುಷ್ಯ ಸಂಬಂಧಗಳ ವಿವಿಧ ಸ್ತರಗಳ ಜೀವನಾಡಿಯಂತೆ  ಅವರ ಕತೆಗಳಲ್ಲಿನ ಪಾತ್ರಗಳು ಮಿಡಿಯುತ್ತವೆ. ವಿಭಿನ್ನ ಮನಃಸ್ಥಿತಿಯ ಸಂವೇದಿನಿಯಾಗಿ ನಿಲ್ಲುತ್ತವೆ. ಒಂದಷ್ಟು ಕತೆಗಳು ಮೇಲ್ನೋಟಕ್ಕೆ ಸಾಮಾನ್ಯವಾಗಿರುವಂತೆ ಕಂಡರೂ  ಆಳ ಬೇರೆಯದೇ ಇದೆ. ಮೇಲ್ಪದರ ಕಳಚಿ ಒಳಗಿಳಿದರೆ ಅದರ ಅನುಭೂತಿಯೇ ಬೇರೆ. ಹಲವಾರು ವಿಷಯಗಳು ಅವ್ಯಕ್ತವಾಗಿಯೂ ವ್ಯಕ್ತವಾಗಿರುವುದು ಅವರ ಕತೆಗಳ ಸೌಂದರ್ಯ. ಹೀಗಾಗಿ ಅವರ ಪ್ರತೀ ಕತೆಯೂ ತನ್ನ ಪ್ರತ್ಯೇಕತೆಯನ್ನ ಉಳಿಸಿಕೊಂಡಿದೆ...

                                                                                                                                             ~‘ಶ್ರೀ’
                                                                                                                                                 ತಲಗೇರಿ

ಶನಿವಾರ, ಜುಲೈ 30, 2016

"ಬಿನ್ನಹ"...

ಖಾಲಿ ಹೆದ್ದಾರಿಯಲಿ
ಗೆಜ್ಜೆ ಸೋಕಿ ಬಂದ ತಂಗಾಳಿ
ಎಲೆಗಳೆದೆಯ ಮೆದೆಯಲ್ಲಿ
ಮುಖ ಹುದುಗಿಸಿದ ಹೂಗಳಿಗೆ
ಹೇಳುತ್ತಿತ್ತು ಕೂಜನದ ಕತೆಯ..
ಅದು ನಿನ್ನದೇ ವಿಷಯ...

ನಂಬಿರಲಿಲ್ಲ ನಾನೂ
ನೀ ಕುಂಚ ಹಿಡಿವವರೆಗೆ
ಅರೆಗಂದು ಬಣ್ಣದ ಕನಸ ಇದಿರು..
ದಿನನಿತ್ಯ ಜಾತ್ರೆಯೀಗ
ಗದ್ದಲದ ನಡುವೆಯೂ
ಕಣ್ತುಂಬಿಕೊಳಲು ನೀನೊಂದು ತೇರು..
ಬಿದಿಗೆಯಾ ರಾತ್ರಿಯಲಿ
ಸ್ವೇದದಲಿ ನೆನೆದಿತ್ತು ನಾಚಿಕೆಯ ನವಿರು..

ಚಂದ್ರ ಸೊಕ್ಕುತಿಹ
ನಿನ್ನ ಬೆವರ ಹನಿಗಳ ಬಿಂಕಕ್ಕೆ
ಲೆಕ್ಕವಿಡಬೇಡ ಆಕಾಶದಿಂದುದುರುವ
ಜೊಂಪೆ ಜೊಂಪೆ ನಕ್ಷತ್ರಗಳ..
ಕಿಟಕಿ ಪರದೆಯಲಿ ಇರಲಿ
ಉತ್ಸವಕೆ ಮುಗಿಲ ಫಸಲು..

ಬೆಳಕಿನ ಮೋಹದಿಂದಲ್ಲ
ಪುಟ್ಟ ಹಣತೆ ಹಚ್ಚಿ ನಕ್ಕಿದ್ದು..
ಹೀಗೊಮ್ಮೆ ನೋಡಿಕೊಳಲು
ನಮ್ಮೀರ್ವರ ನೆರಳು ಬೆಸೆವುದ, ಮೊದಲು..
ನಿನ್ನ ಅಂಗಾಲ ಮೇಲೆ
ಒಂದರೆಗಳಿಗೆ
ಬೆರಳ ಪಲ್ಲವಿ ಬರೆವ
ಹಕ್ಕೀಗ ನನಗೆ ದೊರೆಯಬಹುದೇ..
ಪ್ರೀತಿಯಲಿ
ಕವಿಯಾಗುವುದು ನನಗೂ ಹೊಸದೇ!...

                                    ~‘ಶ್ರೀ’
                                        ತಲಗೇರಿ

ಭಾನುವಾರ, ಜುಲೈ 24, 2016

"ಕರೆ"...

ಎದೆಯೆದೆಯ ಬದು ದಾಟಿ
ಯಾವ ದಿಕ್ಕಲೋ ಒಂದು ಭೇಟಿ..
ಅತ್ತ ವಾರಿಧಿ ದೂರದಳತೆ
ಕವಲು ಕಲೆತು ಕಡಲ ಕವಿತೆ..
ಗರ್ಭದಲೇ ಬಿರಿದು
ಹಾದಿಯುದ್ದ ಟಿಸಿಲು, ಮತ್ತೆ ಒಂದೇ ಉಸಿರು..

ಒರಟು ಚರ್ಮದ ಬೆವರ ದಾರಿ
ಯಾವ ಉಳಿಯ ಬಿಸಿಯು ಜಾರಿ..
ಹೊಸತು ರೂಪ, ಹಡೆದ ಮೊದಲಿಗೆ
ಬಿಡದೇ ಮಿಸುಕುವ ಕಸುವು, ಎದುರಿಗೆ..
ಅರ್ಧದಲೇ ಮುರಿದು
ಬೆರಳು ಬಿಕ್ಕುವ ಸಮಯ, ನೆನೆದು ಸ್ಥಿರವದು ಹೃದಯ...

ಮಿಣುಕು ದೀಪದಿ ನೇಯ್ದು ಆಸೆಯ
ಯಾವ ಮಣ್ಣಲೋ ಕನಸ ಸಂಚಯ..
ಬಿಸಿಲ ತಾಪ, ಒಡೆದ ಗಳಿಗೆ
ಬಣ್ಣ ಬಳಿವುದು ಮೈಗೆ, ಕೊನೆಗೆ..
ಚಿಪ್ಪಿನಲೇ ಕಮರಿ
ಬೇರು ಬಿಡದಿರೆ ಹೇಗೆ, ಕಪ್ಪು ತಂಪಿನ ಕಾಯ!...

ಎಲ್ಲ ಇರುವಿನ ಹೆಗಲ ತುದಿಗೂ
ಜೋತುಬಿದ್ದ ಪುಟ್ಟ ಗಡಿಯಾರ..
ಪಿಸುದನಿಯ ಪರಿಮಿತಿಗೆ
ವೃತ್ತ ದಾಟುವ ಬಯಕೆ
ಹರಡಬಲ್ಲೆಯಾ ಕೇಳಿ, ಪಲುಕ ಲಹರಿ...

                                  ~‘ಶ್ರೀ’
                                      ತಲಗೇರಿ

ಬುಧವಾರ, ಜುಲೈ 20, 2016

"ಬೆರಗು"...

ಘಮ್ಮೆಂದು ಸದ್ದಿಲ್ಲದೆ
ಬಿರಿದ ಕತ್ತಲೆಯ ನಡುವಲ್ಲಿ
ಬಿತ್ತಿಹೆನು ಬೆಳಕಿನ ಬೀಜ..
ಗರ್ಭದಲಿ ಧಾತು
ಹೊರ ಕವಚ ಕಳಚಿ
ದಿಕ್ಕುಗಳ ಪಾದ ಧೂಳಿಯ
ಕಣಕೆ ಕೊಬ್ಬಿರಲು
ಒಸರುವುದು ಕಪ್ಪು ರಸವೋ,
ಇಲ್ಲಾ, ಬಿಳಿಯ ಬೂದಿಯೋ!
ಹುಡುಕಿದರೆ ನೆಪಕಷ್ಟೇ
ಎದೆಗೊಂದು ಬೇಲಿ...

ಇಹುದೇ, ಪೊರೆವ ಸದ್ದಿನ
ತೊದಲು ಕಡಲಿಗೆ
ಅಲೆಯ ಹಚ್ಚಿಕೊಳಲೊಂದು
ತಟದ ತುಡಿತ..
ಅರ್ಧ ರೆಕ್ಕೆಯ ಸುಳಿಗೆ
ಹುಟ್ಟಿಕೊಂತೇ
ಮುಕ್ತವಾಗುವ ಬಯಕೆ..
ಗಾಳಿಗುಂಟ ಅಂಟಿಬಂದು
ಕರೆವ ಹೆಜ್ಜೆ ಮೊರೆತ!..

ಹಡೆದ ಒಗರು ತಿಮಿರ
ಅರೆ ನಾಚಿಕೆಯ ಮುಗುಳು
ಅಲ್ಲಲ್ಲಿ ಬೇಲಿ ವೃತ್ತದಲಿ..
ಬೇರ ನರದಲಿ
ಹರಿದ ದ್ಯುತಿಗೆ
ಯಾರ ಕಸುವಿನ ಬಿಸಿಲು..
ಒಲವು ಹುಟ್ಟಿದ್ದೋ, ಹುಟ್ಟಿಸಿದ್ದೋ!..
ಬಿಕ್ಕುವಿಕೆ, ದನಿಯಿಲ್ಲದ ಸದ್ದು..
ಇಲ್ಲದಿದ್ದರೂ ಇದೆ ಬೆರಗು
ಒಳಗೂ ಹೊರಗೂ
ಅಂತರದ ನಡುವಲ್ಲಿ!...

                   ~‘ಶ್ರೀ’
                     ತಲಗೇರಿ

ಮಂಗಳವಾರ, ಜೂನ್ 7, 2016

"ಅಲೆಮಾರಿ"...

ಚಪ್ಪರದ ತೂತಿಂದ
ಸ್ಖಲಿತ ಭ್ರಮೆಯ ರಸಗವಳ
ತುಂಬಿಕೊಳಲೆಂದು ನಿಲ್ಲದಾ ಓಟ..
ಒಂದೇ ನೀಲಿ ಹಾಸಿನ ಅಡಿಗೆ
ವ್ಯಾಪ್ತಿಗಳ ಸಹಿಯಿಹುದೇ!
ದಿಕ್ಕು ಬದಲಿಸುವ ಹಣತೆಗಳಿಗೆ
ನಾ ಗೋಡೆ ಮೇಲಣ ನೆರಳೇ?!..

ಅವಳ ದೇಹದ ಬೀದಿಯ
ಉಬ್ಬು ತಗ್ಗುಗಳಲ್ಲಿ ಇಣುಕಿದಾಗ
ಸ್ವೇದ ಟಿಸಿಲೊಡೆವ ಹಾದಿಯಲಿ
ಅದೆಂಥ ಕುಸುರಿಯೋ!
ಖಾಸಗಿ ಬಿಡಾರ ಹೂಡಲು
ತುಸು ತುಸುವೇ
ಋತುಗಳಿಗೆ ತುತ್ತನಿಡುತಿಹ
ಮೈಧೂಪ ಲಹರಿಯೋ!..
ನಿಯಮಿತವಲ್ಲ;
ಆಗಬಹುದು ನಾಳೆಯೇ ನಿರ್ವಾತ...

ಸುಟ್ಟಿರುವ ಹೂವ ಗಂಧ
ಸತ್ತಿದ್ದಾದರೂ ಹೇಗೆ?
ಅಥವಾ ಇಲ್ಲೆಲ್ಲೋ ಗಾಳಿಯಲ್ಲಿ
ಅನಾಥವಾಗಿ ಅಲೆಯುತ್ತಿರಬಹುದೇ
ಮತ್ತೊಂದು ಹೂವರಳಲು;
ಆತ್ಮದಂತೆ!...

ನಿಶೆಗೀಗ ಹಲವು ಬಣ್ಣ
ಬೆಳಕಿನಾ ಅಮಲು ನಡು ನೆತ್ತಿಗೇರಿ..
ನನ್ನೊಳಗೆ ನಾ ಇಳಿದಂತೆ
ಅರ್ಥವಾಗದ ಗದ್ದಲ ಪ್ರತಿ ಸಾರಿ..
ಈಗಲೂ
ಅಂತರ್ ಬಹಿರ್ ಮಧ್ಯಂತರದಿ
ನಾ ಅಲೆಮಾರಿ!...

                             ~‘ಶ್ರೀ’
                                 ತಲಗೇರಿ